ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಶಿಲಾಧರ ಎನ್. ಜಾಧವ ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಶಿಕ್ಷಣವೆಂದರೆ ಕೇವಲ ಅಂಕಗಳನ್ನು ಗಳಿಸುವುದಲ್ಲ. ಉತ್ತಮ ವ್ಯಕ್ತಿತ್ವ, ಮಾನವೀಯತೆ, ಶಿಸ್ತು ಹಾಗೂ ಸಮಾಜದ ಬಗ್ಗೆ ಕಾಳಜಿ ಬೆಳೆಸಿಕೊಳ್ಳುವುದೂ ಶಿಕ್ಷಣದ ಮುಖ್ಯ ಉದ್ದೇಶವಾಗಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಶಿಲಾಧರ ಎನ್. ಜಾಧವ ಹೇಳಿದರು.
ಸಿಂದಗಿ ನಗರದ ಆರ್.ಡಿ. ಪಾಟೀಲ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಪಠ್ಯಪೂರಕ ಚಟುವಟಿಕೆಗಳು, ರೋವರ್ ಮತ್ತು ರೇಂಜರ್, ಭಾರತ ಸೇವಾದಳ ಹಾಗೂ ಎನ್.ಎಸ್.ಎಸ್. ಘಟಕಗಳ ಉದ್ಘಾಟನೆ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಮಹಾವಿದ್ಯಾಲಯವು ಪ್ರತಿವರ್ಷ ಉತ್ತಮ ಫಲಿತಾಂಶ ನೀಡುತ್ತಿದ್ದು, ಶಿಸ್ತು, ಸಂಸ್ಕಾರ ಮತ್ತು ಗುಣಮಟ್ಟದ ಶಿಕ್ಷಣಕ್ಕಾಗಿ ಹೆಸರುವಾಸಿಯಾಗಿದೆ. ಇಲ್ಲಿನ ವಿದ್ಯಾರ್ಥಿಗಳು ರಾಜ್ಯ ಹಾಗೂ ದೇಶದ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದು ಹೇಳಿದರು.
ಈ ವೇಳೆ ವಿಜಯಪುರದ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಹಾಗೂ ನರರೋಗ ತಜ್ಞ ಡಾ.ವಿರುಪಾಕ್ಷಪ್ಪ ಬಿರಾದಾರ ಮಾತನಾಡಿದರು.
ಇದೇ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭದಲ್ಲಿ ಸಾರಂಗಮಠದ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಸಮ್ಮುಖ ವಹಿಸಿದ್ದರು. ಮಹಾವಿದ್ಯಾಲಯದ ಪ್ರಾಚಾರ್ಯ ಬಿ.ಎಂ.ಸಿಂಗನಳ್ಳಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಪಿ.ವಿ.ಮಹಲಿನಮಠ, ಎಸ್.ಎಸ್.ಜಾಧವ, ಡಾ.ಶರಣಬಸವ ಜೋಗೂರ, ಬಿ.ಬಿ. ಜಮಾದಾರ, ಶಿವಶರಣ ಬೂದಿಹಾಳ, ಡಾ.ವಿ.ಪಿ. ನಂದಿಕೋಲ, ಎನ್.ಬಿ. ಪೂಜಾರಿ, ವಿ.ಕೆ.ಹಿರೇಮಠ, ಎಂ.ಐ. ಮುಜಾವರ, ಸಂಗಮೇಶ ಮಾರ್ಸನಳ್ಳಿ, ಶಿವರಾಜ ಕುಂದಗೋಳ, ಪ್ರಸನ್ನ ಜೋಗೂರ ಸೇರಿದಂತೆ ಭೋದಕ ಭೋದಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು. ಚರ್ಚಾಕೂಟ ವಿಭಾಗದ ಕಾರ್ಯಾಧ್ಯಕ್ಷ ಜೆ.ಎಂ.ಗಾಣಗೇರ ಸ್ವಾಗತಿಸಿ ಪರಿಚಯಿಸಿದರು. ರಾಹುಲ ನಾರಾಯಣಕರ, ಸ್ನೇಹಾ ಪಾಟೀಲ ಹಾಗೂ ನಿಖಿತಾ ಹಿರೇಮಠ ನಿರೂಪಿಸಿದರು. ನಾಜ್ಮಾ ಮೇಲಿನಮನಿ ವಂದಿಸಿದರು.

