ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪೊಲೀಸ್ ಎಂದರೆ ಭಯಪಡುವ ಅಗತ್ಯವಿಲ್ಲ. ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ ಎಂದು ಪಿಎಸ್ಐ ಶ್ರೀಕಾಂತ ಕಾಂಬಳೆ ಹೇಳಿದರು.
ಸಿಂದಗಿಯ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಪರಿಚಯಾತ್ಮಕ ಭೇಟಿಯ ಅಂಗವಾಗಿ ಸಿಂದಗಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಪೊಲೀಸ್ ಇಲಾಖೆಯ ಕಾರ್ಯವೈಖರಿ ಹಾಗೂ ವಿವಿಧ ವಿಭಾಗಗಳ ಕುರಿತು ಮಾಹಿತಿ ಪಡೆಯಲು ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿ ಅವರು, ವಿದ್ಯಾರ್ಥಿಗಳು ಅತಿಯಾಗಿ ಸಾಮಾಜಿಕ ಜಾಲತಾಣಗಳ ಬಳಕೆಗೆ ಒಳಗಾಗದೆ, ವಿದ್ಯಾಭ್ಯಾಸ ಹಾಗೂ ತಮ್ಮ ಭವಿಷ್ಯದ ರೂಪಿಸಿಕೊಳ್ಳುವತ್ತ ಹೆಚ್ಚಿನ ಗಮನ ಹರಿಸಬೇಕು. ವಿದ್ಯಾರ್ಥಿಗಳು ಅಥವಾ ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಎದುರಾದರೂ ಮುಕ್ತವಾಗಿ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು ಎಂದರು.
ಈ ವೇಳೆ ಕ್ರೈಂ ಪಿಎಸ್ಐ ಎಂ.ಬಿ.ಬಿರಾದಾರ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಹಕ್ಕುಗಳು ಹಾಗೂ ಕರ್ತವ್ಯಗಳ ಬಗ್ಗೆ ಅರಿವು ಹೊಂದಬೇಕು. ಸಾಮಾಜಿಕ ಜಾಲತಾಣಗಳನ್ನು ಜವಾಬ್ದಾರಿಯುತವಾಗಿ ಬಳಸಬೇಕು. ಅಪರಿಚಿತರೊಂದಿಗೆ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳದೆ, ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬAದರೆ ತಕ್ಷಣ ಪೊಲೀಸರ ಗಮನಕ್ಕೆ ತರಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಜೆಟ್ಟೆಪ್ಪ ದೊಡಮನಿ, ಶೈಲಶ್ರೀ ನ್ಯಾಮಣ್ಣನವರ, ಪರಶುರಾಮ ಗೊರವಗುಂಡಗಿ ಅವರು ಪೊಲೀಸ್ ಇಲಾಖೆಯ ವಿವಿಧ ಸೆಕ್ಷನ್ಗಳು, ಕರ್ತವ್ಯಗಳು, ಸಾರ್ವಜನಿಕರೊಂದಿಗೆ ಪೊಲೀಸರ ಸಮನ್ವಯ ಹಾಗೂ ಪ್ರಕರಣಗಳ ನಿರ್ವಹಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಿದರು.
ವಿದ್ಯಾರ್ಥಿಗಳು ಅಧಿಕಾರಿಗಳೊಂದಿಗೆ ವಿವಿಧ ವಿಷಯಗಳ ಕುರಿತು ಚರ್ಚಿಸಿ ತಮ್ಮ ಪ್ರಶ್ನೆಗಳಿಗೆ ಉತ್ತರ ಪಡೆದುಕೊಂಡರು. ಈ ಸಂದರ್ಭದಲ್ಲಿ ಸಿಪಿಐ ಸುನೀಲ ಮೂಲಿಮನಿ, ಉಪಸ್ಯಾಸಕರಾದ ಮಹಾಂತೇಶ ನೂಲಾನವರ, ಎಂ.ಕೆ.ಬಿರಾದಾರ, ಪೂಜಾ ಆಲಮೇಲ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.

