ಉದಯರಶ್ಮಿ ದಿನಪತ್ರಿಕೆ
ಚಡಚಣ: ಕೃಷಿಯನ್ನೇ ಪ್ರಮುಖ ಕಸುಬನ್ನಾಗಿಸಿಕೊಂಡಿರುವ ರೈತರು ಸಾಂಪ್ರದಾಯಿಕ ಬೆಳೆಗಳೊಂದಿಗೆ ತೋಟಗಾರಿಕೆ ಬೆಳೆಗಳನ್ನೂ ಬೆಳೆಯುವ ಮೂಲಕ ಕಡಿಮೆ ಅವಧಿಯಲ್ಲಿ ಹೆಚ್ಚಿನ ಆದಾಯ ಗಳಿಸಿ ಆರ್ಥಿಕವಾಗಿ ಸದೃಢರಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಇಂಡಿ ತಾಲ್ಲೂಕು ಯೋಜನಾಧಿಕಾರಿ ನಟರಾಜ್ ಎಲ್.ಎಂ. ಹೇಳಿದರು.
ಚಡಚಣ ತಾಲೂಕಿನ ಲೋಣಿ ಬಿ.ಕೆ. ವಲಯದ ಲಮಾಣಿಹಟ್ಟಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮದಡಿ ‘ತೋಟಗಾರಿಕೆ ಬೆಳೆಗಳ ಬೇಸಾಯ ಮತ್ತು ತಾಂತ್ರಿಕತೆ’ ಕುರಿತು ಹಮ್ಮಿಕೊಂಡಿದ್ದ ಮಾಹಿತಿ ಕಾರ್ಯಾಗಾರವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ನಿತ್ಯ ಜೀವನದ ಪ್ರಮುಖ ಕಸುಬು ಕೃಷಿಯಾಗಿರುವುದರಿಂದ ರೈತರು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ, ಆಧುನಿಕ ತಂತ್ರಜ್ಞಾನ ಹಾಗೂ ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು. ಕಡಿಮೆ ಅವಧಿಯಲ್ಲಿ ಉತ್ತಮ ಇಳುವರಿ ಹಾಗೂ ಹೆಚ್ಚಿನ ಆದಾಯ ನೀಡುವ ತೋಟಗಾರಿಕೆ ಬೆಳೆಗಳನ್ನು ಬೆಳೆಯುವುದರಿಂದ ರೈತರ ಆದಾಯವನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಿದೆ ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸಹಾಯಕ ತೋಟಗಾರಿಕೆ ಅಧಿಕಾರಿ ರಮೇಶ ರಾಠೋಡ ಅವರು ತೋಟಗಾರಿಕೆ ಇಲಾಖೆಯಿಂದ ರೈತರಿಗೆ ದೊರೆಯುವ ವಿವಿಧ ಅನುದಾನಗಳು, ಸೌಲಭ್ಯಗಳು ಹಾಗೂ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ರೈತ ಸಂಪರ್ಕ ಕೇಂದ್ರದ ಅಧಿಕಾರಿ ಪ್ರಭು ಅರವತ್ತಿ ಅವರು ತೋಟಗಾರಿಕೆ ಬೆಳೆಗಳನ್ನು ಯಾವ ರೀತಿಯಲ್ಲಿ ಹಾಗೂ ಯಾವ ವಿಧಾನದಲ್ಲಿ ಬೆಳೆಯಬೇಕು, ಕೃಷಿಯಲ್ಲಿ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ವಿಧಾನ, ಬೆಳೆ ನಿರ್ವಹಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ರೈತರಿಗೆ ತಾಂತ್ರಿಕ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮೇಲ್ವಿಚಾರಕ ಮಹಾಂತೇಶ್ ವಿ.ಎ.ಸ್ವಾಗತಿಸಿದರು. ತಾಲ್ಲೂಕು ಕೃಷಿ ಮೇಲ್ವಿಚಾರಕ ಸುದೀಪ್ ಎಸ್.ಕೆ. ವಂದಿಸಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಶೈಲ್ ಬಿರಾದಾರ, ಜಾನಕಿ ಬಿರಾದಾರ, ಅನಿತಾ ಬಿರಾದಾರ, ಸವಿತಾ ಬಿರಾದಾರ,ಸ್ಥಳೀಯ ಸೇವಾಪ್ರತಿನಿಧಿ ಲಕ್ಷ್ಮೀ ಹಿರೇಮಠ ಸೇರಿದಂತೆ ಸಂಘದ ಸದಸ್ಯರು ಹಾಗೂ ರೈತರು ಉಪಸ್ಥಿತರಿದ್ದರು.

