ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬಾಯಿ, ಸ್ತನ ಹಾಗೂ ಗರ್ಭಕಂಠ ಕ್ಯಾನ್ಸರ್ಗಳ ಕುರಿತು ಪ್ರತಿಯೊಬ್ಬರೂ ಜಾಗೃತರಾಗಿರಬೇಕು. ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿ, ಅನಾರೋಗ್ಯಕರ ಆಹಾರ ಪದ್ಧತಿ, ಪರಿಸರ ಅಂಶಗಳು ಕ್ಯಾನ್ಸರ್ ಪ್ರಕರಣಗಳು ಹೆಚ್ಚಳಕ್ಕೆ ಕಾರಣ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಮಲ್ಲನಗೌಡ ಬಿರಾದಾರ ಅವರು ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಆರೋಗ್ಯ ಸೌಧ ಸಭಾ ಭವನದಲ್ಲಿ ಗುರುವಾರ ಸಿಂದಗಿ ತಾಲೂಕಿನ ಆಶಾ ಕಾರ್ಯಕರ್ತೆಯರಿಗಾಗಿ ಆಯೋಜಿಸಲಾಗಿದ್ದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಿಯಮಿತ ವ್ಯಾಯಾಮ, ಆರೋಗ್ಯಕರ ಆಹಾರ, ತಂಬಾಕು ಹಾಗೂ ಮದ್ಯಪಾನ ತ್ಯಜಿಸುವುದರ ಜೊತೆಗೆ ಆರಂಭಿಕ ಹಂತದಲ್ಲೇ ರೋಗ ಪತ್ತೆ ಹಚ್ಚುವುದರಿಂದ ಕ್ಯಾನ್ಸರ್ ಅಪಾಯದಿಂದ ಪಾರಾಗಬಹುದು ಎಂದು ಸಲಹೆ ನೀಡಿದರು. ಇಂಡಿಯನ್ ಕ್ಯಾನ್ಸರ್ ಸೊಸೈಟಿಯ ಪ್ರಾದೇಶಿಕ ವ್ಯವಸ್ಥಾಪಕ ಡಾ. ಗುರುರಾಜ ಕುಲಕರ್ಣಿ ಮಾತನಾಡಿ, ಸ್ತನ ಮತ್ತು ಗರ್ಭಕಂಠ ಕ್ಯಾನ್ಸರ್ ಬರಲು ಕಾರಣಗಳು ಹಾಗೂ ಅವುಗಳ ತಪಾಸಣಾ ವಿಧಾನಗಳ ಕುರಿತು ವಿವರಣೆ ನೀಡಿ, ಆಶಾ ಕಾರ್ಯಕರ್ತೆಯರಿಗೆ ಕ್ಯಾನ್ಸರ್ ಜಾಗೃತಿ ಕೈಪಿಡಿ ವಿತರಿಸಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಅಪ್ಪಾಸಾಹೇಬ ಇನಾಮದಾರ ಮಾತನಾಡಿ, ಗೃಹ ಆರೋಗ್ಯ ಕಾರ್ಯಕ್ರಮದಡಿ ಮನೆ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವಂತೆ ಆಶಾ ಕಾರ್ಯಕರ್ತೆಯರಿಗೆ ಸೂಚಿಸಿದರು.
ಈ ಸಮಾರಂಭದಲ್ಲಿ ಇಂಡಿಯನ್ ಕ್ಯಾನ್ಸರ್ ಸೊಸೈಟಿಯ ಸಿಇಒ ಡಾ. ಗುರು ಸುಹಾಸ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಶ್ವರಿ ಗೊಲಗೇರಿ, ಜಿಲ್ಲಾ ಎನ್ಸಿಡಿ ಕಾರ್ಯಕ್ರಮ ಸಂಯೋಜಕಿ ಡಾ. ಪ್ರಿಯದರ್ಶನಿ ಪಾಟೀಲ, ಸಿಂದಗಿ ತಾಲೂಕು ಆರೋಗ್ಯ ಅಧಿಕಾರಿ ಡಾ. ಎ. ಎ. ಮಾಗಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ. ಕೋಲೂರ, ಆಶಾ ಮೆಂಟರ್ ಮಲ್ಲಮ್ಮ, ತಾಲೂಕು ಶಿಕ್ಷಣಾಧಿಕಾರಿ ರೇಖಾ ದಶವಂತ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಸಿಂದಗಿ ತಾಲೂಕಿನ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

