ವಿಜಯಪುರ ಜಿಲ್ಲಾಡಳಿತ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಕರೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದಲ್ಲಿ ಸಮಾನತೆ, ಸಹೋದರತ್ವ ಹಾಗೂ ಸಾಮಾಜಿಕ ನ್ಯಾಯದ ಪರಿಕಲ್ಪನೆಗಳನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಮಹಾನ್ ಸಮಾಜ ಸುಧಾರಕರಾಗಿದ್ದು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಹೇಳಿದರು.
ಜಿಲ್ಲಾಡಳಿತದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಅಂಗವಾಗಿ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಅವರು,ನಾರಾಯಣ ಗುರುಗಳು ಅಸಮಾನತೆ ಹಾಗೂ ಸಾಮಾಜಿಕ ಅನಿಷ್ಟಗಳ ವಿರುದ್ಧ ಹೋರಾಡಿ, ಶಿಕ್ಷಣ ಮತ್ತು ಸಾಮಾಜಿಕ ಜಾಗೃತಿಯ ಮೂಲಕ ಸಮಾಜದ ಅಭಿವೃದ್ಧಿಗೆ ದಾರಿ ತೋರಿದವರಾಗಿದ್ದಾರೆ. ಅವರ ಚಿಂತನೆಗಳು ಇಂದಿನ ಸಮಾಜಕ್ಕೂ ಪ್ರೇರಣೆಯಾಗಿವೆ ಎಂದು ಹೇಳಿದರು.
ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶ ಹಾಗೂ ಗೌರವ ದೊರೆಯಬೇಕು ಎಂಬ ನಾರಾಯಣ ಗುರುಗಳ ಸಂದೇಶವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಅಗತ್ಯವಿದೆ.ಅವರ ತತ್ವಾದರ್ಶಗಳನ್ನು ಅರ್ಥಮಾಡಿಕೊಂಡು, ಸಮಾನತೆ ಮತ್ತು ಸೌಹಾರ್ದತೆಯಿಂದ ಕೂಡಿದ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ್ ಭೋವಿ, ಯಲ್ಲಪ್ಪ ಈಳ್ಳಿಗೇರಿ, ಬಸವರಾಜ, ಪ್ರಭಾಕರ, ಹನುಮಂತ, ಹಾಜಪ್ಪ, ಶ್ರೀಶೈಲ, ರಾಜು, ರಂಗನಾಥ ಹಾಗೂ ಶೇಖಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

