ಹಿಂದುಳಿದ ವರ್ಗಗಳ ಧೀಮಂತ ನಾಯಕ ಡಿ.ದೇವರಾಜ ಅರಸು ಜನ್ಮ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಶೋಷಿತ, ದಮನಿತ ಹಾಗೂ ದೀನ-ದಲಿತ ಸಮುದಾಯಗಳ ಸಮಗ್ರ ಏಳಿಗೆಗಾಗಿ ಡಿ. ದೇವರಾಜ ಅರಸು ಅವರು ರೂಪಿಸಿ ಜಾರಿಗೆ ತಂದ ಕ್ರಾಂತಿಕಾರಿ ಯೋಜನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಹೇಳಿದರು
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಗುರುವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಾಮಾಜಿಕ ಪರಿವರ್ತನೆಯ ಹರಿಕಾರ, ಹಿಂದುಳಿದ ವರ್ಗಗಳ ಧೀಮಂತ ನಾಯಕ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ೧೧೧ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಡಿ. ದೇವರಾಜ ಅರಸು ಅವರು ಊಳುವವನೇ ಭೂ ಒಡೆಯ ಎಂಬ ಐತಿಹಾಸಿಕ ಭೂಸುಧಾರಣಾ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಅನೇಕ ಭೂರಹಿತ ಗೇಣಿದಾರರಿಗೆ ಜಮೀನಿನ ಹಕ್ಕು ದೊರಕಿಸಿಕೊಟ್ಟು, ಸಮಾಜದಲ್ಲಿ ನೆಲೆಸಿದ್ದ ಅಸಮಾನತೆಯನ್ನು ಕೊನೆಗಾಣಿಸಿ ಆರ್ಥಿಕ ಸಮಾನತೆ ತರಲು ಶ್ರಮಿಸಿದರು. ಆ ಕಾಲದಲ್ಲೇ ಅವರು ಆರಂಭಿಸಿದ ಸ್ಟೈಪಂಡರಿ ಹಾಗೂ ಶೈಕ್ಷಣಿಕ ನೆರವಿನ ಯೋಜನೆಗಳು, ವಿದ್ಯಾರ್ಥಿವೇತನ ಯೋಜನೆಗಳಿಗೆ ಬಲವಾದ ತಳಪಾಯವಾಗಿವೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಅರಸು ಅವರು ಸಮಾಜದ ಹಿಂದುಳಿದವರಿಗೆ ಸಾಮಾಜಿಕವಾಗಿ ನ್ಯಾಯ ದೊರಕಿಸಿಕೊಡುವಲ್ಲಿ ಅಭೂತಪೂರ್ವ ಸುಧಾರಣೆಗಳನ್ನು ತಂದರು. ಜೀತಪದ್ಧತಿಯಂತಹ ಅಮಾನವೀಯ ಆಚರಣೆಗಳನ್ನು ಕಾನೂನುಬದ್ಧವಾಗಿ ತೊಡೆದುಹಾಕಿ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆವಸತಿ ನಿಲಯಗಳನ್ನು ಸ್ಥಾಪಿಸಿದರು. ಇಂದಿಗೂ ಸರ್ಕಾರದ ಈ ಸೌಲಭ್ಯಗಳನ್ನು ಸಮರ್ಥವಾಗಿ ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದರು. ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಣಮಂತ ಬಿ. ಪೂಜಾರಿ ಉಪನ್ಯಾಸ ನೀಡಿದರು.
ಇದೇ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕ ಗಳಿಸಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನ ಸನ್ಮಾನಿಸಿ, ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ, ಡಿಎಸ್ಪಿ ಎಂ.ಎ. ಉಪಾಸೆ, ಜಿಲ್ಲಾ ಖಜಾನಾಧಿಕಾರಿ ಆನಂದ ಮುಚ್ಚಂಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಣಮಂತ ಕಾಲತಿಪ್ಪಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ದೇವರಾಜ ಅರಸು ಅಭಿಮಾನಿಗಳ ಬಳಗದ ಸದಸ್ಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಅರಸು ಭಾವಚಿತ್ರ ಮೆರವಣಿಗೆ
ಸಮಾರಂಭಕ್ಕೂ ಮುನ್ನ ಬೆಳಿಗ್ಗೆ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಡಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಭವ್ಯ ಮೆರವಣಿಗೆಗೆ ಅದ್ಧೂರಿ ಚಾಲನೆ ನೀಡಲಾಯಿತು.
ವಿವಿಧ ಜಾನಪದ ಕಲಾತಂಡಗಳ ಕಲಾ ವೈಭವದೊಂದಿಗೆ ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳ ಮೂಲಕ ಸಾಗಿದ ಮೆರವಣಿಗೆಯು ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಯಶಸ್ವಿಯಾಗಿ ಸಮಾವೇಶಗೊಂಡಿತು.

