ಉದಯರಶ್ಮಿ ದಿನಪತ್ರಿಕೆ
ಆಲಮೇಲ: ಮಕ್ಕಳಿಗೆ ಬಾಲ್ಯದಲ್ಲಿಯೇ ಕಾನೂನು ಅರಿವು, ರಸ್ತೆ ಸುರಕ್ಷತೆ ಹಾಗೂ ವೈಯಕ್ತಿಕ ಭದ್ರತೆ ಕುರಿತು ಶಿಕ್ಷಣ ನೀಡುವುದು ಅತ್ಯಂತ ಮುಖ್ಯವಾಗಿದೆ ಎಂದು ಆಲಮೇಲ ಪೊಲೀಸ್ ಠಾಣೆಯ ಪಿಎಸ್ಐ ಅರವಿಂದ ಅಂಗಡಿ ಹೇಳಿದರು.
ಪಟ್ಟಣದ ವಿಶ್ವೇಶ್ವರ ಬಾಲಭಾರತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಹಾಗೂ ರಸ್ತೆ ಸುರಕ್ಷತಾ ಅಭಿಯಾನ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಮಕ್ಕಳು ನಾಳಿನ ಜವಾಬ್ದಾರಿಯುತ ಪ್ರಜೆಗಳಾಗಲಿದ್ದು, ರಸ್ತೆ ಸಂಚಾರ ನಿಯಮಗಳು, ಮಕ್ಕಳ ಹಕ್ಕುಗಳು ಹಾಗೂ ವಿವಿಧ ಕಾನೂನುಗಳ ಬಗ್ಗೆ ಪ್ರತಿಯೊಬ್ಬ ವಿದ್ಯಾರ್ಥಿಯೂ ಅರಿವು ಹೊಂದಬೇಕು ಎಂದು ಹೇಳಿದರು. ಮನೆಯಿಂದ ಹೊರಗಡೆ ಬಂದಾಗ ಎಚ್ಚರಿಕೆಯಿಂದ ವರ್ತಿಸುವುದು, ಗುಡ್ ಟಚ್ ಮತ್ತು ಬ್ಯಾಡ್ ಟಚ್ ಕುರಿತು ತಿಳಿದುಕೊಳ್ಳುವುದು ಅಗತ್ಯ. ಯಾವುದೇ ರೀತಿಯ ಅಹಿತಕರ ಅನುಭವ ಎದುರಾದರೆ ಅದನ್ನು ಪಾಲಕರು ಅಥವಾ ಶಿಕ್ಷಕರ ಗಮನಕ್ಕೆ ತಕ್ಷಣ ತರಬೇಕು ಎಂದು ಸಲಹೆ ನೀಡಿದರು.
ಮೊಬೈಲ್ ಬಳಕೆಯಲ್ಲಿ ಮಕ್ಕಳು ಹೆಚ್ಚಿನ ಜಾಗರೂಕತೆ ವಹಿಸಬೇಕು. ಶೈಕ್ಷಣಿಕ ಉದ್ದೇಶಗಳಿಗೆ ಮಾತ್ರ ಮೊಬೈಲ್ ಬಳಸಬೇಕು. ಸೈಬರ್ ಅಪರಾಧಗಳು ಹಾಗೂ ಡಿಜಿಟಲ್ ಅರೆಸ್ಟ್ ಸೇರಿದಂತೆ ವಿವಿಧ ಆನ್ಲೈನ್ ವಂಚನೆಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದರು.
ಶಾಲಾ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶಾಲಾ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸಂಜೆ ವೇಳೆಯಲ್ಲಿ ಪೊಲೀಸ್ ಇಲಾಖೆಯಿಂದ ನಿಯಮಿತ ಗಸ್ತು ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಸಾನಿಧ್ಯವನ್ನು ಆರೂಢ ಮಠದ ಪೂಜ್ಯ ಬಸವಲಿಂಗ ಶರಣರು ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಎಸ್.ಐ. ಜೋಗೂರ ಅಧ್ಯಕ್ಷತೆ ವಹಿಸಿದ್ದರು.
ಆಲಮೇಲ ಗೆಳೆಯರ ಬಳಗದ ಮುಖ್ಯಸ್ಥ ಪ್ರಕಾಶ ಮಾಡ್ಯಾಳ, ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ, ಶಿಕ್ಷಕರಾದ ಚಂದ್ರಕಾಂತ ದೇವರಮನಿ, ಪ್ರಶಾಂತ ಗಡದೆ, ಲಕ್ಷ್ಮೀಬಾಯಿ ಹಳೇಮನಿ, ಸುವರ್ಣ ಸಾರಂಗಮಠ, ಸೀತಾ ಆರೇಶಂಕರ, ಸರುಬಾಯಿ ಬಂಡಗಾರ, ಸುನೀತಾ ಗುಂಡದ, ಐಶ್ವರ್ಯ ಬೇಪಾರಿ, ಅಂಜಲಿ ಕನ್ನೊಳ್ಳಿ ಉಪಸ್ಥಿತರಿದ್ದರು.

