ವಿಜಯಪುರದಲ್ಲಿ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮುಂಗಾರು ಮಳೆ ಕೊರತೆಯಿಂದಾಗಿ ಮುಂಬರುವ ದಿನಗಳಲ್ಲಿ ಉಂಟಾಗಬಹುದಾದ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ನಗರದಲ್ಲಿ ಅಗತ್ಯ ಕುಡಿಯುವ ನೀರನ್ನು ಮುಂಚಿತವಾಗಿಯೇ ಸಂಗ್ರಹಿಸಿಟ್ಟುಕೊಂಡು ನಿಯಮಿತ ತೆರಿಗೆ ವಸೂಲಿ ಹಾಗೂ ನಗರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ನಗರಾಭಿವೃದ್ಧಿ ಸಚಿವರಾದ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದರು.
ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಭಾನುವಾರ ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರಕ್ಕೆ ಸರಬರಾಜು ಮಾಡುವ ಕುಡಿಯುವ ನೀರು ಸ್ವಚ್ಛ ಹಾಗೂ ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕು. ಮುಂಗಾರು ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಗೆ ಅಗತ್ಯವಿರುವ ಪ್ರಮಾಣಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಕುಡಿಯುವ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಅಗತ್ಯ ಯೋಜನೆ ರೂಪಿಸಬೇಕು ಎಂದು ಅವರು ಹೇಳಿದರು.
ಕುಡಿಯುವ ನೀರು ಸಮಸ್ಯೆ ಉಲ್ಬಣಿಸಬಾರದು. ಅದಕ್ಕೆ ಅಗತ್ಯ ಪೂರ್ವ ಯೋಜನೆ ಮಾಡಿಕೊಳ್ಳಬೇಕು. ನಿಯಮಿತವಾಗಿ ಸರಬರಾಜು ಮಾಡಬೇಕು. ೩ನೇ ಹಂತದಲ್ಲಿ ನಗರದ ಜನತೆಗೆ ನಿತ್ಯ ನೀರು ಪೂರೈಸಲು, ತಕ್ಷಣ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು. ಪ್ರತಿ ಮನೆ-ಮನೆಗೂ ಮೀಟರ್ ಅಳವಡಿಸಲು ತಿಳಿಸಿದ್ದಾರೆ.
.
ಮೂರನೇ ಹಂತದ ಕುಡಿಯುವ ನೀರಿನ ಯೋಜನೆ ಜಾರಿಗೆ ಕ್ರಮ:
ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಡಾ. ಎಂ.ಬಿ. ಪಾಟೀಲ ಅವರು ಮಾತನಾಡಿ, ೩ನೇ ಹಂತದ ಕುಡಿಯುವ ನೀರು ಯೋಜನೆ ಅನುಷ್ಠಾನಗೊಳಿಸಬೇಕು. ಅದನ್ನು ಮಾಡಿದರೆ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಶಾಶ್ವತವಾಗಿ ಹೆಸರು ಉಳಿಯಲಿದೆ ಎಂದು ಸಚಿವರ ಗಮನಸೆಳೆದರು.
ನಮ್ಮಲ್ಲಿ ಆಲಮಟ್ಟಿ ಜಲಾಶಯದಲ್ಲಿ ಸಾಕಷ್ಟು ನೀರಿದೆ. ಆದರೂ ನಗರದ ಜನತೆಗೆ ಒಂದು ವಾರ ಇಲ್ಲವೇ ಎರಡು ವಾರಕ್ಕೊಮ್ಮೆ ನೀರು ಪೂರೈಸುತ್ತಿದ್ದೇವೆ. ಪ್ರಸ್ತುತ ಭೂತನಾಳ ಕೆರೆಯಿಂದ ನಾಲ್ಕು ವಾರ್ಡ್ ಗಳಿಗೆ ಮಾತ್ರ ನೀರು ಪೂರೈಸುತ್ತಿದ್ದೇವೆ. ಹಾಗಾಗಿ ನಗರದ ಜನತೆಗೆ ನಿತ್ಯ ಕುಡಿಯುವ ನೀರು ಪೂರೈಸಲು ತ್ವರಿತವಾಗಿ ಡಿಪಿಆರ್ ಸಿದ್ಧಪಡಿಸಿ, ಅದನ್ನು ಕಾರ್ಯಗತಗೊಳಿಸಿದರೆ ಡಾ. ಯತೀಂದ್ರ ಸಿದ್ದರಾಮಯ್ಯ ಹೆಸರು ಶಾಶ್ವತವಾಗಿ ಉಳಿಯಲಿದೆ ಎಂದರು.
ಈ ನಿಟ್ವಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಮಾನ್ಯ ಮುಖ್ಯಮಂತ್ರಿ ಅವರ ಗಮನಸೆಳೆಯುವೆ. ಅದಕ್ಕೆ ಸಚಿವರು ಸ್ಪಂದಿಸುವ ಮೂಲಕ ವಿಜಯಪುರ ನಗರಕ್ಕೆ ಮೂರನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿದರು. ಆದಾಗ್ಯೂ ನಾವು ನಗರದ ಜನರಿಗೆ ನಿರಂತರ ಹಾಗೂ ಸಮರ್ಪಕ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ ಅವರು ಆಸ್ತಿ ತೆರಿಗೆ ಹಾಗೂ ವಾಣಿಜ್ಯ ಮಳಿಗೆಗಳ ಬಾಡಿಗೆ ಸೇರಿದಂತೆ ವಿವಿಧ ಮೂಲಗಳಿಂದ ಆದಾಯ ಸಂಗ್ರಹಣೆ, ಇಂದಿರಾ ಕ್ಯಾಂಟೀನ್ಗಳ ನಿರ್ವಹಣೆ, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ–೨.೦, ೧೫ನೇ ಹಣಕಾಸು ಆಯೋಗದ ಯೋಜನೆ, ಅಮೃತ್–೨.೦ ಯೋಜನೆ, ಘನ ತ್ಯಾಜ್ಯ ವಸ್ತು ನಿರ್ವಹಣೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಇ-ಖಾತಾ, ಸಕಾಲ ಹಾಗೂ ಐಪಿಜಿಆರ್ಎಸ್ ಹಾಗೂ ಖಾಲಿ ಹುದ್ದೆಗಳ ಮಾಹಿತಿ ಸೇರಿದಂತೆ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಪ್ರಗತಿ ಹಾಗೂ ಅನುಷ್ಠಾನದ ಕುರಿತು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಮೇಯರ್ ಮಡಿವಾಳಪ್ಪ ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಗಂಗಾಧರ ಸಂಬಣ್ಣಿ, ಉಪ ಮೇಯರ್ ಶ್ರೀಮತಿ ಸುಮಿತ್ರಾ ಜಾಧವ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ರಾಜಶೇಖರ ಡಂಬಳ ಸೇರಿದಂತೆ ಮಹಾ ನಗರ ಪಾಲಿಕೆಯ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

