ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಕರ್ನಾಟಕ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಜಾರಿಗೆ ತಂದಿರುವ ರೈಸ್, ಬೇಡ ಬ್ರೋ ಅಭಿಯಾನ ಅತ್ಯಂತ ಶ್ಲಾಘನೀಯವಾಗಿದೆ. ಯುವಶಕ್ತಿಯು ಡ್ರಗ್ಸ್ ಅನ್ನು ತಿರಸ್ಕರಿಸಿ, ಮಾಹಿತಿ ನೀಡಿ ಸಂತ್ರಸ್ತರಿಗೆ ಬೆಂಬಲವಾಗಿ ಮತ್ತು ಸಮಾಜವನ್ನು ಸಬಲೀಕರಿಸುವ ಮೂಲಕ ಈ ಹೋರಾಟದಲ್ಲಿ ಸಕ್ರಿಯವಾಗಿ ಕೈಜೋಡಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಕರೆ ನೀಡಿದರು.
ನಗರದ ಎಚ್.ಜಿ.ಕಾಲೇಜಿನ ಸಭಾಭವನದಲ್ಲಿ ವಿಜಯಪುರ ಜಿಲ್ಲಾ ಪೊಲೀಸ್, ಇಂಡಿ ಉಪವಿಭಾಗ ಹಾಗೂ ಸಿಂದಗಿ ಪೊಲೀಸ್ ಠಾಣೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ರೈಸ್, ಬೇಡ ಬ್ರೋ ಡ್ರಗ್ಸ್ ಮುಕ್ತ ಅಭಿಯಾನದ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವ ಪೀಳಿಗೆಯು ಮಾದಕ ವ್ಯಸನವೆಂಬ ಸಾಮಾಜಿಕ ಪಿಡುಗಿಗೆ ಬಲಿಯಾಗದಂತೆ ತಡೆಯುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ, ಉತ್ತಮ ಮೌಲ್ಯಗಳನ್ನು ಬೆಳೆಸುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ. ಯುವಜನರು ಮಾದಕ ವ್ಯಸನದ ದುಷ್ಪರಿಣಾಮಗಳಿಂದ ದೂರವಿದ್ದು, ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಸಕ್ರಿಯವಾಗಿ ಕೈಜೋಡಿಸಬೇಕು ಎಂದರು.
ಈ ವೇಳೆ ತಹಶೀಲ್ದಾರ ಕರೆಪ್ಪ ಬೆಳ್ಳಿ ಹಾಗೂ ಆರೋಗ್ಯ ಇಲಾಖೆಯ ಎಸ್.ಡಿ.ಕುಲಕರ್ಣಿ ಮಾತನಾಡಿ, ಕರ್ನಾಟಕ ರಾಜ್ಯವನ್ನು ವ್ಯಸನ ಮುಕ್ತ ರಾಜ್ಯವನ್ನಾಗಿ ಮಾಡಲು ಸರ್ಕಾರ ಈ ಕಾರ್ಯಕೈಗೊಂಡಿರುವುದು ಸಂತಸ ತಂದಿದೆ. ಇಂತಹ ಕಾರ್ಯಕ್ರಮಗಳಿಂದ ಅದೆಷ್ಟೋ ಯುವ ಜನಾಂಗ ಸುಂದರ ಬದುಕು ಕಟ್ಟಿಕೊಳ್ಳಲು ಸಹಾಯವಾಗುತ್ತದೆ. ದುಶ್ಚಟಗಳು ವ್ಯಕ್ತಿಯ ಬದುಕು, ಕುಟುಂಬ ಮಾತ್ರವಲ್ಲದೆ ಸಮಾಜದ ಮೇಲೂ ನೇರ ಪರಿಣಾಮ ಬೀರುತ್ತದೆ. ಮಾದಕ ವಸ್ತು ಸೇವನೆ ವ್ಯಕ್ತಿಯ ಮೆದುಳು, ದೈಹಿಕ, ಮಾನಸಿಕ ಆರೋಗ್ಯ ಹಾಗೂ ಸಾಮಾಜಿಕ ಬದುಕಿಗೂ ಮಾರಕವಾಗಿದೆ ಎಂದರು.
ಕಾಲೇಜಿನ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.
ವೇದಿಕೆ ಮೇಲೆ ಆಲಮೇಲ ಗ್ಯಾರಂಟಿ ಯೋಜನೆಯ ಅಧ್ಯಕ್ಷ ಅಶೋಕ ಕೊಳಾರಿ, ರವಿರಾಜ ದೇವರಮನಿ, ಎಲೈಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೈಬೂಬ ಅಸಂತಾಪೂರ, ರೋಹಿಣಿ ನ್ಯಾಮಗೊಡ ಇದ್ದರು. ಸಿಂದಗಿ ಸಿಪಿಆಯ್ ಸುನೀಲ ಮೂಲಿಮನಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.
ಪಿಎಸ್ಆಯ್ ಶ್ರೀಕಾಂತ ಕಾಂಬಳೆ ವಂದಿಸಿದರು. ಉಪನ್ಯಾಸಕ ಸಿದ್ದಲಿಂಗ ಕಿಣಗಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಉಪನ್ಯಾಸಕರಾದ ಸತೀಶ ಪಾಟೀಲ, ಎಂ.ಎನ್.ಅಜ್ಜಪ್ಪ, ಶಾಂತೂ ಬಿರಾದಾರ, ಮುಕ್ತಾಯಕ್ಕ ಕತ್ತಿ, ಎಫ್.ಎ.ಹಾಲಪ್ಪನವರ, ಎ.ಆರ್.ಸಿಂದಗಿಕರ, ಎಸ್.ಎಸ್.ಚವ್ಹಾಣ, ಎ.ಬಿ.ಪಾಟೀಲ, ಗಂಗಾರಾಮ ಪವಾರ, ದೈಹಿಕ ಶಿಕ್ಷಣ ಉಪನ್ಯಾಸಕ ಸತೀಶ ಬಸರಕೋಡ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

