ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಹೊರವಲಯದಲ್ಲಿರುವ ಐತಿಹಾಸಿಕ ಭೂತನಾಳ ಕೆರೆಯಲ್ಲಿ 6 ಮಂದಿಯ ಶವಗಳು ಪತ್ತೆಯಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮೃತರಲ್ಲಿ ನಾಲ್ವರು ಮಹಿಳೆಯರು ಹಾಗೂ ಇಬ್ಬರು ಬಾಲಕರು ಸೇರಿದ್ದಾರೆ.
ಕೆರೆ ವೀಕ್ಷಣೆಗೆ ಬಂದ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದ್ದು, ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಕೆರೆಯ ಅಂಚಿನಲ್ಲಿ ಶವಗಳು ತೇಲಿ ಬಂದಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ನಗರ ಡಿವೈಎಸ್ಪಿ ನಾಗರಾಜ್, ಆದರ್ಶ ನಗರ ಪೊಲೀಸ್ ಠಾಣೆಯ ಪಿಎಸ್ಐ ಸೀತಾರಾಮ ಲಮಾಣಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಿಂದ ಶವಗಳನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಸಿದ್ದಾರೆ.
ಮೃತರ ಹೆಸರು ಹಾಗೂ ವಿಳಾಸ ಇನ್ನೂ ಪತ್ತೆಯಾಗಿಲ್ಲ. ಮೃತರ ಗುರುತು ಪತ್ತೆಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪೊಲೀಸ್ ತನಿಖೆ ಹಾಗೂ ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬಳಿಕ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ.
