ವಿಜಯಪುರ ಅಭಿವೃದ್ಧಿ ಪ್ರಾಧಿಕಾರಕ್ಕೆ ಐವರು ನಾಮನಿರ್ದೇಶಿತ ಸದಸ್ಯರ ನೇಮಕ | ವಿಡಿಎ ಅಧ್ಯಕ್ಷರ ನೇತೃತ್ವದಲ್ಲಿ ಪದಗ್ರಹಣ ಸಮಾರಂಭ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ವ್ಯಾಪ್ತಿಯ ಸಮಗ್ರ ಅಭಿವೃದ್ಧಿ, ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯ ಮತ್ತು ನಾಗರಿಕ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಇಲಾಖೆಯು ಪ್ರಾಧಿಕಾರಕ್ಕೆ ಐವರು ನೂತನ ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿದೆ.
ನೂತನ ನಾಮನಿರ್ದೇಶಿತ ಸದಸ್ಯರಾಗಿ ರಮೇಶ್ ಶ್ರೀಶೈಲ್ ಆಳೂರ, ಅಬ್ದುಲ್ ಖಾದರ್ ಖಾದಿಮ, ರಮೇಶ್ ಬಾಬು ಲಮಾಣಿ, ಜಯಶ್ರೀ ಹರಿಶ್ಚಂದ ಭಾರತೆ ಹಾಗೂ ಆನಂದ ದುಂಡಪ್ಪ ಕುಸೂರ ಅವರನ್ನು ನೇಮಕ ಮಾಡಲಾಗಿದೆ.
ನೂತನ ಸದಸ್ಯರ ನೇಮಕದಿಂದ ವಿಜಯಪುರ ನಗರದ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ದೊರೆಯಲಿದೆ. ನಗರದ ರಸ್ತೆ, ಒಳಚರಂಡಿ, ಬೀದಿದೀಪ, ಉದ್ಯಾನವನಗಳ ಅಭಿವೃದ್ಧಿ, ಸಂಚಾರ ವ್ಯವಸ್ಥೆ ಸೇರಿದಂತೆ ಸಾರ್ವಜನಿಕ ಮೂಲಸೌಕರ್ಯ ಹಾಗೂ ನಾಗರಿಕ ಸೌಲಭ್ಯಗಳ ಸುಧಾರಣೆಗೆ ಆದ್ಯತೆ ನೀಡಲಾಗುವುದು ಎಂದು ನೂತನ ಸದಸ್ಯರು ತಿಳಿಸಿದ್ದಾರೆ.
ಶುಕ್ರವಾರ ನಡೆದ ಪದಗ್ರಹಣ ಸಮಾರಂಭದಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಸಹಾಯಕ ಕಾರ್ಯಪಾಲಕ ಅಭಿಯಂತರ ಶಂಭುಲಿಂಗ ಹೇರಲಗಿ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವಸಂತ ಹೊನಮೋಡೆ, ಸೋಮನಾಥ ಕಳ್ಳಿಮನಿ ಸೇರಿದಂತೆ ಅಧಿಕಾರಿ ಸಿಬ್ಬಂದಿ ಉಪಸ್ಥಿತರಿದ್ದರು.

