ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾ ಪಂಚಾಯತಿ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯವು ಸುಲಭವಾಗಿ ಸಿಕ್ಕಿದ್ದಲ್ಲ. ಅಸಂಖ್ಯಾತ ವೀರ ಧೀರರ ತ್ಯಾಗ ಮತ್ತು ಬಲಿದಾನಗಳ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತಿದೆ. ಇಂತಹ ಮಹನೀಯರ ಬಲಿದಾನವನ್ನು ನೆನಪಿಸಿಕೊಳ್ಳುವುದು ಮತ್ತು ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯವಾಗಿದೆ ಎಂದು ಸ್ಮರಿಸಿದರು.
ವಿಜಯಪುರ ಜಿಲ್ಲೆಯಲ್ಲಿರುವ ಗಾಂಧಿ ಭವನವು ಮಾದರಿಯಾಗಿದೆ ಎಂದ ಅವರು, ಅತ್ಯಂತ ಪ್ರಶಾಂತ ವಾತಾವರಣದಲ್ಲಿ ಮೈದಾಳಿರುವ ಈ ಭವನವು ಪ್ರತಿಯೊಬ್ಬರಿಗೂ ಸ್ಫೂರ್ತಿ ನೀಡುವ ತಾಣವಾಗಿದೆ. ಮಹಾತ್ಮಾ ಗಾಂಧೀಜಿಯವರು ತಮ್ಮ ಜೀವನದುದ್ದಕ್ಕೂ ಪ್ರತಿಪಾದಿಸಿದ ಅಹಿಂಸೆ, ಸತ್ಯ, ಶಾಂತಿ ಹಾಗೂ ಸರಳತೆಯಂತಹ ಉನ್ನತ ತತ್ವಾದರ್ಶಗಳು ಪ್ರತಿಯೊಬ್ಬರ ಬದುಕಿಗೂ ಬೆಳಕಿದ್ದಂತೆ. ಗಾಂಧೀಜಿಯವರ ಹೋರಾಟದ ಹಾದಿ, ಅವರ ವಿಚಾರಧಾರೆಗಳು ಮತ್ತು ಬದುಕಿನ ಮೌಲ್ಯಗಳ ಸಮಗ್ರ ಮಾಹಿತಿಯನ್ನು ಈ ಭವನವು ಒಳಗೊಂಡಿದೆ. ಇಂದಿನ ಯುವ ಪೀಳಿಗೆ ಗಾಂಧಿ ಭವನಕ್ಕೆ ಭೇಟಿ ನೀಡಿ, ಗಾಂಧೀಜಿಯವರ ಜೀವನದ ಪ್ರಮುಖ ಘಟನಾವಳಿಗಳನ್ನು ವೀಕ್ಷಿಸುವ ಮೂಲಕ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಡಾ.ಸಂತೋಷಕುಮಾರ, ಮಹಿಳಾ ಅಧಿಕಾರಿ ದೀಪಾಕ್ಷಿ ಜಾನಕಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಮರೇಶ ದೊಡಮನಿ, ವಿಜಯಕೃಷ್ಣ, ವೈ.ಭವ್ಯ, ವೈಷ್ಣವಿ ಭಗವತಿ, ಮಿಥುನ, ನಾಗೇಶ
ರತ್ನಾಂಜಲಿ, ಗಾಂಧಿ ಭವನ ನಿರ್ವಹಣಾ ಸಮಿತಿ ಸದಸ್ಯರಾದ ಫಿರೋಜ್ ರೋಜಿಂದಾರ, ಪೀಟರ್ ಅಲೆಕ್ಸಾಂಡರ್, ನೇತಾಜಿ ಗಾಂಧಿ ಸೇರಿದಂತೆ ಹಲವರು ಭಾಗವಹಿಸಿದ್ದರು.

