ಅರ್ಜನಾಳದಲ್ಲಿ ಲೋಣಿ (ಬಿ.ಕೆ.) ವಲಯದ ಪ್ರೌಢಶಾಲೆಗಳ ಕ್ರೀಡಾಕೂಟ ಉದ್ಘಾಟನೆ | ಬಿಇಒ ಎಚ್.ನಾಗೇಂದ್ರಪ್ಪ ಕರೆ
ಉದಯರಶ್ಮಿ ದಿನಪತ್ರಿಕೆ
ಚಡಚಣ: ಕ್ರೀಡೆ ಕೇವಲ ಸ್ಪರ್ಧೆ ಅಥವಾ ಮನರಂಜನೆಯ ಸಾಧನವಲ್ಲ; ಅದು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುವ ನಾಟಿ ಔಷಧಿಯಾಗಿದೆ ಎಂದು ಚಡಚಣ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ನಾಗೇಂದ್ರಪ್ಪ ಅಭಿಪ್ರಾಯಪಟ್ಟರು.
ಇಂಡಿ ತಾಲೂಕಿನ ಚಡಚಣ ಶೈಕ್ಷಣಿಕ ವಲಯದ ಅರ್ಜನಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಲೋಣಿ (ಬಿ.ಕೆ.) ವಲಯದ ಪ್ರೌಢಶಾಲೆಗಳ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಯಾಂತ್ರಿಕ ಜೀವನಶೈಲಿಯಲ್ಲಿ ಮಕ್ಕಳಿಂದ ಹಿಡಿದು ಯುವಜನತೆಯವರೆಗೆ ದೈಹಿಕ ಚಟುವಟಿಕೆಗಳು ಕಡಿಮೆಯಾಗುತ್ತಿವೆ. ಪ್ರತಿಯೊಬ್ಬರೂ ಪ್ರತಿದಿನ ಕನಿಷ್ಠ ಒಂದು ಗಂಟೆಯಾದರೂ ಕ್ರೀಡೆ ಅಥವಾ ಯೋಗ, ವ್ಯಾಯಾಮಕ್ಕೆ ಮೀಸಲಿಡಬೇಕು. ಇದರಿಂದ ದೇಹ ಸದೃಢವಾಗುವುದರ ಜೊತೆಗೆ ಮನಸ್ಸಿಗೂ ಉಲ್ಲಾಸ ದೊರೆಯುತ್ತದೆ. ಕ್ರೀಡೆಯು ಶಿಸ್ತು, ಸಮಯಪ್ರಜ್ಞೆ, ನಾಯಕತ್ವ ಗುಣ, ಸಹಕಾರ ಮನೋಭಾವ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಅತ್ಯುತ್ತಮ ಮಾಧ್ಯಮವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಂಗ್ರೆಸ್ ಎಸ್ಸಿ/ಎಸ್ಟಿ ಘಟಕದ ರಾಜ್ಯ ಉಪಾಧ್ಯಕ್ಷ ಸಣ್ಣಪ್ಪ ತಳವಾರ ಮಾತನಾಡಿ, ಇಂದಿನ ಯುವಜನತೆ ಕೆಲವೊಂದು ದುಶ್ಚಟಗಳಿಗೆ ಬಲಿಯಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ದುಶ್ಚಟಗಳಿಂದ ದೂರವಿದ್ದು ಕ್ರೀಡೆ, ವ್ಯಾಯಾಮ ಹಾಗೂ ಉತ್ತಮ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯುವಕರು ಮುಂದಾಗಬೇಕು ಎಂದು ಕರೆ ನೀಡಿದರು.
ಕ್ರೀಡಾಕೂಟದಲ್ಲಿ ಲೋಣಿ (ಬಿ.ಕೆ.) ವಲಯದ 15 ಪ್ರೌಢಶಾಲೆಗಳ ವಿದ್ಯಾರ್ಥಿಗಳು ವಿವಿಧ ಅಥ್ಲೆಟಿಕ್ಸ್ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ಶಾಲಾ ಆವರಣದಲ್ಲಿ ಕ್ರೀಡಾ ಸಂಭ್ರಮ ಮನೆಮಾಡಿದ್ದು, ವಿದ್ಯಾರ್ಥಿಗಳಲ್ಲಿ ವಿಶೇಷ ಉತ್ಸಾಹ ಕಂಡುಬಂದಿತು.
ಈ ಸಂದರ್ಭದಲ್ಲಿ ಚಡಚಣ ಬಿಇಒ ಕಚೇರಿಯ ಶಿಕ್ಷಣ ಸಂಯೋಜಕರಾದ ಸಿನಖೇಡ, ಭೂದಾನಿ ರತ್ನಾಕರ ತಳವಾರ, ಸುರೇಶ ನಾಯಕ, ಬಿಐಇಆರ್ಟಿ ಎಸ್.ಎಸ್. ಬೋರಗಿ, ಪ್ರಭು ಬಿರಾದಾರ, ಡಿ.ಕೆ. ರಗಟಿ, ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶಬ್ಬೀರ ಮುಲ್ಲಾ, ಅಭಿವೃದ್ಧಿ ಅಧಿಕಾರಿ ಲಕ್ಷ್ಮಣ ಪಾಟೀಲ್, ಗ್ರಾಮಸ್ಥರು, ಪಾಲಕರು, ಚಡಚಣ ಶೈಕ್ಷಣಿಕ ವಲಯದ 15 ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಕ್ರೀಡಾ ಶಿಕ್ಷಕರು ಹಾಗೂ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

