ಸ್ಥಳ ಪರಿಶೀಲಿಸಿ ಅಂತಿಮ ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ಆನಂದ.ಕೆ ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಅಗತ್ಯಕ್ಕೆ ತಕ್ಕಂತೆ ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ಶಾಶ್ವತ ಹೊಂಡ ನಿರ್ಮಿಸಲು ಸೂಕ್ತ ಜಾಗ ಗುರುತಿಸಿ, ಸ್ಥಳ ವೀಕ್ಷಣೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ೨೦೨೬-೨೭ನೇ ಸಾಲಿನ ಗಣೇಶೋತ್ಸವದ ಹಿನ್ನೆಲೆಯಲ್ಲಿ ಬುಧವಾರ ಆಯೋಜಿಸಲಾಗಿದ್ದ ನಗರದ ವಿವಿಧ ಗಜಾನನ ಮಹಾಮಂಡಳಿಗಳು, ಜನಪ್ರತಿನಿಧಿಗಳು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಜಯಪುರ ನಗರದ ಐತಿಹಾಸಿಕ ಸ್ಮಾರಕವಾದ ತಾಸಬಾವಡಿಯನ್ನು ಪ್ರಸ್ತುತ ಟಾಟಾ ಕನ್ಸಲ್ಟನ್ಸಿ ಸರ್ವಿಸಸ್ ಸಂಸ್ಥೆಯು ಪುನರುಜ್ಜೀವನಗೊಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ತಾಸಬಾವಡಿಯಲ್ಲಿ ವಿಸರ್ಜನಾ ಹೊಂಡ ನಿರ್ಮಿಸಿದರೆ ಸ್ಥಳಾವಕಾಶ ಕಡಿಮೆಯಾಗುವ ಸಾಧ್ಯತೆ ಇರುವುದರಿಂದ, ನಗರದ ಬೇರೆ ಬೇರೆ ಸೂಕ್ತ ಸ್ಥಳಗಳಲ್ಲಿ ಶಾಶ್ವತ ಹೊಂಡ ನಿರ್ಮಿಸುವ ಕುರಿತು ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು.
ಗಜಾನನ ಮಹಾಮಂಡಳದ ಪದಾಧಿಕಾರಿಗಳು ಹಾಗೂ ಅಧಿಕಾರಿಗಳ ಜಂಟಿ ತಂಡವು ಆಗಸ್ಟ್ ೨೭ ರಂದು ನಗರದ ವಿವಿಧ ಜಾಗಗಳಿಗೆ ಭೇಟಿ ನೀಡಿ, ಸ್ಥಳ ವೀಕ್ಷಣೆ ನಡೆಸಲಿದೆ. ಸೂಕ್ತ ಸ್ಥಳವನ್ನು ಅಂತಿಮವಾಗಿ ಗುರುತಿಸಿದ ನಂತರ, ಈ ವಿಷಯವನ್ನು ವಿಜಯಪುರ ಮಹಾನಗರ ಪಾಲಿಕೆಯ ಮುಂಬರುವ ಸಾಮಾನ್ಯ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದು ಅಂತಿಮ ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯ ಸಭೆ ತೀರ್ಮಾನಿಸಿತು.
ಈ ಸಭೆಯಲ್ಲಿ ಮಾಜಿ ಸಚಿವರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಹಾನಗರ ಪಾಲಿಕೆ ಮೇಯರ್ ಎಂ. ಎಸ್. ಕರಡಿ, ಉಪ ಮೇಯರ್ ಶ್ರೀಮತಿ ಸುಮಿತ್ರಾ ಜಾಧವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಪಾಲಿಕೆಯ ಎಲ್ಲಾ ಗೌರವಾನ್ವಿತ ಸದಸ್ಯರು ಹಾಗೂ ನಗರದ ಗಜಾನನ ಮಹಾಮಂಡಳದ ಪದಾಧಿಕಾರಿಗಳು ಉಪಸ್ಥಿತರಿದ್ದರು.

