ಎಲ್ಲಾ ೨೬ ಗೇಟ್ ತೆರೆದ ಆಲಮಟ್ಟಿ ಜಲಾಶಯ | ೧.೧೦ ಲಕ್ಷ ಕ್ಯೂಸೆಕ್ ನೀರು ಬಿಡುಗಡೆ
ಉದಯರಶ್ಮಿ ದಿನಪತ್ರಿಕೆ
ಆಲಮಟ್ಟಿ: ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮುಂದುವರಿದ ಭಾರಿ ಮಳೆಯಿಂದಾಗಿ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರಿಂದ ಕೃಷ್ಣಾ ಕೊಳ್ಳದ ಪ್ರಮುಖ ಜಲಾಶಯವಾದ ಆಲಮಟ್ಟಿ ಜಲಾಶಯ ಬಹುತೇಕ ಭರ್ತಿಯಾಗಿದೆ.
ಒಳಹರಿವು ಗಣನೀಯವಾಗಿ ಹೆಚ್ಚಾದ ಹಿನ್ನೆಲೆಯಲ್ಲಿ ಈ ವರ್ಷ ಇದೇ ಮೊದಲ ಬಾರಿಗೆ ಜಲಾಶಯದ ಎಲ್ಲಾ ೨೬ ಗೇಟ್ಗಳನ್ನು ತೆರೆದು ಕೃಷ್ಣಾ ನದಿಗೆ ನೀರು ಹರಿಸಲಾಗುತ್ತಿದೆ.
೧೨೩.೦೮೧ ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಆಲಮಟ್ಟಿ ಜಲಾಶಯದಲ್ಲಿ ಸದ್ಯ ಸುಮಾರು ೧೧೮ ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ನೀರಿನ ಮಟ್ಟ ೫೧೯.೩೪ ಮೀಟರ್ಗೆ ತಲುಪಿದ್ದು, ಗರಿಷ್ಠ ಮಟ್ಟದ ಸಮೀಪದಲ್ಲಿದೆ. ಬುಧವಾರ ರಾತ್ರಿ ೭.೩೦ರ ವೇಳೆಗೆ ಜಲಾಶಯದ ಎಲ್ಲಾ ೨೬ ಗೇಟ್ಗಳನ್ನು ತೆರೆಯಲಾಗಿದ್ದು, ಹೆಚ್ಚುವರಿ ನೀರನ್ನು ನಿಯಂತ್ರಿತವಾಗಿ ನದಿಗೆ ಹರಿಸಲಾಗುತ್ತಿದೆ.
೧.೧೦ ಲಕ್ಷ ಕ್ಯೂಸೆಕ್ ಹೊರಹರಿವು: ಪ್ರಸ್ತುತ ಆಲಮಟ್ಟಿ ಜಲಾಶಯಕ್ಕೆ ೮೯,೩೬೧ ಕ್ಯೂಸೆಕ್ ನೀರು ಒಳಹರಿವಾಗುತ್ತಿದೆ. ಜಲಾಶಯದ ವಿದ್ಯುದಾಗಾರದ ಮೂಲಕ ೪೨,೫೦೦ ಕ್ಯೂಸೆಕ್ ಮತ್ತು ೨೬ ಗೇಟ್ಗಳ ಮೂಲಕ ೬೭,೫೦೦ ಕ್ಯೂಸೆಕ್ ಸೇರಿದಂತೆ ಒಟ್ಟು ೧,೧೦,೦೦೦ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗುತ್ತಿದೆ.
ಒಳಹರಿವಿನ ಪ್ರಮಾಣದಲ್ಲಿ ಮತ್ತಷ್ಟು ಏರಿಳಿತವಾಗುವ ಸಾಧ್ಯತೆ ಇರುವುದರಿಂದ ಜಲಾಶಯದ ನೀರಿನ ಮಟ್ಟ ಮತ್ತು ಒಳಹರಿವಿನ ಮೇಲೆ ಅಧಿಕಾರಿಗಳು ನಿರಂತರ ನಿಗಾ ವಹಿಸಿದ್ದಾರೆ.
ರೈತರಿಗೆ ಸಂತಸ
ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಯ ಒಳಹರಿವು ನಿರಂತರವಾಗಿ ಏರಿಕೆಯಾಗಿದೆ. ಇದರ ಪರಿಣಾಮ ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹದಲ್ಲಿಯೂ ತ್ವರಿತವಾಗಿ ಹೆಚ್ಚಳ ಕಂಡುಬಂದಿದೆ.
ಕೆಲವೇ ದಿನಗಳ ಹಿಂದೆ ನೀರಿನ ಕೊರತೆ ಮತ್ತು ಮುಂಗಾರು ಹಂಗಾಮಿನ ನೀರಾವರಿ ಕುರಿತು ಆತಂಕ ವ್ಯಕ್ತವಾಗಿತ್ತು. ಇದೀಗ ಜಲಾಶಯ ಬಹುತೇಕ ಭರ್ತಿಯಾಗಿರುವುದು ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಸಂತಸ ಮೂಡಿಸಿದೆ.
ಮುನ್ನೆಚ್ಚರಿಕೆ
ಜಲಾಶಯದ ಒಳಹರಿವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಹಂತ ಹಂತವಾಗಿ ಹೊರಬಿಡಲಾಗುತ್ತಿದೆ. ಎಲ್ಲಾ ೨೬ ಗೇಟ್ಗಳನ್ನು ತೆರೆಯುವ ಮೂಲಕ ನೀರು ಹರಿಸಲಾಗುತ್ತಿರುವುದರಿಂದ ಕೃಷ್ಣಾ ನದಿಯ ಕೆಳಭಾಗದ ಜನರು ನದಿ ಪಾತ್ರಕ್ಕೆ ಇಳಿಯದಂತೆ ಮತ್ತು ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಬಹುತೇಕ ಪೂರ್ಣಗೊಂಡಿರುವುದರಿಂದ ಮುಂಬರುವ ದಿನಗಳಲ್ಲಿ ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ, ಕೃಷ್ಣಾ ನದಿಯ ಒಳಹರಿವು ಮತ್ತು ಜಲಾಶಯದ ನೀರಿನ ಮಟ್ಟವನ್ನು ಆಧರಿಸಿ ಹೊರಹರಿವಿನ ಪ್ರಮಾಣವನ್ನು ನಿಯಂತ್ರಿಸುವ ಸಾಧ್ಯತೆ ಇದೆ.

