ವಿಜಯಪುರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ೧೨ ದಿನಗಳ ಸೇನಾ ನೇಮಕಾತಿ ಪ್ರಕ್ರಿಯೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಂಗಳೂರು ಸೇನಾ ನೇಮಕಾತಿ ಕಚೇರಿ ಹಾಗೂ ವಿಜಯಪುರ ಜಿಲ್ಲಾಡಳಿತದ ಸಹಯೋಗದಲ್ಲಿ ಸೆ. ೧೦ ರಿಂದ ೨೨ರವರೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಬೃಹತ್ ಅಗ್ನಿವೀರ ನೇಮಕಾತಿ ರ್ಯಾಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಹಾಗೂ ಮಂಗಳೂರಿನ ಸೇನಾ ನೇಮಕಾತಿ ಅಧಿಕಾರಿ ಕರ್ನಲ್ ಸೋಮು ಅವರು ತಿಳಿಸಿದ್ದಾರೆ. ಜೂ.೧ರಿಂದ ೧೨ರವರೆಗೆ ನಡೆದ ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶಾರ್ಟ್ಲಿಸ್ಟ್ ಆಗಿರುವ ಅಭ್ಯರ್ಥಿಗಳು ಈ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ. ಕರ್ನಾಟಕದ ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಭ್ಯರ್ಥಿಗಳಿಗೆ ರ್ಯಾಲಿಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
ಅಗ್ನಿವೀರ ಜನರಲ್ ಡ್ಯೂಟಿ, ಟೆಕ್ನಿಕಲ್, ಕ್ಲರ್ಕ್, ಸ್ಟೋರ್ ಕೀಪರ್ ಟೆಕ್ನಿಕಲ್, ಟ್ರೇಡ್ಸ್ಮನ್ (೧೦ನೇ ತರಗತಿ) ಹಾಗೂ ಟ್ರೇಡ್ಸ್ಮನ್ (೮ನೇ ತರಗತಿ) ವಿಭಾಗಗಳ ಹುದ್ದೆಗಳಿಗೆ ಅಭ್ಯರ್ಥಿಗಳು ಸ್ಪರ್ಧಿಸಬಹುದಾಗಿದೆ. ಇದರೊಂದಿಗೆ ಆರ್ ಟಿ, ಜೆಸಿಒ, ಎಸ್ ಒಎಲ್, ಎನ್ ಎ, ಸೆಪ್ ಫಾರ್ಮಾ ಹಾಗೂ ಎಚ್ ಎವಿ ಇಡಿಎನ್ ಸೇರಿದಂತೆ ಕಾಯಂ ಹುದ್ದೆಗಳಿಗಾಗಿ ಕರ್ನಾಟಕ ಹಾಗೂ ಕೇರಳ ರಾಜ್ಯಗಳಿಂದ ಶಾರ್ಟ್ಲಿಸ್ಟ್ ಆಗಿರುವ ಅಭ್ಯರ್ಥಿಗಳೂ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸೇನಾ ನೇಮಕಾತಿ ಅಧಿಕಾರಿ ಕರ್ನಲ್ ಸೋಮು ತಿಳಿಸಿದ್ದಾರೆ. ಈಗಾಗಲೇ ಸಿಇಇ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ನೀಡಲಾಗಿದೆ. ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ನೇಮಕಾತಿ ಜಾಲತಾಣ ರಿoiಟಿiಟಿಜiಚಿಟಿಚಿಡಿmಥಿ.ಟಿiಛಿ.iಟಿ ಗೆ ಭೇಟಿ ನೀಡಿ, ತಮ್ಮ ಲಾಗಿನ್ ಐಡಿ ಅಥವಾ ನೋಂದಾಯಿತ ಇ-ಮೇಲ್ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ವಯೋಮಿತಿ, ಶೈಕ್ಷಣಿಕ ಅರ್ಹತೆ, ಅಗತ್ಯ ದಾಖಲೆಗಳು ಹಾಗೂ ಇತರೆ ನಿಯಮಗಳ ಕುರಿತು ಅಧಿಕೃತ ಜಾಲತಾಣದಲ್ಲಿ ಸಂಪೂರ್ಣ ಮಾಹಿತಿ ಲಭ್ಯವಿದೆ ತಿಳಿಸಿದ್ದಾರೆ. ಪಾರದರ್ಶಕ ನೇಮಕಾತಿ: ನೇಮಕಾತಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆಗೆ ಆದ್ಯತೆ ನೀಡಲಾಗಿದ್ದು, ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ಅಂತಿಮ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.ಅಭ್ಯರ್ಥಿಗಳು ದಲ್ಲಾಳಿಗಳು ಅಥವಾ ಮಧ್ಯವರ್ತಿಗಳ ಸುಳ್ಳು ಭರವಸೆಗಳಿಗೆ ಒಳಗಾಗದೆ, ಅಧಿಕೃತ ಸೇನಾ ನೇಮಕಾತಿ ಜಾಲತಾಣದಲ್ಲಿ ಪ್ರಕಟವಾಗುವ ಮಾಹಿತಿಯನ್ನು ಮಾತ್ರ ಆಧರಿಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಸೇನಾ ನೇಮಕಾತಿ ಕಚೇರಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ನೇಮಕಾತಿಗೆ ಸಂಬಂಧಿಸಿದಂತೆ ಹಣ ಪಡೆದು ಉದ್ಯೋಗ ಕೊಡಿಸುವುದಾಗಿ ಯಾರಾದರೂ ಭರವಸೆ ನೀಡಿದರೆ ಅಂತಹ ವ್ಯಕ್ತಿಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಅಭ್ಯರ್ಥಿಗಳಿಗೆ ಪ್ರಕಟಣೆಯಲ್ಲಿ ಸೇನಾ ನೇಮಕಾತಿ ಅಧಿಕಾರಿಗಳು ಸಲಹೆ ಮಾಡಿದ್ದಾರೆ.
