ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಅಕ್ಕಿ ಮಾಫಿಯಾ ಕುರಿತು ವರದಿ ಮಾಡಿದ್ದ ವಿಜಯಪುರ ಜಿಲ್ಲಾ ವರದಿಗಾರ ಪರಶುರಾಮ ಶಿವಶರಣ ಅವರ ಮನೆಗೆ ತೆರಳಿ ಜೀವ ಬೆದರಿಕೆ ಹಾಕಿರುವ ಘಟನೆ ಖಂಡಿಸಿ ಸಿಂದಗಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಪತ್ರಕರ್ತರ ಸುರಕ್ಷತೆ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ತಹಶೀಲ್ದಾರ್ ಅವರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿ ಕಾನಿಪ ಸಂಘದ ತಾಲೂಕಾಧ್ಯಕ್ಷ ಮಹಾಂತೇಶ ನೂಲಾನವರ ಮಾತನಾಡಿ, ಅಕ್ರಮ ಹಾಗೂ ಭ್ರಷ್ಟಾಚಾರದ ಕುರಿತು ವರದಿ ಮಾಡುವುದು ಪತ್ರಕರ್ತರ ವೃತ್ತಿಪರ ಕರ್ತವ್ಯವಾಗಿದೆ. ಆದರೆ, ಪತ್ರಕರ್ತರಿಗೆ ಜೀವ ಬೆದರಿಕೆ ಹಾಕುವುದು, ಅವರ ಮೇಲೆ ಹಲ್ಲೆ ನಡೆಸುವುದು ಖಂಡನೀಯ. ಇಂತಹ ಘಟನೆಗಳು ಪತ್ರಿಕಾ ಸ್ವಾತಂತ್ರ್ಯ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ಈಗಾಗಲೇ ಬಂಧಿಸಲಾಗಿರುವ ಇಬ್ಬರು ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು. ಪತ್ರಕರ್ತರು ಯಾವುದೇ ಭಯ, ಬೆದರಿಕೆ ಹಾಗೂ ಒತ್ತಡವಿಲ್ಲದೆ ತಮ್ಮ ವೃತ್ತಿಪರ ಕರ್ತವ್ಯ ನಿರ್ವಹಿಸುವಂತಹ ವಾತಾವರಣ ನಿರ್ಮಾಣವಾಗಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕಾನಿಪ ಸಂಘದ ಉಪಾಧ್ಯಕ್ಷ ಅಂಬರೀಶ ಸುಣಗಾರ, ಹಿರಿಯ ಪತ್ರಕರ್ತರಾದ ರವಿಚಂದ್ರ ಮಲ್ಲೇದ, ಸುದರ್ಶನ ಜಂಗಣ್ಣಿ, ಗುರುರಾಜ ಮಠ, ನಾಗೇಶ ತಳವಾರ, ಜಾಹಿರ್ ಮುಲ್ಲಾ, ಖಾಜಾಅಮೀನ್ ಮಕಾಂದಾರ ಸೇರಿದಂತೆ ಇತರರು ಇದ್ದರು.

