ವಿಜಯಪುರದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ರೈತರಿಗೆ ಸಲಹೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ತೋಟಗಾರಿಕೆ ಬೆಳೆಗಳನ್ನು ಹುಲುಸಾಗಿ ಬೆಳೆಯಲು ವಿಜಯಪುರ ಜಿಲ್ಲೆ ಸೂಕ್ತ ವಾತಾವರಣ ಹೊಂದಿದೆ. ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯವು ಹಲವಾರು ವರ್ಷಗಳಿಂದ ತೋಟಗಾರಿಕೆ ಬೆಳೆಗಳ ಮೇಲೆ ಸಂಶೋಧನೆ ಕೈಗೊಳ್ಳುತ್ತಿದೆ. ರೈತರು ಈ ಕಾರ್ಯಾಗಾರದ ಲಾಭ ಪಡೆದುಕೊಂಡು ಹುಲುಸಾದ ಬೆಳೆ, ಬೆಳೆದು ಉತ್ತಮ ಇಳುವರಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಹೇಳಿದರು.
ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ತಿಡಗುಂದಿಯ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಕೇಂದ್ರ ಹಾಗೂ ರಾಷ್ಟ್ರೀಯ ತೋಟಗಾರಿಕಾ ಮಂಡಳಿ ಸಹಯೋಗದಲ್ಲಿ ತಿಡಗುಂದಿಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ತೋಟಗಾರಿಕಾ ಮಂಡಳಿಯ ಯೋಜನೆಗಳ ಕಾರ್ಯಾಗಾರ ಹಾಗೂ ಪ್ರಮುಖ ಹೆಣ್ಣಿನ ಬೆಳೆಗಳ ಉತ್ಪಾದನಾ ತಾಂತ್ರಿಕತೆಗಳ ಕುರಿತು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ತೋಟಗಾರಿಕಾ ಮಂಡಳಿಯಿಂದ ದೊರೆಯುವ ಸೌಲಭ್ಯ ಪಡೆದುಕೊಂಡು ಬೆಳೆಗಳನ್ನು ಬೆಳೆಯಬೇಕು ಎಂದು ಸಲಹೆ ಮಾಡಿದರು.
ತೋಟಗಾರಿಕೆ ವಿಜ್ಞಾನಗಳ ವಿವಿಯ ವಿಸ್ತರಣಾ ನಿರ್ದೇಶಕ ಡಾ. ವೆಂಕಟೇಶಲು, ತೋಟಗಾರಿಕೆ ಬೆಳೆ ಮತ್ತು ರಾಷ್ಟ್ರೀಯ ತೋಟಗಾರಿಕಾ ಮಂಡಳಿ ಇವರಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಂಡು ರೈತರು ತಾಂತ್ರಿಕವಾಗಿ ಬೆಳೆ ಬೆಳೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಂಡಳಿ ಸದಸ್ಯ ಬಿ. ಎಂ. ಕೊಕರೆ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಸಿದ್ದರಾಮಯ್ಯ ಬರಗಿಮಠ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ತೋಟಗಾರಿಕೆ ವಿವಿಯ ಸಹ ಸಂಶೋಧನಾ ಮತ್ತು ವಿಸ್ತರಣಾ ನಿರ್ದೇಶಕ
ಡಾ. ವಸಂತ ಗಾಣಿಗೇರ ಭಾಗವಹಿಸಿದ್ದರು.
ತಾಂತ್ರಿಕ ಅಧಿವೇಶನದಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಂಡಳಿ ಉಪನಿರ್ದೇಶಕ ಬಿ. ರಾಜು, ಮಂಡಳಿಯಲ್ಲಿ ದೊರೆಯುವ ಸೌಲಭ್ಯಗಳನ್ನು ತಿಳಿಸಿದರೆ, ಸಹಾಯಕ ಪ್ರಾಧ್ಯಾಪಕ ಡಾ. ಸಿದ್ದಣ್ಣ ತೋಟಗಾರಿಕೆ ಬೆಳೆಗಳಲ್ಲಿ ನೂತನ ಬೇಸಾಯ ಕ್ರಮಗಳ ಕುರಿತು ಮಾಹಿತಿ ನೀಡಿದರು. ಸಸ್ಯರೋಗ ಶಾಸ್ತ್ರದ ಸಹಾಯಕ ಪ್ರಾಧ್ಯಾಪಕ ರಮೇಶ ರಾಠೋಡ, ತೋಟಗಾರಿಕೆ ಬೆಳೆಗಳಲ್ಲಿ ಮುಖ್ಯ ರೋಗಗಳು ಹಾಗೂ ಸಂರಕ್ಷಣಾ ಕ್ರಮಗಳ ಕುರಿತು ಮಾಹಿತಿ ನೀಡಿದರೆ, ಸಸ್ಯ ಶರೀರ ಕ್ರಿಯಾಶಾಸ್ತ್ರದ ಸಹ ಪ್ರಾಧ್ಯಾಪಕ ಡಾ. ಸಂಗನಸಬಸವ ಜಿ. ಗೊಳ್ಳಗಿ ಅವರು, ತೋಟಗಾರಿಕೆ ಬೆಳೆಗಳಲ್ಲಿ ಶಾರೀರಿಕ ನೂನ್ಯತೆಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸುಮಾರು ೧೬೫ ಜನ ವಿಜಯಪುರ ಜಿಲ್ಲೆಯ ರೈತರು ಭಾಗವಹಿಸಿದ್ದರು. ಕೇಂದ್ರದ ಮುಖ್ಯಸ್ಥ ಡಾ. ಸಂಗನಬಸವ ಜಿ. ಗೊಳ್ಳಗಿ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಡಾ. ಸಿದ್ದಣ್ಣ ತೋಕೆ ನಿರೂಪಿಸಿದರು.

