ವಿಜಯಪುರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವ ಡಾ. ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ಬರ ಪರಸ್ಥಿತಿ ಎದುರಾಗಿದೆ. ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಸರಕಾರ ರೈತರ ಪರವಾಗಿ ನಿಲ್ಲಲಿದೆ. ಶೇ.೧೭ ರಷ್ಟು ಬಿತ್ತನೆಯಾಗಿದೆ. ಬಹುತೇಕ ಕಡೆ ಬಿತ್ತನೆಯೇ ಆಗಿಲ್ಲ. ರೈತರ ಈ ನೈಜ ಸ್ಥಿತಿಯನ್ನು ಖುದ್ದು ವೀಕ್ಷಿಸಲಾಗಿದೆ. ಸಮಗ್ರ ಹಾಗೂ ವೈಜ್ಞಾನಿಕ ವರದಿ ಸಲ್ಲಿಸಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಡಾ. ಎಂ.ಬಿ. ಪಾಟೀಲ್ ಅವರು, ಸಕಾರಾತ್ಮಕ ಭರವಸೆ ನೀಡಿದರು.
ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾನುವಾರ ಬೆಳಿಗ್ಗೆ ಬರ ಅವಲೋಕನಾ ಪ್ರವಾಸ ಕೈಗೊಂಡ ಸಚಿವರು, ಹಿಟ್ಟಿನಹಳ್ಳಿ,ಮದಭಾವಿ,ಶಿವಣಗಿ, ದೇವರ ಹಿಪ್ಪರಗಿ,ಬಮ್ಮನಜೋಗಿ,
ಕನ್ನೊಳಿ ಸೇರಿದಂತೆ ವಿವಿಧ ಪ್ರದೇಶಗಳ ವ್ಯಾಪ್ತಿಯ ಕೃಷಿಕರ ತಾಕುಗಳಿಗೆ ತೆರಳಿ ಹತ್ತಿ ,ಕಬ್ಬು ಸೂರ್ಯಕಾಂತಿ,ತೊಗರಿ ಸೇರಿದಂತೆ ವಿವಿಧ ಬೆಳೆಗಳ ಪ್ರಸ್ತುತ ಸ್ಥಿತಿಯನ್ನು ಅವಲೋಕಿಸಿದ ಬಳಿಕ ಅವರು ಮಾತನಾಡಿದರು. ಬಿತ್ತಿದ ಬೆಳೆಗಳು ಸಂಪೂರ್ಣ ಹಾನಿಗೀಡಾಗುವ ಪರಿಸ್ಥಿತಿಯಿದೆ. ಹಾಗಾಗಿ ಖುದ್ದು ಬರ ಪರಿಸ್ಥಿತಿ ವೀಕ್ಷಿಸಿ, ಸಂಕಷ್ಟದಲ್ಲಿರುವ ರೈತರನ್ನು ಕಷ್ಟದಿಂದ ಪಾರು ಮಾಡುವ ಸದುದ್ದೇಶದಿಂದ ಸರ್ಕಾರದಿಂದ ಸೂಕ್ತ ಒದಗಿಸುವುದಾಗಿ ಭರವಸೆ ನೀಡಿದರು.
ಜಿಲ್ಲೆಯಲ್ಲಿ ಮಳೆ ಬರುತ್ತಿತ್ತು. ಆದರೆ ಬಿರುಸಾದ ಗಾಳಿಯಿಂದಾಗಿ ಮಳೆಯಾಗಿಲ್ಲ. ಹೀಗಾಗಿ ಜಿಲ್ಲೆಯಾದ್ಯಂತ ಒಣ ಬರ ಮುಂದುವರಿದಿದೆ. ಜಿಲ್ಲೆಯ ಬರ ಪರಿಸ್ಥಿತಿಯನ್ನು ಮುಂಗಾರು ಆರಂಭದಿಂದಲೇ ನಾನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೆ. ಹೀಗಾಗಿ ನಿರಂತರವಾಗಿ ಬರ ಪರಿಸ್ಥಿತಿ ಪೂರ್ವಭಾವಿ ಸಭೆಗಳನ್ನು ನಡೆಸಿ, ಎಲ್ಲ ಮಾಹಿತಿ ಕಲೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ರೈತರಿಗೆ ಸೂಕ್ತ ಪರಿಹಾರ ಕೊಡಿಸುವುದರಿಂದ ವಿಮುಖನಾಗುವುದಿಲ್ಲ ಎಂದು ಹೇಳಿದರು.
ಕುಡಿಯುವ ನೀರಿಗೆ ತೊಂದರೆಯಿಲ್ಲ: ಜಿಲ್ಲೆಯಲ್ಲಿ ವಾಡಿಕೆಯಷ್ಟು ಆಗಬೇಕಾದ ಮಳೆಯಾಗಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಬೆಳೆಗಳು ಒಣಗುವ ಹಂತದಲ್ಲಿವೆ. ಆದರೆ ಜಿಲ್ಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಏನಿಲ್ಲ. ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ ಸಾಕಷ್ಟು ನೀರಿನ ಸಂಗ್ರಹವಿದೆ. ಹಾಗಾಗಿ ಕುಡಿಯುವ ನೀರಿಗೆ ತೊಂದರೆ ಏನಿಲ್ಲ ಎಂದರು.
ವೈಜ್ಞಾನಿಕ ವರದಿ ಸಲ್ಲಿಕೆಗೆ ಸೂಚನೆ: ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ತಪ್ಪುಗಳಾಗದಂತೆ ವೈಜ್ಞಾನಿಕವಾಗಿ ವರದಿ ಸಲ್ಲಿಸಿ, ಬರ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.
ಆಗಸ್ಟ್ ಅಂತ್ಯದಲ್ಲಿ ಬರ ಘೋಷಣೆ ಸಾಧ್ಯತೆ: ಕೇಂದ್ರ ಸರ್ಕಾರ ಆಗಸ್ಟ್ ಅಂತ್ಯದಲ್ಲಿ ಬರ ಪರಿಸ್ಥಿತಿ ಘೋಷಿಸಬಹುದು. ಬರ ಪರಿಸ್ಥಿತಿ ಎದುರಾದಾಗ ಕೇಂದ್ರ ಸರಕಾರ ವಾಡಿಕೆಯಂತೆ ಆಗಸ್ಟ್ ಅಂತ್ಯದಲ್ಲಿ ಅಧಿಕೃತವಾಗಿ ಬರ ಘೋಷಣೆ ಮಾಡುವ ಸಾಧ್ಯತೆಯಿದೆ.
ಬೆಳೆ ವಿಮೆ: ಕಳೆದ ವರ್ಷ ಜಿಲ್ಲೆಯಲ್ಲಿ ೯೭ ಸಾವಿರ ರೈತರು ಬೆಳೆ ವಿಮೆಗೆ ಹೆಸರು ನೋಂದಾಯಿಸಿಕೊAಡಿದ್ದರು. ಅವರಿಗೆ ೨೩೫ ಕೋಟಿ ರೂ. ಬೆಳೆ ವಿಮೆ ಮಂಜೂರಾಗಿದೆ. ಈ ವರ್ಷ ೨.೫೪ ಲಕ್ಷ ರೈತರು ಬೆಳೆ ವಿಮೆಗೆ ರೈತರು ನೋಂದಾಯಿಸಿಕೊಂಡಿದ್ದಾರೆ ಎಂದು ಸಚಿವರು ತಿಳಿಸಿದರು.
ಮಳೆ ಅಭಾವದಿಂದಾಗಿ ಬೆಳೆಗಳ ಬೆಳವಣಿಗೆ ಕುಂಠಿತಗೊಂಡು ಬಿತ್ತನೆ ಮಾಡಿದ ಪೈರು ಒಣಗುತ್ತಿರುವುದನ್ನು ಪ್ರತ್ಯಕ್ಷವಾಗಿ ವೀಕ್ಷಿಸಿದ ಸಚಿವರು, ಸ್ಥಳದಲ್ಲಿದ್ದ ರೈತರು ಹಾಗೂ ಕೃಷಿ ಅಧಿಕಾರಿಗಳಿಂದ ಬೆಳೆ ಹಾನಿ ಸಮಗ್ರ ಮಾಹಿತಿ ಪಡೆದುಕೊಂಡರು.
ರೈತರ ಅಹವಾಲುಗಳನ್ನು ಅತ್ಯಂತ ತಾಳ್ಮೆಯಿಂದ ಆಲಿಸಿದ ಸಚಿವ ಡಾ. ಎಂ.ಬಿ. ಪಾಟೀಲ್ ಅವರು, ಜಿಲ್ಲೆಯಾದ್ಯಂತ ಭೇಟಿ ನೀಡಿ ಮಳೆ ಹಾಗೂ ಬೆಳೆ ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯಾದ್ಯಂತ ಸುದೀರ್ಘ ವೀಕ್ಷಣೆ ನಡೆಸಿ ಪೂರ್ಣಪ್ರಮಾಣದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ವರದಿ ಸಲ್ಲಿಕೆಯಾದ ತಕ್ಷಣ ಸರ್ಕಾರವು ಸೂಕ್ತ ನಿರ್ಧಾರ ಕ್ರಮಗಳನ್ನು ಕೈಗೊಳ್ಳಲಿದೆ. ರೈತರ ಪ್ರತಿಯೊಂದು ಸಂಕಷ್ಟಕ್ಕೂ ಸರ್ಕಾರವು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿ, ಅವರ ಹಿತರಕ್ಷಣೆಗೆ ಸದಾ ಬದ್ಧವಾಗಿರುತ್ತದೆ ಎಂದು ಸಚಿವರು ಹೇಳಿದರು.
ಮದಭಾವಿಗೆ ಸಚಿವರ ಭೇಟಿ: ನಂತರ ಮದಭಾವಿ ಗ್ರಾಮಕ್ಕೆ ತೆರಳಿ ತೊಗರಿ ಹಾಗೂ ಹತ್ತಿ ಬೆಳೆಗಳನ್ನು ವೀಕ್ಷಿಸಿದರು. ಗ್ರಾಮದ ರೈತ ಸೋಮನಿಂಗ ಬೀರಪ್ಪ ಹಿರೇಕುರುಬರ ಅವರ ಎರಡು ಎಕರೆ ಮಳೆಯಾಶ್ರಿತ ಜಮೀನಿಗೆ ಸಚಿವರ ಭೇಟಿ ನೀಡಿ, ಬೆಳೆ ವೀಕ್ಷಣೆ ಮಾಡಿ ರೈತರ ಸಮಸ್ಯೆ ಆಲಿಸಿದರು.
ಆರಂಭದಲ್ಲಿ ತೊಗರಿ ಬಿತ್ತನೆ ಮಾಡಿ ಮಳೆ ಕೊರತೆಯಿಂದ ಬೆಳೆ ಒಣಗಿದಾಗ, ಬಳಿಕ ಹತ್ತಿ ಬಿತ್ತನೆ ಮಾಡಿ, ನಂತರ ಕೈಯಿಂದಲೇ ಬೀಜ ಊರಿ ಗೊಬ್ಬರ ಹಾಕಿದರೂ ಬೆಳೆ ಕೈಗೂಡದೆ ಕಷ್ಟದಲ್ಲಿದ್ದ ರೈತನ ನೋವಿಗೆ ಸಚಿವರು ಅತ್ಯಂತ ಆತ್ಮೀಯವಾಗಿ ಸ್ಪಂದಿಸಿದರು.
ಕಳವಳ ವ್ಯಕ್ತಪಡಿಸಿದ ಸಚಿವರು: ಇದೇ ವೇಳೆ ಗ್ರಾಮದ ಇನ್ನೋರ್ವ ರೈತರ ಸೂರ್ಯಕಾಂತಿ ಹೊಲಕ್ಕೂ ಭೇಟಿ ನೀಡಿದ ಸಚಿವರು, ಮಳೆ ಅಭಾವದಿಂದ ಶೇಕಡಾ ನೂರರಷ್ಟು ಬೆಳೆ ಹಾನಿಯಾಗಿರುವುದನ್ನು ಕಂಡು ಕಳವಳ ವ್ಯಕ್ತಪಡಿಸಿದರು.
ನಿಗದಿತ ಅವಧಿಯಲ್ಲಿ ನಾಲ್ಕು ಅಡಿ ಬೆಳೆಯಬೇಕಿದ್ದ ಸೂರ್ಯಕಾಂತಿ ಕೇವಲ ಒಂದು ಅಡಿ ಮಾತ್ರ ಬೆಳೆದು ಸಂಪೂರ್ಣ ಇಳುವರಿ ಕುಸಿದಿರುವುದನ್ನು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ನಾಗಠಾಣ ಮತಕ್ಷೇತ್ರದ ಶಾಸಕರಾದ ವಿಠ್ಠಲ ಕಟಕಧೊಂಡ, ಸಿಂದಗಿ ಶಾಸಕ ಅಶೋಕ ಮನಗೂಳಿ ಜಿಲ್ಲಾಧಿಕಾರಿಗಳಾದ ಡಾ. ಆನಂದ್ ಕೆ, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಜಂಟಿ ಕೃಷಿ ನಿರ್ದೇಶಕರಾದ ಶಿವನಗೌಡ ಪಾಟೀಲ, ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಸಿದ್ದರಾಮ ಬರಗಿಮಠ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ರೈತರು, ಸಾರ್ವಜನಿಕರು ಉಪಸ್ಥಿತರಿದ್ದರು.
ಶೀಘ್ರದಲ್ಲೇ ಸರಕಾರಕ್ಕೆ ಸಮಗ್ರ ವರದಿ
ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ತಕ್ಷಣವೇ ಸೂಕ್ತ ಹಾಗೂ ನಿಖರವಾದ ವರದಿ ಸಿದ್ಧಪಡಿಸಿ ಸಲ್ಲಿಸುವಂತೆ ಸೂಚನೆ ನೀಡಿದ ಸಚಿವರು, ಸರ್ಕಾರವು ಸಂಕಷ್ಟದಲ್ಲಿರುವ ರೈತರ ಪರವಾಗಿ ನಿಲ್ಲಲು ಸಂಪೂರ್ಣ ಬದ್ಧವಾಗಿದೆ ಎಂದು ಅಭಯ ನೀಡಿದರು. ಸದ್ಯದಲ್ಲೇ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಲಾಗುವುದು ಎಂದು ಆಶ್ವಾಸನೆ ನೀಡಿದರು.

