ಉದಯರಶ್ಮಿ ದಿನಪತ್ರಿಕೆ
ಚಡಚಣ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರವನ್ನು ಚಡಚಣ ವಲಯದಲ್ಲಿ ಆಯೋಜಿಸಲಾಯಿತು.
ಕಾರ್ಯಾಗಾರವನ್ನು ವಿಜಯಪುರ ಜಿಲ್ಲಾ ನಿರ್ದೇಶಕ ಮೋಹನ್ ನಾಯ್ಕ ಹಾಗೂ ಇಂಡಿ ತಾಲ್ಲೂಕು ಯೋಜನಾಧಿಕಾರಿ ನಟರಾಜ ಎಲ್.ಎಂ. ಅವರು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಜಿಲ್ಲಾ ನಿರ್ದೇಶಕ ಮೋಹನ್ ನಾಯ್ಕ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಜನರ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ವಿಶೇಷವಾಗಿ ಮಹಿಳೆಯರಲ್ಲಿ ಉಳಿತಾಯದ ಮನೋಭಾವ ಬೆಳೆಸುವುದರೊಂದಿಗೆ ಅವರನ್ನು ಸ್ವಾವಲಂಬಿ ಜೀವನ ನಡೆಸುವಂತೆ ಮಾಡುವಲ್ಲಿ ಯೋಜನೆಯ ಪಾತ್ರ ಮಹತ್ವದ್ದಾಗಿದೆ ಎಂದರು.
ತಾಲ್ಲೂಕು ಯೋಜನಾಧಿಕಾರಿ ನಟರಾಜ ಎಲ್.ಎಂ. ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಿನ್ನೆಲೆ, ಉದ್ದೇಶ ಹಾಗೂ ಕಾರ್ಯವೈಖರಿ ಕುರಿತು ಮಾಹಿತಿ ನೀಡಿದರು. ಕಾರ್ಯಾಗಾರದಲ್ಲಿ ಬಿ.ಸಿ. ಪ್ರಬಂಧಕ ಸಂತೋಷ್, ಜಿಲ್ಲಾ ವಿಚಕ್ಷಣಾಧಿಕಾರಿ ಶ್ರೀಕಾಂತ, ತಾಲ್ಲೂಕು ವಿಚಕ್ಷಣಾಧಿಕಾರಿ ಸಿದ್ದಪ್ಪ, ತಾಲ್ಲೂಕು ಕೃಷಿ ಮೇಲ್ವಿಚಾರಕ ಸುದೀಪ್, ವಲಯ ಮೇಲ್ವಿಚಾರಕ ಶಿವಯ್ಯ, ವಲಯದ ಸೇವಾ ಪ್ರತಿನಿಧಿಗಳು ಹಾಗೂ ವಿವಿಧ ಒಕ್ಕೂಟಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಾಗಾರದಲ್ಲಿ ಒಕ್ಕೂಟದ ಪದಾಧಿಕಾರಿಗಳಿಗೆ ಸಂಘಗಳ ನಿರ್ವಹಣೆ, ದಾಖಲೆಗಳ ಸಂರಕ್ಷಣೆ, ಸಾಲದ ಮರುಪಾವತಿ, ಮಾಸಿಕ ವರದಿ ಸಲ್ಲಿಕೆ ಸೇರಿದಂತೆ ಯೋಜನೆಯ ವಿವಿಧ ಚಟುವಟಿಕೆಗಳ ಕುರಿತು ಪ್ರಾಯೋಗಿಕ ಹಾಗೂ ಮಾರ್ಗದರ್ಶನ ನೀಡಲಾಯಿತು.

