ವಿಜಯಪುರ ಜಿಲ್ಲೆಯಲ್ಲಿ ಸಚಿವ ಎಂ.ಬಿ.ಪಾಟೀಲ ಅವರಿಂದ ಬರ ಪರಿಸ್ಥಿತಿ ಹಾಗೂ ಬೆಳೆ ವೀಕ್ಷಣೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ತೀವ್ರ ಮಳೆ ಅಭಾವದಿಂದಾಗಿ ಜಿಲ್ಲೆಯಲ್ಲಿ ಎದುರಾಗಿರುವ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ.ಪಾಟೀಲ ಅವರು, ಭಾನುವಾರ ಜಿಲ್ಲೆಯಾದ್ಯಂತ ರೈತರ ಜಮೀನುಗಳಿಗೆ ಖುದ್ದು ಭೇಟಿ ನೀಡಿ ಹಾನಿಗೀಡಾದ ಬೆಳೆಗಳನ್ನು ಪರಿಶೀಲಿಸಿ, ಸಂಕಷ್ಟದಲ್ಲಿರುವ ರೈತರ ಪರ ನಮ್ಮ ಸರ್ಕಾರವಿದೆ ಎಂದು ಭರವಸೆ ನೀಡಿದರು.
ಇಂಡಿ ತಾಲೂಕಿನ ಹೊರ್ತಿ ಗ್ರಾಮದ ರೈತ ಮಾಳಪ್ಪ ಸೊನಕನಹಳ್ಳಿ ಅವರ ೬ ಎಕರೆ ಜಮೀನಿನಲ್ಲಿ ಒಣಗುತ್ತಿರುವ ತೊಗರಿ ಬೆಳೆಯನ್ನು ಸಚಿವರು ವೀಕ್ಷಿಸಿದರು.
ಈ ವೇಳೆ ರೈತರ ಸಮಸ್ಯೆಯನ್ನು ಸಹಾನುಭೂತಿಯಿಂದ ಆಲಿಸಿದ ಸಚಿವರು, ನಮ್ಮ ಸರ್ಕಾರವು ಸಂಕಷ್ಟದಲ್ಲಿರುವ ರೈತರ ಪರವಾಗಿ ನಿಲ್ಲುತ್ತದೆ. ರೈತರ ಕಷ್ಟ-ನಷ್ಟಗಳನ್ನು ತಿಳಿದುಕೊಳ್ಳಲು ಜಿಲ್ಲೆಯಾದ್ಯಂತ ಪ್ರವಾಸ ಕೈಗೊಳ್ಳಲಾಗಿದ್ದು, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ವೈಜ್ಞಾನಿಕ ವರದಿ ಸಿದ್ಧಪಡಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಈ ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ, ರೈತರಿಗೆ ಸೂಕ್ತ ಪರಿಹಾರ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಶೇ.ನೂರರಷ್ಟು ಹಾನಿ: ಇಂಡಿ ತಾಲೂಕಿನಲ್ಲಿ ಶೇ.೧೦೦ ರಷ್ಟು ಬೆಳೆಗಳು ಹಾನಿಗೀಡಾಗಿವೆ. ಕಳೆದ ವಾರ ಕೆಲ ಕಡೆ ಭೇಟಿ ನೀಡಿದ ವೇಳೆ ಅಲ್ಲಿಯ ಬೆಳೆಗಳು ಶೇ. ೮೦ರಷ್ಟು ಹಾಳಾಗಿದ್ದವು. ಈಗ ಶೇ. ೨೦ ರಷ್ಟು ಹಾನಿಯಾಗಲಿವೆ. ಹಾಗಾಗಿ ರೈತರು ಬೆಳೆದ ಬೆಳೆಗಳು ಸಂಪೂರ್ಣ ಹಾನಿಗೀಡಾಗಿವೆ ಎಂದು ಸಚಿವರು ತಿಳಿಸಿದರು.
ರೈತರ ಸಮಸ್ಯೆಯನ್ನು ಖುದ್ದಾಗಿ ಅನುಭವಿಸಿದೆ. ಅವರೆಲ್ಲ ತೀವ್ರ ಸಂಕಷ್ಟದಲ್ಲಿ ಇದ್ದಾರೆ. ಈ ಸತ್ಯ ಅರಿತಿರುವ ನಮ್ಮ ಸರ್ಕಾರ ರೈತರ ನೆರವಿಗೆ ಬರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
ಇಂಡಿ ತಾಲೂಕಿನಲ್ಲಿ ೪೨ ಸಾವಿರ ರೈತರು ಬೆಳೆ ವಿಮೆ ನೋಂದಣಿ ಮಾಡಿಸಿಕೊಂಡಿದ್ದಾರೆ. ಈ ಬಾರಿ ಜಿಲ್ಲಾದ್ಯಂತ ೨.೫೦ ಲಕ್ಷ ರೈತರು ಬೆಳೆ ವಿಮೆ ಮಾಡಿಕೊಂಡಿದ್ದಾರೆ ಎಂದು ಸಚಿವರು ವಿವರಿಸಿದರು.
ಜಿಲ್ಲೆಯ ಹಲವು ತಾಲೂಕುಗಳಲ್ಲಿ ಕನಿಷ್ಠ ಪ್ರಮಾಣದ ಬಿತ್ತನೆಯಾಗಿದ್ದು, ಮುಂಗಾರು ಮಳೆಯ ಸಕಾಲದಲ್ಲಿ ಬಾರದೇ ಇರುವುದರಿಂದ ರೈತರು ತೀವ್ರ ಸಮಸ್ಯೆಯಲ್ಲಿದ್ದಾರೆ. ಕೃಷಿ ಜಮೀನುಗಳಿಗೆ ನೇರ ಭೇಟಿ ನೀಡಿ ಬೆಳೆ ಬೆಳವಣಿಗೆ ನೈಜ ಚಿತ್ರಣ ಪಡೆಯುವುದರ ಜೊತೆಗೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆಯ ಕುರಿತು ಪರಿಶೀಲಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಜಮೀನುಗಳಲ್ಲಿ ತೇವಾಂಶವಿಲ್ಲ. ಒಂದ ಫೀಟ್ ಬೆಳೆ ಇದೆ.ಹಸಿ ಮಳೆಯಾಗದೇ ಇರುವುದರಿಂದ ಸಮಸ್ಯೆಯಾಗಿದೆ. ತೇವಾಂಶವಿಲ್ಲದೇ ಬೆಳೆ ಒಣಗಿವೆ. ನೀರು ಜಾಸ್ತಿ ಹಿಂಗದೇ ಬೆಳೆ ಬೆಳವಣಿಗೆ ಆಗಿಲ್ಲ ಎಂದರು.
ರೈತರ ಸಂಕಷ್ಟ ಆಲಿಸಿದ ಸಚಿವರು, ಶಕ್ತಿ ಮೀರಿ ಸರ್ಕಾರ ರೈತರ ನೆರವಿಗೆ ನಿಲ್ಲಲಿದೆ. ಜಿಲ್ಲೆಯ ಎಲ್ಲ ಭಾಗದಲ್ಲೂ ಈ ಸಮಸ್ಯೆಯಿದೆ. ನಿಮ್ಮ ಜೊತೆ ನಾವಿದ್ದೇವೆ. ಮಳೆಯಾಧಾರಿತ ಬೆಳೆ ಬೆಳವಣಿಗೆ ಕುಂಠಿತವಾಗಿವೆ. ಈ ಸಮಸ್ಯೆಯನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗುವುದು. ಸರಕಾರಕ್ಕೆ ನಿಮ್ಮ ಸಮಸ್ಯೆ ತಿಳಿದಿದೆ. ಸಿಎಂ ಅವರಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ನಾನು ಸೇರಿದಂತೆ ಈ ಭಾಗದ ಶಾಸಕರು ಸೇರಿ ಮನವಿ ಮಾಡಿ, ಸೂಕ್ತ ಪರಿಹಾರ ಕೊಡಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಸಿದ್ರಾಮ ಬರಗಿಮಠ ಸೇರಿದಂತೆ ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ರೈತರು ಸಾರ್ವಜನಿಕರು ಉಪಸ್ಥಿತರಿದ್ದರು.

