ಅಗತ್ಯ ಪೂರ್ವಸಿದ್ಧತೆಗಳಿಗೆ ಅಧಿಕಾರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ. ಕೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಕಾಸಶೀಲ ಹಾಗೂ ಸೌಹಾರ್ದಶೀಲ ಕರ್ನಾಟಕ ನಿರ್ಮಾಣದ ಉದ್ದೇಶದಿಂದ ರಾಜ್ಯ ಸರ್ಕಾರವು ಪ್ರತಿ ಗ್ರಾಮ ಪಂಚಾಯಿತಿ ಹಾಗೂ ನಗರ ವಾರ್ಡ್ ಗಳಲ್ಲಿ ಭಾರತ್ ಜೋಡೋ ಯುವ ಸಂಘಗಳ ರಚನೆಗೆ ಮುಂದಾಗಿದ್ದು, ಜಿಲ್ಲೆಯ ಎಲ್ಲ ಅಧಿಕಾರಿಗಳು ಈ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ನಡೆದ ಭಾರತ್ ಜೋಡೋ ಯುವ ಸಂಘಗಳ ರಚನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳು ಹಾಗೂ ನಗರ ವಾರ್ಡ್ ಗಳಲ್ಲಿ ಯುವಕರನ್ನು ಸಂಘಟಿಸುವ ಮೂಲಕ ನಾಯಕತ್ವದ ಗುಣಗಳು, ಸಾಮಾಜಿಕ ಹೊಣೆಗಾರಿಕೆ ಹಾಗೂ ಜವಾಬ್ದಾರಿಯುತ ನಾಗರಿಕ ಪ್ರಜ್ಞೆಯನ್ನು ಬೆಳೆಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದರು.
ರಾಜ್ಯಾದ್ಯಂತ ಸುಮಾರು ೧೦ ಸಾವಿರ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಿ, ೫೦ ಲಕ್ಷಕ್ಕೂ ಹೆಚ್ಚು ಯುವಕರನ್ನು ಈ ವೇದಿಕೆಯಲ್ಲಿ ಒಗ್ಗೂಡಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶಗಳ ಜನಸಂಖ್ಯೆಗೆ ಅನುಗುಣವಾಗಿ ಸಂಘಗಳನ್ನು ರಚಿಸಲು ಕ್ರಮವಹಿಸಿ, ನಗರ ಪ್ರದೇಶಗಳಲ್ಲಿ ಮತಗಟ್ಟೆಗಳನ್ನು ಘಟಕವಾಗಿ ಪರಿಗಣಿಸಿ ಸಂಘಗಳ ವ್ಯಾಪ್ತಿಯನ್ನು ನಿರ್ಧರಿಸಲಾಗುವುದು ಎಂದರು.
ತಳಮಟ್ಟದಲ್ಲಿ ಯುವಕರಿಗೆ ವ್ಯವಸ್ಥಿತ ವೇದಿಕೆಗಳ ಕೊರತೆ ಕಂಡುಬರುತ್ತಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವಕರಿಗೆ ನಾಯಕತ್ವ, ಕ್ರೀಡೆ, ಆರೋಗ್ಯ, ಫಿಟ್ನೆಸ್ ಮತ್ತು ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಳ್ಳುವ ಅವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಸಂಘಗಳು ಪ್ರಮುಖ ಪಾತ್ರವಹಿಸಲಿವೆ ಎಂದರು.
ಭಾರತ್ ಜೋಡೋ ಯುವ ಸಂಘದ ನೋಂದಣಿಯ ವೆಬ್ಸೈಟ್ ಶೀಘ್ರದಲ್ಲೇ ಆರಂಭವಾಗಲಿದ್ದು, ಪೋರ್ಟಲ್, ಮೊಬೈಲ್ ಆ್ಯಪ್ ಹಾಗೂ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ನಾಗರಿಕ ಸೇವಾ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ಸದಸ್ಯತ್ವ ಪಡೆಯಲು ೧೬ ರಿಂದ ೩೫ ವರ್ಷದೊಳಗಿನ ಯುವಕರು ಅರ್ಹರಾಗಿದ್ದು, ಆಧಾರ್ ಆಧಾರಿತ ನೋಂದಣಿ ಕಡ್ಡಾಯವಾಗಿದೆ. ಪ್ರತಿ ಸಂಘಕ್ಕೆ ಕನಿಷ್ಠ ೧೦೦ ಸದಸ್ಯರು ಇರಬೇಕು. ಪ್ರತಿ ಸದಸ್ಯರಿಂದ ೧೦ ರೂ. ನೋಂದಣಿ ಶುಲ್ಕ ಪಡೆಯಲಾಗುವುದು. ಸಂಘಗಳನ್ನು ಕರ್ನಾಟಕ ಸೊಸೈಟೀಸ್ ನೋಂದಣಿ ಕಾಯ್ದೆ-೧೯೬೦ರಡಿ ನೋಂದಾಯಿಸಲಾಗುವುದು ಎಂದು ತಿಳಿಸಿದರು.
ಪ್ರತಿ ಸಂಘದಲ್ಲಿ ಪ್ರಜಾಸತ್ತಾತ್ಮಕ ರೀತಿಯಲ್ಲಿ ಆಯ್ಕೆಯಾದ ೧೫ ಸದಸ್ಯರ ಕಾರ್ಯಕಾರಿ ಸಮಿತಿ ಇರಲಿದೆ. ಅಧ್ಯಕ್ಷರು, ಉಪಾಧ್ಯಕ್ಷರು, ಖಜಾಂಚಿ ಹಾಗೂ ೧೨ ಕಾರ್ಯಕಾರಿ ಸದಸ್ಯರನ್ನು ಒಳಗೊಂಡ ಸಮಿತಿಯಲ್ಲಿ ಮಹಿಳೆಯರಿಗೆ ಹಾಗೂ ವಿವಿಧ ವರ್ಗಗಳಿಗೆ ಮೀಸಲಾತಿ ಕಡ್ಡಾಯವಾಗಿರುತ್ತದೆ. ಸಮಿತಿಯ ಅವಧಿ ಎರಡು ವರ್ಷಗಳಾಗಿದ್ದು, ಪಾರದರ್ಶಕ ಹಾಗೂ ಸಮಾನ ಪ್ರತಿನಿಧಿತ್ವಕ್ಕೆ ಆದ್ಯತೆ ನೀಡಲಾಗುವುದು ಎಂದರು.
ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಒಂದು ಭಾರತ್ ಜೋಡೋ ಯುವ ಸಂಘವನ್ನು ನೋಂದಾಯಿಸುವುದು ಹಾಗೂ ಪ್ರತಿ ತಾಲೂಕು ಪಂಚಾಯಿತಿ ಮಟ್ಟದಲ್ಲಿ ಭಾರತ್ ಜೋಡೋ ಸಮಿತಿಯನ್ನು ರಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯ ಸರ್ಕಾರವು ಶೀಘ್ರದಲ್ಲೇ ನೋಂದಣಿಗಾಗಿ ಅಧಿಕೃತ ವೆಬ್ಸೈಟ್ ಬಿಡುಗಡೆ ಮಾಡಲಿದ್ದು, ಸಂಬಂಧಿಸಿದ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಯಶಸ್ವಿಗೊಳಿಸಬೇಕು ಎಂದು ಅವರು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮಹಾನಗರ ಪಾಲಿಕೆಯ ಆಯುಕ್ತ ವಿಜಯ ಮೆಕ್ಕಳಕಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ವಿನಯಕುಮಾರ ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕಿ ಶ್ರೀಮತಿ ಭಾಗ್ಯಶ್ರೀ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ್ ದೈವಾಡಿ, ವಿಜಯಪುರ ತಾಲೂಕ ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಗುರುಶಾಂತಪ್ಪ ಬೆಳ್ಳುಂಡಗಿ, ಬಬಲೇಶ್ವರ ತಾಲೂಕ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಜುಬೇರ್ ಅಲಿ ಪಠಾಣ, ಹಾಗೂ ವಿಡಿಯೋ ಸಂವಾದದಲ್ಲಿ ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರರು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

