ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಮನ್ವಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಾ. ವಿಜಯಕುಮಾರ್ ಕರೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಜ್ಯದಲ್ಲಿ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಹಕ್ಕುಗಳ ರಕ್ಷಣೆ ಹಾಗೂ ಅವರ ಸಮಸ್ಯೆಗಳ ಪರಿಹಾರಕ್ಕಾಗಿ ಐಕ್ಯತೆಯ ಪ್ರದರ್ಶನ ಅತ್ಯಗತ್ಯವಾಗಿದ್ದು, ಆಗಸ್ಟ್ 28ರಂದು ಬೆಂಗಳೂರಿನ ಅರಮನೆ ಮೈದಾನದ ಶೃಂಗಾರ ಪ್ಯಾಲೇಸ್ (ಗೇಟ್ ನಂ. 8)ನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸರ್ಕಾರಿ ಜಾಗೃತ ನೌಕರರ ರಾಜ್ಯಮಟ್ಟದ 6ನೇ ಐಕ್ಯತಾ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಮನ್ವಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಾ. ವಿಜಯಕುಮಾರ್ ಕರೆ ನೀಡಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಮನ್ವಯ ಸಮಿತಿ, ಬೆಂಗಳೂರು, ವಿಜಯಪುರ ಜಿಲ್ಲಾ ಘಟಕದ ವತಿಯಿಂದ ರಾಜ್ಯಮಟ್ಟದ ಸಮಾವೇಶದ ಪೂರ್ವಸಿದ್ಧತೆ ಹಾಗೂ ಕಾರ್ಯಕ್ರಮದ ರೂಪರೇಷೆಗಳ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ವಿಶೇಷವಾಗಿ ಎಸ್ಸಿ/ಎಸ್ಟಿ ಸರ್ಕಾರಿ ನೌಕರರ ಮೇಲೆ ತಾರತಮ್ಯ ನಡೆಯುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ತಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲು ಎಲ್ಲರೂ ಐಕ್ಯತೆಯಿಂದ ಒಂದೇ ವೇದಿಕೆಯಲ್ಲಿ ಸೇರುವುದು ಅಗತ್ಯವಾಗಿದೆ ಎಂದು ಹೇಳಿದರು. ಪ್ರತಿಯೊಂದು ಜಿಲ್ಲೆಯಿಂದ ಸಮಿತಿಯ ಪದಾಧಿಕಾರಿಗಳು, ಅಧ್ಯಕ್ಷರು ಹಾಗೂ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಅಧ್ಯಕ್ಷ ಬಿ.ಎಚ್. ನಾಡಗಿರಿ ಮಾತನಾಡಿ, ವಿಜಯಪುರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಎಸ್ಸಿ/ಎಸ್ಟಿ ನೌಕರರನ್ನು ಸಮಾವೇಶಕ್ಕೆ ಕರೆದೊಯ್ಯುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಸಭೆಯಲ್ಲಿ , ಹಿರಿಯ ಉಪಾಧ್ಯಕ್ಷ ಆರ್. ಮೋಹನ್, ಸದಸ್ಯ ದ್ವಾರಕನಾಥ್, ಬಸಂತ್ ಗುಣದಾಳ, ಡಾ. ಸೂರ್ಯಕಾಂತ ಹೊಸಮನಿ, ಮಹೇಶ್ ಹೊನ್ನಾಕಟ್ಟಿ, ಮುದ್ದಣ್ಣ ಭೀಮನಗರ, ರವಿ ಯಲಡಗಿ, ನಿಜು ಮೇಲಿನಕೇರಿ, ಆರ್.ಬಿ. ಬಡಿಗೇರ್, ಎಸ್.ಎಂ. ದೋಣಿ, ಜಿ.ಎಂ. ಚೆಲುವಾದಿ, ನೀಲಕಂಠ ಸೇರಿದಂತೆ ಹಲವರಿದ್ದರು.

