ಉದಯರಶ್ಮಿ ದಿನಪತ್ರಿಕೆ
ಚಡಚಣ: ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ವಿದ್ಯಾಭಾರತಿ ಪೂರ್ವ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆ, ಚಡಚಣದಲ್ಲಿ ವೇದಾಸ್ ಮೆಡಿಕಲ್ ಕೇರ್ ತಂಡದ ವೈದ್ಯರಿಂದ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ಶಿಬಿರದಲ್ಲಿ ವಿದ್ಯಾರ್ಥಿಗಳ ಕಣ್ಣು, ಕಿವಿ, ಮೂಗು, ಹಲ್ಲು ಹಾಗೂ ಗಂಟಲು ಸೇರಿದಂತೆ ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಲಾಯಿತು.
ಮಕ್ಕಳಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ, ತಪಾಸಣೆಯ ವೇಳೆ ಆರೋಗ್ಯ ಸಮಸ್ಯೆಗಳು ಕಂಡುಬಂದ ಮಕ್ಕಳಿಗೆ ಅಗತ್ಯ ವೈದ್ಯಕೀಯ ಸಲಹೆ ಹಾಗೂ ಸೂಕ್ತ ಮಾರ್ಗದರ್ಶನ ನೀಡಲಾಯಿತು.
ಹಿರಿಯ ದಂತ ವೈದ್ಯ ಡಾ. ಪ್ರವೀಣಕುಮಾರ ಕೊಠ, ಹಿರಿಯ ವೈದ್ಯರಾದ ಡಾ. ಸಂಜು ಜೋಶಿ ಹಾಗೂ ಡಾ. ಬಸಿಮ್ ಪಾಟೀಲ, ಕಿವಿ ತಜ್ಞೆ ಡಾ. ಆಶ್ವಿನಿ ಮತ್ತು ಕಣ್ಣಿನ ವೈದ್ಯ ಡಾ. ಶಿವಾನಂದ ಮಳಿ ಅವರು ಮಕ್ಕಳ ಆರೋಗ್ಯ ತಪಾಸಣೆ ನಡೆಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಕೆ.ಪಿ. ಬೋಳೆಗಾಂವ ಹಾಗೂ ಮುಖ್ಯಗುರು ಆರ್.ಎಸ್. ಬಣಗಾರ್ ಉಪಸ್ಥಿತರಿದ್ದು, ಮಕ್ಕಳ ಆರೋಗ್ಯ ಕಾಪಾಡುವಲ್ಲಿ ಇಂತಹ ಶಿಬಿರಗಳ ಮಹತ್ವದ ಕುರಿತು ಮಾತನಾಡಿದರು.
ಶಾಲಾ ಹಂತದಲ್ಲಿಯೇ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು, ಯಾವುದೇ ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲಿಯೇ ಗುರುತಿಸಿ ಸೂಕ್ತ ಚಿಕಿತ್ಸೆ ಪಡೆಯುವುದು ಹಾಗೂ ಮಕ್ಕಳಲ್ಲಿ ಆರೋಗ್ಯಕರ ಜೀವನಶೈಲಿಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಶಿಬಿರ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಎಸ್.ಎಸ್. ಪೂಜಾರಿ ನಿರೂಪಿಸಿದರು. ವೈದ್ಯಕೀಯ ತಂಡದ ಸೇವೆಗೆ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದರು.

