ವಿಜಯಪುರ ತಾಲ್ಲೂಕಿನ ಗ್ರಾಪಂಗಳಿಗೆ ಸಿಇಒ ರಿಷಿ ಆನಂದ ದಿಢೀರ್ ಭೇಟಿ | ಬೆಳಗ್ಗೆಯಿಂದಲೇ ಕ್ಷೇತ್ರ ಪರಿಶೀಲನೆ | ಸಿಬ್ಬಂದಿ ಹಾಜರಾತಿ, ವಿಬಿ–ಜಿ ರಾಮ್–ಜಿ ಕಾಮಗಾರಿಗಳ ಪರಿಶೀಲನೆ | ಗ್ರಾಮೀಣ ಅಭಿವೃದ್ಧಿಗೆ ವೇಗ ನೀಡಲು ಕಟ್ಟುನಿಟ್ಟಿನ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗ ರಿಷಿ ಆನಂದ ಅವರು ಸೋಮವಾರ ಬೆಳ್ಳಂಬೆಳಗ್ಗೆ ೮ ಗಂಟೆಯಿಂದಲೇ ಕ್ಷೇತ್ರ ಭೇಟಿ ಆರಂಭಿಸಿ, ವಿಜಯಪುರ ತಾಲ್ಲೂಕಿನ ಐನಾಪುರ, ಮದಭಾವಿ, ಹೊನ್ನುಟಗಿ ಹಾಗೂ ಆಹೇರಿ ಗ್ರಾಮ ಪಂಚಾಯತಿಗಳಿಗೆ ದಿಢೀರ್ ಭೇಟಿ ನೀಡಿ, ಪಂಚಾಯಿತಿ ಆಡಳಿತ, ಅಧಿಕಾರಿ–ಸಿಬ್ಬಂದಿ ಹಾಜರಾತಿ, ಸಾರ್ವಜನಿಕ ಸೇವೆ, ವಿಬಿ–ಜಿ ರಾಮ್–ಜಿ ಯೋಜನೆಯ ಅನುಷ್ಠಾನ ಹಾಗೂ ವಿವಿಧ ಗ್ರಾಮೀಣ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಸ್ಥಳದಲ್ಲಿಯೇ ಪರಿಶೀಲಿಸಿದರು.
ಸಿಇಒ ಅವರು ಕಚೇರಿ ವೇಳೆಯ ಆರಂಭಕ್ಕೂ ಮುನ್ನವೇ ಕ್ಷೇತ್ರಕ್ಕೆ ತೆರಳಿ ಗ್ರಾಮ ಪಂಚಾಯಿತಿಗಳ ಕಾರ್ಯನಿರ್ವಹಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿರುವುದು, ಗ್ರಾಮೀಣ ಅಭಿವೃದ್ಧಿ ಕಾರ್ಯಗಳಿಗೆ ಅವರು ನೀಡುತ್ತಿರುವ ಆದ್ಯತೆ ಹಾಗೂ ಆಡಳಿತದಲ್ಲಿ ಸಮಯಪಾಲನೆ ಮತ್ತು ಜವಾಬ್ದಾರಿತನಕ್ಕೆ ಒತ್ತು ನೀಡುತ್ತಿರುವುದನ್ನು ಪ್ರತಿಬಿಂಬಿಸಿತು. ದಿಢೀರ್ ಪರಿಶೀಲನೆಯ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿ–ಸಿಬ್ಬಂದಿಯ ಕರ್ತವ್ಯನಿಷ್ಠೆ, ಹಾಜರಾತಿ ಹಾಗೂ ಸಾರ್ವಜನಿಕ ಸೇವೆಯ ಸ್ಥಿತಿಗತಿಗಳನ್ನು ಪರಿಶೀಲಿಸಿದ ಅವರು, ಗ್ರಾಮ ಪಂಚಾಯಿತಿಗಳು ಸರ್ಕಾರದ ಯೋಜನೆಗಳ ಅನುಷ್ಠಾನ ಮತ್ತು ಸಾರ್ವಜನಿಕ ಸೇವೆಯ ಪ್ರಮುಖ ಕೇಂದ್ರಗಳಾಗಿರುವುದರಿಂದ ಅಧಿಕಾರಿ–ಸಿಬ್ಬಂದಿ ನಿಯಮಿತವಾಗಿ ಕರ್ತವ್ಯಕ್ಕೆ ಹಾಜರಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಸೂಚಿಸಿದರು.
ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದ ಸಿಇಒ ಅವರು ಕಚೇರಿಯ ಕಾರ್ಯನಿರ್ವಹಣೆ ಹಾಗೂ ಸಿಬ್ಬಂದಿಯ ಹಾಜರಾತಿಯನ್ನು ಪರಿಶೀಲಿಸಿದರು.
ಸರ್ಕಾರಿ ಕಚೇರಿಗಳಲ್ಲಿ ಶಿಸ್ತು, ಸಮಯಪಾಲನೆ ಮತ್ತು ಕರ್ತವ್ಯನಿಷ್ಠೆ ಅತ್ಯಂತ ಮುಖ್ಯವಾಗಿದ್ದು, ಸಾರ್ವಜನಿಕ ಸೇವೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು. ಗ್ರಾಮ ಪಂಚಾಯಿತಿ ಕಚೇರಿಗೆ ಬರುವ ಸಾರ್ವಜನಿಕರು ಯಾವುದೇ ಕಾರಣಕ್ಕೂ ಅನಗತ್ಯವಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಅರ್ಜಿಗಳು, ಮನವಿಗಳು ಹಾಗೂ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದ ವಿಚಾರಗಳನ್ನು ನಿಯಮಾನುಸಾರ ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಾರ್ವಜನಿಕರೊಂದಿಗೆ ನೇರವಾಗಿ ಸಂವಾದ ನಡೆಸಿ, ಗ್ರಾಮದಲ್ಲಿ ಅನುಷ್ಠಾನಗೊಳ್ಳುತ್ತಿರುವ ಸರ್ಕಾರಿ ಯೋಜನೆಗಳು ಹಾಗೂ ವಿಬಿ–ಜಿ ರಾಮ್–ಜಿ ಯೋಜನೆಯಡಿ ದೊರೆಯುವ ಉದ್ಯೋಗಾವಕಾಶಗಳ ಕುರಿತು ಮಾಹಿತಿ ಪಡೆದರು. ವಿಶೇಷವಾಗಿ ಐಇಸಿ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಕೈಗೊಂಡು, ಗ್ರಾಮಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಮೂಲಕ ಹೆಚ್ಚಿನ ಸಂಖ್ಯೆಯ ಕೂಲಿ ಕಾರ್ಮಿಕರನ್ನು ಕಾಮಗಾರಿಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಬಹುಹಳ್ಳಿ ಕುಡಿಯುವ ನೀರಿನ ಸಮಸ್ಯೆಯನ್ನು ಸಿಇಒ ಅವರ ಗಮನಕ್ಕೆ ತಂದಿದ್ದು, ಸಮಸ್ಯೆಯ ಕುರಿತು ಅಗತ್ಯ ಮಾಹಿತಿ ಪಡೆದುಕೊಂಡ ಅವರು, ಸಂಬಂಧಿಸಿದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸರ್ಕಾರದ ಯೋಜನೆಗಳ ಅನುಷ್ಠಾನವು ಕೇವಲ ದಾಖಲೆಗಳು ಮತ್ತು ಪ್ರಗತಿ ವರದಿಗಳಿಗೆ ಸೀಮಿತವಾಗಬಾರದು. ಯೋಜನೆಯ ನೈಜ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತಲುಪುವಂತಾಗಬೇಕು ಎಂದು ಸಿಇಒ ರಿಷಿ ಆನಂದ ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗುರುಶಾಂತಪ್ಪ ಬೆಳ್ಳುಂಡಗಿ, ಸಹಾಯಕ ನಿರ್ದೇಶಕರಾದ ಎಸ್.ಆರ್. ಕಟ್ಟಿ, ಹೊನ್ನುಟಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಧಾ ರೆಬಿನಾಳ, ಆಹೇರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಲ್ಲಿಕಾರ್ಜುನ ಮಾದರ, ತಾಂತ್ರಿಕ ಸಂಯೋಜಕರಾದ ಪರಶುರಾಮ ಶಹಾಪುರ ಹಾಗೂ ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

