ಉದಯರಶ್ಮಿ ದಿನಪತ್ರಿಕೆ
ಬಾಗಲಕೋಟೆ (ಜಮಖಂಡಿ): ನಿವೃತ್ತ ನೌಕರರ ಪಿಂಚಣಿ ಹಾಗೂ ನಿವೃತ್ತಿ ಸೌಲಭ್ಯಗಳ ಕಡತ ವಿಲೇವಾರಿಗಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಜಮಖಂಡಿ ತಾಲೂಕು ಖಜಾನೆ ಕಚೇರಿಯ ತಾಲೂಕು ಖಜಾನಾಧಿಕಾರಿ ಎಸ್.ಎಸ್. ಬಿರಾದಾರ ಹಾಗೂ ಸಿಬ್ಬಂದಿ ವಿನಾಯಕ ಹೊನವಾಡ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿ ವಶಕ್ಕೆ ಪಡೆದರು.
ಚೇತನ ತರತರಿ ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದರು. ದೂರಿನ ಪ್ರಕಾರ, ನಿವೃತ್ತ ನೌಕರರ ಪಿಂಚಣಿ ಮತ್ತು ಇತರೆ ನಿವೃತ್ತಿ ಸೌಲಭ್ಯಗಳನ್ನು ಮಂಜೂರು ಮಾಡಲು ಆರಂಭದಲ್ಲಿ ₹70 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಬಳಿಕ ₹40 ಸಾವಿರಕ್ಕೆ ಒಪ್ಪಂದ ಮಾಡಿಕೊಂಡಿದ್ದರು ಎನ್ನಲಾಗಿದೆ.
ಫಿರ್ಯಾದಿದಾರರಿಂದ ₹40 ಸಾವಿರ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದು, ಹಣವನ್ನು ವಶಪಡಿಸಿಕೊಂಡರು. ಬಳಿಕ ಕಚೇರಿಯಲ್ಲಿ ಅಗತ್ಯ ದಾಖಲೆಗಳ ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಂಡರು.
ಈ ಕಾರ್ಯಾಚರಣೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.

