ಶಾಲಾವರಣದಲ್ಲಿ ತಂಬಾಕು ಉತ್ಪನ್ನ ನಿಷೇಧ | ದಿಢೀರ್ ದಾಳಿ ನಡೆಸಿ ಬಿಗಿ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪ್ರತಿ ಶಾಲಾ ಆವರಣದಿಂದ ಒಂದು ನೂರು ಮೀಟರ್ ಒಳಗಡೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ. ಹಾಗಾಗಿ ಶಾಲಾ ಶಿಕ್ಷಣ ಇಲಾಖೆ ಕೋಟ್ಪ ಕಾಯ್ದೆ ಪರಿಣಾಮಕಾರಿ ಜಾರಿಗೆ ಕ್ರಮವಹಿಸಬೇಕು. ಈ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಮಿತಿ ಕಾಲ-ಕಾಲಕ್ಕೆ ದಿಢೀರ್ ದಾಳಿ ನಡೆಸಿ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಮಾದಕ ವಸ್ತು ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋಟ್ಪಾ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಶಾಲಾ ಆವರಣದ ತಾಲೂಕು ಸಮಿತಿಗೆ ದೂರು ಬಂದ ತಕ್ಷಣ ಕ್ರಮವಹಿಸಿ,ಶಾಲಾ ಅಭಿವೃದ್ಧಿ ಸಮಿತಿ ಒಳಗೊಂಡಂತೆ ಶಾಲಾ ಶಿಕ್ಷಕರಿಗೆ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಈ ಮಾಹಿತಿ ನೀಡಬೇಕು. ಸಾಧ್ಯವಿದ್ದರೆ ಪೊಲೀಸ್ ಇಲಾಖೆಯ ಸಹಾಯ ಪಡೆದುಕೊಂಡರೆ, ಈ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ಮಾದಕ ವಸ್ತು ನಿಯಂತ್ರಣ ಸಮಿತಿಯು ಆಗಾಗ ಸಭೆ ಸೇರಿ ಜಾಗೃತಿ ಮೂಡಿಸಬೇಕು. ಮಾದಕ ವಸ್ತು ನಿಯಂತ್ರಣದ ಬಗ್ಗೆಯೂ ವ್ಯಾಪಕ ಪ್ರಚಾರ ಮಾಡಿ ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ಇಲಾಖೆಗಳಿಗೆ ಕಟ್ಟುನಿಟ್ಟಿನ ಸೂಚನೆ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿರ್ದೇಶನದಂತೆ ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ಸಂಪೂರ್ಣ ನಿರ್ಮೂಲನೆಗೆ ವ್ಯಾಪಕ ಜಾಗೃತಿ ಕಾರ್ಯಕ್ರಮ ನಡೆಸಿ.
ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ವಿವಿಧ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅರಣ್ಯ ವ್ಯಾಪ್ತಿಯೊಳಗೆ ಗಾಂಜಾ ಗಿಡಗಳನ್ನು ಬೆಳೆಯುವುದು ಅಥವಾ ಸಾಗಾಣಿಕೆ ಮಾಡುವುದು ಕಂಡುಬಂದಲ್ಲಿ ತಕ್ಷಣವೇ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಉಪ ಅರಣ್ಯ ಸಂರಕ್ಷಣಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಯಿತು.
ಔಷಧ ನಿಯಂತ್ರಣ ಇಲಾಖೆಯು ಮಾದಕ ಅಂಶವುಳ್ಳ ಔಷಧಗಳನ್ನು ವೈದ್ಯರ ಅಧಿಕೃತ ಚೀಟಿ ಇಲ್ಲದೆ ಮಾರಾಟ ಮಾಡದಂತೆ ಔಷಧ ಮಳಿಗೆಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ, ಪ್ರೊಬೆಷನರ್ ಐಎಎಸ್ ಅಧಿಕಾರಿ ಅಭಿಷೇಕ ಸೇಹರ್, ಇಂಡಿ ಉಪ ವಿಭಾಗಾಧಿಕಾರಿಗಳಾದ ಚಿದಾನಂದ ಗುರುಸ್ವಾಮಿ, ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಲ್ಲನಗೌಡ ಬಿರಾದಾರ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಮಲ್ಲಿಕಾರ್ಜುನ ಕುಸನಾಳ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಿಂ ಬಾಬಾ ಮುದ್ದೇಬಿಹಾಳ, ಅಬಕಾರಿ ಉಪ ಆಯುಕ್ತ ಮುರಳೀಧರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಜಾಗೃತಿ ಮೂಡಿಸಲು ಸೂಚನೆ
ವ್ಯಸನ ಮುಕ್ತ ಜೀವನ ನಡೆಸಲು ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು. ಯುವಕರು ವ್ಯಸನದಿಂದ ಮುಕ್ತರಾಗಿ ಉತ್ತಮ ಜೀವನ ನಡೆಸಬೇಕು. ಈ ನಿಟ್ಟಿನಲ್ಲಿ ಮಾದಕ ವ್ಯಸನಕ್ಕೆ ಒಳಗಾಗದಂತೆ ಮಾದಕ ವಸ್ತು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು. ಈ ಕುರಿತು ಸಂಬಂಧಿಸಿದ ಇಲಾಖಾಧಿಕಾರಿಗಳು ಪರಸ್ಪರ ಸಮನ್ವಯ ಹಾಗೂ ಸಹಕಾರದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಕರಣ ದಾಖಲು ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ
ಕಳೆದ ಮೂರು ವರ್ಷಗಳಲ್ಲಿ ಪೊಲೀಸ್ ಇಲಾಖೆಯು ಎನ್.ಡಿ.ಪಿ.ಎಸ್ ಕಾಯ್ದೆಯಡಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಮಾದಕ ದ್ರವ್ಯ ಮಾರಾಟ ಮತ್ತು ಸಾಗಾಣಿಕೆ ವಿರುದ್ಧ ದಾಖಲಾದ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿದೆ. ೨೦೨೪ ರಲ್ಲಿ ಒಟ್ಟು ೨೮ ಪ್ರಕರಣಗಳನ್ನು ದಾಖಲಿಸಿ ೨೯೭ ಕೆಜಿ ೮೭೨ ಗ್ರಾಂ ಗಾಂಜಾ ಹಾಗೂ ೩೭೩ ಕೆಜಿ ೫೭೪ ಗ್ರಾಂ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿತ್ತು. ೨೦೨೫ ರಲ್ಲಿ ಪ್ರಕರಣಗಳ ಸಂಖ್ಯೆ ೩೬ಕ್ಕೆ ಏರಿಕೆಯಾಗಿದ್ದು, ಈ ಅವಧಿಯಲ್ಲಿ ೩೪೨ ಕೆಜಿ ೫೩೭ ಗ್ರಾಂ ಗಾಂಜಾ, ೩೦೨ ಕೆಜಿ ೨೪ ಗ್ರಾಂ ಗಾಂಜಾ ಹಾಗೂ ೧೮ ಕೆಜಿ ೪೩೨ ಗ್ರಾಂ ಅಫೀಮು ಜಪ್ತಿ ಮಾಡಲಾಗಿತ್ತು. ಪ್ರಸ್ತುತ ೨೦೨೬ ರಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ ೪೫ಕ್ಕೇರಿದ್ದು, ೧೨೧ ಕೆಜಿ ೬೯ ಗ್ರಾಂ ಗಾಂಜಾ ಮತ್ತು ೩೪೫.೮೨೨ ಕೆಜಿ ಮಾದಕ ದ್ರವ್ಯಗಳನ್ನು ಜಪ್ತಿ ಮಾಡುವ ಮೂಲಕ ಕಾನೂನು ಕ್ರಮ ಜರುಗಿಸಲಾಗಿದೆ ಎಂದರು.

