ಮಹಿಳಾ ಸ್ಪಂದನಾ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪಾಶ್ ಕಾಯ್ದೆ ಇಡೀ ದೇಶದಲ್ಲಿ ಮೊದಲನೇ ಸ್ಥಾನದಲ್ಲಿದ್ದೇವೆ. ಈ ಕಾಯ್ದೆಯ ಉದ್ದೇಶ ಸಫಲಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಇಲಾಖೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತಿಯಲ್ಲಿ ಮಂಗಳವಾರ ನಡೆದ ಮಹಿಳಾ ಸ್ಪಂದನಾ ಮತ್ತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೊಟೇಲ್, ರೆಸಾರ್ಟ್ ಮತ್ತಿತರ ಕಡೆಗಳಲ್ಲಿ ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿ ಪಾಶ್ ಕಾರ್ಯ ನಿರ್ವಹಿಸುವಂತಾಗಲಿ. ತನ್ಮೂಲಕ ಮಹಿಳೆಯರಿಗೆ ಸುರಕ್ಷತಾ ಭಾವ ಮೂಡಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಆಗಾಗ ಪಾಶ್ ತರಬೇತಿ ಆಯೋಜಿಸಲು ಸಲಹೆ ಮಾಡಿದ ಅವರು, ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಯುವಂತೆ ನೋಡಿಕೊಳ್ಳಬೇಕು ಎಂದೂ ತಾಕೀತು ಮಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಿರುವ ಅಂಗನವಾಡಿಗಳಲ್ಲಿ ಯಾವುದೇ ದೂರು ಬಾರದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಖುದ್ದಾಗಿ ಕೇಂದ್ರಗಳಿಗೆ ಭೇಟಿ ನೀಡಬೇಕು. ಅಂಗನವಾಡಿಗಳಲ್ಲಿ ಸಮರ್ಪಕ ಪೌಷ್ಟಿಕ ಆಹಾರ ಒದಗಿಸಲು ಖಚಿತಪಡಿಸಿಕೊಳ್ಳಬೇಕು ಸೂಚಿಸಿದರು.
ಜಿಲ್ಲೆಯ ಜನತೆಗೆ ಶುದ್ಧ ಕುಡಿಯುವ ನೀರು ಪೂರೈಸಿ, ಎಲ್ಲೆಲ್ಲಿ ತೊಂದರೆ ಇದೆಯೋ ಅಲ್ಲಿ ಪರಿಶೀಲಿಸುವ ಮೂಲಕ ಜನರಿಗೆ ಶುದ್ಧ ನೀರು ಸರಬರಾಜು ಮಾಡಬೇಕು ಎಂದರು.
ಸಭೆ ಬಳಿಕ, ಆಗಮಿಸಿದ ಮಹಿಳೆಯರ ಕುಂದು ಕೊರತೆ ಸಹಾನುಭೂತಿಯಿಂದ ಆಲಿಸಿ, ಅವರ ಸಮಸ್ಯೆಗಳಿಗೆ ಸ್ಪಂದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಆನಂದ.ಕೆ ಅವರು ಇದ್ದು ಮಹಿಳೆಯರ ಕುಂದು ಕೊರತೆ ಆಲಿಸಿ, ಮಹಿಳಾ ಆಯೋಗದ ಅಧ್ಯಕ್ಷರೊಂದಿಗೆ ಪರಿಹರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳಾದ ರಿಷಿ ಆನಂದ, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ ಆರ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಡಾ. ಸಂತೋಷಕುಮಾರ ಎಚ್. ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಕೆರೆಗಳಿಗೆ ನೀರು ಹರಿಸಿ
ಪಾಂಗ್ರೂನ್ ದೊಡ್ಡಿಯಲ್ಲಿ ವಾಸವಾಗಿರುವ ಜನರು ಹಾಗೂ ಸುತ್ತಲಿನವರಿಗೆ ಆ ಭಾಗದಲ್ಲಿರುವ ಕೆರೆಗಳಿಗೆ ನೀರು ಹರಿಸಿ, ಕುರಿಗಳಿಗೆ ಕುಡಿಯಲು ನೀರು ಕಲ್ಪಿಸಲು ಅನುಕೂಲ ಮಾಡಿಕೊಡಿ. ಸರ್ಕಾರದ ಯೋಜನೆಗಳ ಬಗ್ಗೆ ಅಲ್ಲಿನ ಜನತೆಗೆ ತಿಳುವಳಿಕೆ ನೀಡಬೇಕು. ಅಲ್ಲಿನ ಜನರಿಗೆ ಸಾರಿಗೆ ಸೌಕರ್ಯ ಕಲ್ಪಿಸಬೇಕು. ದೊಡ್ಡಿಯ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದ ಅವರು, ಒಟ್ಟಾರೆ ಕುಡಿಯುವ ನೀರು, ಶೌಚಾಲಯ, ಸಮುದಾಯ ಶೌಚಾಲಯಕ್ಕೆ ಆದ್ಯತೆ ನೀಡಬೇಕು ಎಂದರು.

