ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಸೂಚನೆ | ಯೋಜನೆಯಡಿ ಕೂಲಿ ಕಾರ್ಮಿಕರ ಸಂಖ್ಯೆ ಹೆಚ್ಚಿಸಲು ಸಲಹೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಬಿಜಿ–ರಾಮ್–ಜಿ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರನ್ನು ಕಾಮಗಾರಿಗಳಲ್ಲಿ ತೊಡಗಿಸಿಕೊಂಡು ಗರಿಷ್ಠ ೨೦೦ ಕೂಲಿ ಕಾರ್ಮಿಕರಿಗೆ ಪ್ರತಿದಿನ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ ಅವರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಮತ್ತು ಇಂಗಳೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣ ಅರ್ಹ ಕುಟುಂಬಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಶಾಶ್ವತ ಆಸ್ತಿಗಳನ್ನು ಸೃಜಿಸುವ ಉದ್ದೇಶದಿಂದ ಅನುಷ್ಠಾನಗೊಳ್ಳುತ್ತಿರುವ ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್–ಗ್ರಾಮೀಣ (ವಿಬಿಜಿ–ರಾಮ್–ಜಿ) ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳಿಗೆ ಭೇಟಿ ನೀಡಿ ಅವರು ಮಾತನಾಡಿದರು.
ಈ ಯೋಜನೆಯಡಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬ ಕೂಲಿ ಕಾರ್ಮಿಕರ ಹಾಜರಾತಿಯನ್ನು ಪ್ರತಿದಿನ ಎನ್ಎಂಎಂಎಸ್ ಆ್ಯಪ್ ಮೂಲಕ ಕಡ್ಡಾಯವಾಗಿ ದಾಖಲಿಸಬೇಕು ಹಾಗೂ ಹಾಜರಾತಿ ಮತ್ತು ಮಾನವ ದಿನಗಳ ಸೃಜನೆಗೆ ಸಂಬಂಧಿಸಿದಂತೆ ಯಾವುದೇ ಲೋಪವಾಗದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಎಚ್ಚರಿಕೆ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಗ್ರಾಮೀಣ ಕೂಲಿ ಕಾರ್ಮಿಕರಿಗೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಗಳ ಕ್ರಿಯಾ ಯೋಜನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಆಧಾರಿತ ಕಾಮಗಾರಿಗಳನ್ನು ಸೇರ್ಪಡೆಗೊಳಿಸಬೇಕು. ಗ್ರಾಮಗಳ ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಕೆರೆ, ಜಲಸಂರಕ್ಷಣೆ, ಕೃಷಿ ಹೊಂಡ ಸೇರಿದಂತೆ ವೈಯಕ್ತಿಕ ಫಲಾನುಭವಿ ಆಧಾರಿತ ಕಾಮಗಾರಿಗಳನ್ನು ಗುರುತಿಸಿ ಅರ್ಹ ಕುಟುಂಬಗಳನ್ನು ಯೋಜನೆಯಡಿ ತೊಡಗಿಸಿಕೊಳ್ಳಬೇಕು ಎಂದು ಪಿಡಿಒಗಳಿಗೆ ಸೂಚಿಸಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಜಾಬ್ ಕಾರ್ಡ್ ಮೇಳಗಳನ್ನು ಆಯೋಜಿಸಿ, ಅರ್ಹ ಕೂಲಿ ಕಾರ್ಮಿಕರಿಗೆ ಜಾಬ್ ಕಾರ್ಡ್ ಒದಗಿಸುವ ಮೂಲಕ ಹೆಚ್ಚಿನ ಸಂಖ್ಯೆಯ ಗ್ರಾಮೀಣ ಕುಟುಂಬಗಳನ್ನು ಯೋಜನೆಯ ವ್ಯಾಪ್ತಿಗೆ ತರಬೇಕು ಹಾಗೂ ಅವರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ವೆಂಕಟೇಶ ವಂದಾಲ, ಸಹಾಯಕ ನಿರ್ದೇಶಕರು (ಗ್ರಾಮೀಣ ಉದ್ಯೋಗ) ಪ್ರಕಾಶ ದೇಸಾಯಿ, ತಾಂತ್ರಿಕ ಸಂಯೋಜಕ ವಿಶ್ವನಾಥ ಪಟ್ಟಣಶೆಟ್ಟಿ, ಐಇಸಿ ಸಂಯೋಜಕ ಮಡಿವಾಳಪ್ಪ ಬಿರಾದಾರ, ತಾಂತ್ರಿಕ ಸಹಾಯಕರಾದ ಚಂದ್ರಶೇಖರ ಆಡಿನ, ಉಕ್ಕಲಿ ಗ್ರಾಮ ಪಂಚಾಯಿತಿ ಪಿಡಿಒ ಮಲ್ಲಿಕಾರ್ಜುನ ಹಿಟ್ಟಿನಳ್ಳಿ, ಇಂಗಳೇಶ್ವರ ಗ್ರಾಮ ಪಂಚಾಯಿತಿ ಪಿಡಿಒ ಜಯಕುಮಾರ ದೇವರನಾವದಗಿ, ಕಾರ್ಯದರ್ಶಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಕಾಯಕಬಂಧುಗಳು ಹಾಗೂ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.

