ವಿಜಯಪುರ ದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜೀವ ಬಹು ಅಮೂಲ್ಯವಾಗಿದ್ದು, ವಾಹನ ಚಾಲಕರು ನಿರ್ಲಕ್ಷ್ಯ ವಹಿಸದೇ ಜಾಗರೂಕತೆಯಿಂದ ವಾಹನ ಚಲಾಯಿಸುವಂತೆ ಹಾಗೂ ರಸ್ತೆ ನಿಯಮ ಪಾಲಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಾರ್ವಜನಿಕರಲ್ಲಿ ಜಾಗೃತಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಅಪಘಾತ ವಲಯಗಳನ್ನು ಗುರುತಿಸಿ ರಸ್ತೆ ಅಪಘಾತ ತಡೆಗೆ ಕ್ರಮ ವಹಿಸಬೇಕು ಎಂದರು.
ಜೊತೆಗೆ ನಿಯಮಿತವಾಗಿ ಸಭೆ ನಡೆಸುವ ಮೂಲಕ ಅಪಘಾತ ತಡೆಗೆ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುರುತಿಸಲಾದ ಅಪಘಾತ ವಲಯದಲ್ಲಿ ಅಂಬುಲೆನ್ಸ್ ಇರಬೇಕು. ರಸ್ತೆ ಫಲಕ ಅಳವಡಿಸಿ, ತುರ್ತು ಸಂದರ್ಭದ ಅಗತ್ಯ ಮಾಹಿತಿ ವಿವರ ಹೊಂದಿರಬೇಕು ಎಂದರು.
ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ಮತ್ತು ಅವುಗಳಿಂದ ಸಂಭವಿಸುವ ಸಾವುಗಳನ್ನು ತಡೆಯುವ ನಿಟ್ಟಿನಲ್ಲಿ ‘ಸೇವ್ ಲೈಫ್ ಫೌಂಡೇಶನ್ ಸಂಸ್ಥೆಯು ರೋಡ್ ಸೇಫ್ಟಿ ಆಕ್ಷನ್ ಪ್ಲಾನ್ ಎಂಬ ವಿಶೇಷ ಅಧ್ಯಯನ ವರದಿ ಬಿಡುಗಡೆ ಮಾಡಿದೆ. ೨೦೨೩ ಮತ್ತು ೨೦೨೪ ರ ಇ-ಡಾರ್ ವ್ಯವಸ್ಥೆಯ ಆಧಾರದ ಮೇಲೆ ಈ ವಿವರವಾದ ವರದಿ ಸಿದ್ಧಪಡಿಸಲಾಗಿದೆ. ವರದಿಯಲ್ಲಿ ತಿಳಿಸಿರುವ ಮಾಹಿತಿ ಒದಗಿಸಿ ಅಪಘಾತ ವಲಯಗಳ ರಸ್ತೆ ಮಾರ್ಗಗಳಲ್ಲಿ ಗುರುತಿಸಲಾದ ಅಪಾಯಕಾರಿ ಸ್ಥಳ ಹಾಗೂ ಸಂಚಾರ ನಿಯಮಗಳ ಉಲ್ಲಂಘನೆಯಾಗದಂತೆ ಮುಂಜಾಗ್ರತೆ ವಹಿಸಿ ಸಭೆಯ ನಡವಳಿಯಂತೆ ಕಾರ್ಯ ಯೋಜನೆ ಸಿದ್ದಪಡಿಸಿಕೊಂಡು ಪ್ರತಿಯೊಬ್ಬ ಅಧಿಕಾರಿಯೂ ಕಾರ್ಯೋನ್ಮುಖರಾಗಬೇಕು. ಜೊತೆಗೆ ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಮತ್ತು ಅಪಘಾತಗಳನ್ನು ನಿಯಂತ್ರಿಸಬೇಕು ಎಂದು ಜಿಲ್ಲಾಧಿಕಾರಿಗಳು ವಿವಿಧ ಇಲಾಖೆಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಮಾತನಾಡಿ, ಎಲ್ಲ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಿ ಅಪಘಾತ ತಡೆಗೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ, ಪ್ರೊಬೆಷನರ್ ಐಎಎಸ್ ಅಧಿಕಾರಿ ಅಭಿಷೇಕ ಸೇಹರ್, ಇಂಡಿ ಉಪ ವಿಭಾಗಾಧಿಕಾರಿಗಳಾದ ಚಿದಾನಂದ ಗುರುಸ್ವಾಮಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಿ ಎಸ್ ಪೊಲೀಸ್ ಪಾಟೀಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಲ್ಲನಗೌಡ ಬಿರಾದಾರ, ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಮಲ್ಲಿಕಾರ್ಜುನ ಕುಸನಾಳ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಿಂ ಬಾಬಾ ಮುದ್ದೇಬಿಹಾಳ, ಅಬಕಾರಿ ಉಪ ಆಯುಕ್ತ ಮುರಳೀಧರ್, ಸಮಾಜಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಪೀಟರ್ ಅಲೆಕ್ಸಾಂಡರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಅಧಿಕಾರಿಗಳು ಉಪಸ್ಥಿತರಿದ್ದರು.

