ಅಪರ ನಿರ್ದೇಶಕರ ಕಚೇರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ, ಉ.ಕ ಸಹಾಯಕ ನಿರ್ದೇಶಕ ಡಾ.ಸಂಪತ್ ಗುಣಾರಿ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಂತುಹುಳು ಬಾಧೆಯಿಂದ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ, ರಕ್ತಹೀನತೆ ಹಾಗೂ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತವಾಗುವ ಸಾಧ್ಯತೆ ಇದೆ. ಕರುಳಿನಲ್ಲಿರುವ ಜಂತುಹುಳುಗಳು ಮನುಷ್ಯನ ಆಹಾರ ಮತ್ತು ರಕ್ತದಲ್ಲಿನ ಪೌಷ್ಟಿಕಾಂಶವನ್ನು ಹಂಚಿಕೊಳ್ಳುವುದರಿಂದ ಈ ಸಮಸ್ಯೆಗಳು ಉಂಟಾಗುತ್ತವೆ ಎಂದು ಅಪರ ನಿರ್ದೇಶಕರ ಕಚೇರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ, ಉತ್ತರ ಕರ್ನಾಟಕದ ಸಹಾಯಕ ನಿರ್ದೇಶಕ ಡಾ. ಸಂಪತ್ ಗುಣಾರಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಜಯಪುರ ನಗರದ ಅಲ್ ಹಸ್ನಾತ್ ಉರ್ದು ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ನಗರದ ಹಬೀಬ್ ನಗರದಲ್ಲಿರುವ ಅಲ್ ಹಸ್ನಾತ್ ಶಾಲೆ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡುವ ಮೂಲಕ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಬರಿಗಾಲಿನಲ್ಲಿ ಹೊರಗಡೆ ಓಡಾಡುವುದು, ಬಯಲು ಶೌಚ, ಸ್ವಚ್ಛತೆಯ ಅಸಮರ್ಪಕ ನಿರ್ವಹಣೆ, ಅಶುದ್ಧ ನೀರು ಹಾಗೂ ಕಲುಷಿತ ಆಹಾರ ಸೇವನೆಯಿಂದ ಜಂತುಹುಳುಗಳು ದೇಹವನ್ನು ಪ್ರವೇಶಿಸುತ್ತವೆ. ಆದ್ದರಿಂದ ಮಕ್ಕಳು ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದರ ಜೊತೆಗೆ ಉತ್ತಮ ಆರೋಗ್ಯಕರ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಪರಶುರಾಮ ಹಿಟ್ನಳ್ಳಿ, ತಾಲೂಕು ಆರೋಗ್ಯಾಧಿಕಾರಿ ಡಾ.ಸಂತೋಷ ಶೆಟ್ಟಿ ಮಾತನಾಡಿ, ಜಿಲ್ಲೆಯಾದ್ಯಂತ ಆ.೧೦ರಂದು ಎಲ್ಲ ಅಂಗನವಾಡಿ ಕೇಂದ್ರಗಳು ಹಾಗೂ ಶಾಲೆಗಳಲ್ಲಿ ೧ರಿಂದ ೧೯ ವರ್ಷದೊಳಗಿನ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಗಳನ್ನು ನೀಡಲಾಗುತ್ತಿದೆ. ಶಾಲೆಗೆ ದಾಖಲಾಗದ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳಿಗೂ ಮಾತ್ರೆ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದರು.
ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದಂದು ಮಾತ್ರೆ ಪಡೆಯಲು ಸಾಧ್ಯವಾಗದ ಮಕ್ಕಳಿಗೆ ಆ.೧೭ರಂದು ಮಾಪ್-ಅಪ್ ದಿನದಂದು ಜಂತುಹುಳು ನಿವಾರಣಾ ಮಾತ್ರೆ ನೀಡಲಾಗುವುದು. ಆದ್ದರಿಂದ ಎಲ್ಲ ಅರ್ಹ ಮಕ್ಕಳು ತಪ್ಪದೇ ಮಾತ್ರೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಲ್ ಹಸ್ನಾತ್ ಉರ್ದು ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎಸ್.ಎಸ್. ಹರಿಯಾಲ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಸೌಮ್ಯ ಶಿಂಧೆ, ಜೀಯಾ ಅವಟಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ. ಕೋಲೂರ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಂಕರ ಚಲವಾದಿ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಮಹಾದೇವ ನಿಲಂಗಿ, ಆರ್ಕೆಎಸ್ಕೆ ಜಿಲ್ಲಾ ಸಂಯೋಜಕಿ ಸಾವಿತ್ರಿ ಹಿಪ್ಪರಗಿ, ಆರೋಗ್ಯ ಇಲಾಖೆ ಸಿಬ್ಬಂದಿ, ಶಾಲಾ ಶಿಕ್ಷಕರು, ಆಶಾ ಕಾರ್ಯಕರ್ತೆಯರು ಹಾಗೂ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

