ಮಹಿಳಾ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ಮೀನಾ ಚಂದಾವರಕರ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪ್ರಸ್ತುತ ಯುಗದಲ್ಲಿ ನವೀನ ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕಿದ್ದು, ಭಾರತೀಯ ಜ್ಞಾನ ವ್ಯವಸ್ಥೆಯನ್ನು ಆಧುನಿಕ ಶಿಕ್ಷಣದೊಂದಿಗೆ ಸಮನ್ವಯಗೊಳಿಸುವುದು ಅನಿವಾರ್ಯ ಎಂದು ಮಹಿಳಾ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ಮೀನಾ ಚಂದಾವರಕರ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವ್ಯವಹಾರ ಹಾಗೂ ವಾಣಿಜ್ಯ ಅಧ್ಯಯನ ವಿಭಾಗದ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಐಸಿಎಸ್ಎಸ್ಆರ್ ಪ್ರಾಯೋಜಿತ ೧೦ ದಿನಗಳ ಸಂಶೋಧನಾ ವಿಧಾನಶಾಸ್ತ್ರ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದಿಕ್ಸೂಚಿ ಭಾಷಣ ಮಾಡಿದ ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ.ಪ್ರಕಾಶ್ ಎಸ್. ಕಾಂಬಳೆ ಮಾತನಾಡಿ, ವಿಕಸಿತ ಭಾರತ ಪರಿಕಲ್ಪನೆ ಸಾಕಾರಗೊಳಿಸುವಲ್ಲಿ ಎದುರಾಗುವ ಪ್ರಮುಖ ಸವಾಲುಗಳನ್ನು ವಿವರಿಸಿದರು. ಸಂಶೋಧಕರು ದತ್ತಾಂಶ ಆಧಾರಿತ ಹಾಗೂ ಅಂತರಶಿಸ್ತೀಯ ಸಂಶೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಎಸ್. ಸೋಮನಾಳ ಮಾತನಾಡಿ, ಹತ್ತು ದಿನಗಳ ತರಬೇತಿ ಕಾರ್ಯಕ್ರಮದ ಸದುಪಯೋಗ ಪಡೆದು ಸಂಶೋಧನೆಯ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳುವ ಮೂಲಕ ಸಮಾಜದ ಅಭಿವೃದ್ಧಿಗೆ ಅರ್ಥಪೂರ್ಣ ಕೊಡುಗೆ ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಮುಖ್ಯಸ್ಥೆ ಹಾಗೂ ಡೀನ್ ಪ್ರೊ.ಅನಿತಾ ಆರ್. ನಾಟೇಕರ್, ವಿಶ್ವವಿದ್ಯಾನಿಲಯದ ವಿವಿಧ ಅಧಿಕಾರಿಗಳು, ಗಣ್ಯರು, ಪ್ರಾಧ್ಯಾಪಕರು, ಸಂಶೋಧನಾ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು, ಉಪಸ್ಥಿತರಿದ್ದರು.
ತರಬೇತಿ ಕಾರ್ಯಕ್ರಮದ ನಿರ್ದೇಶಕ ಡಾ.ಸಿ.ಎಂ. ಮಠಪತಿ ಸ್ವಾಗತಿಸಿದರು. ಸಹ- ನಿರ್ದೇಶಕ ಡಾ.ಗಣೇಶ ಎಸ್.ಆರ್. ವಂದಿಸಿದರು. ಸಂಶೋಧನಾ ವಿದ್ಯಾರ್ಥಿನಿಯರಾದ ದಾನೇಶ್ವರಿ ಹಿರೇಮಠ, ಅಶ್ವಿನಿ ತೊರವಿ ಹಾಗೂ ಶಿಫಾ ಮುಶ್ರೀಫ್ ಕಾರ್ಯಕ್ರಮ ನಿರೂಪಿಸಿದರು.

