ಗಣೇಶ ಹಬ್ಬ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ವಿಸರ್ಜನೆಯನ್ನು ಸರ್ಕಾರದ ಆದೇಶದ ಮೇರೆಗೆ ನಿಷೇಧಿಸಲಾಗಿದ್ದು, ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸಲು ನಿಗಾವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಶನಿವಾರ ನಡೆದ ಗಣೇಶ ಹಬ್ಬ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದರು.
ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿಗಳ ತಯಾರಿಕೆ ಮತ್ತು ಮಾರಾಟಕ್ಕೆ ಅನುಮತಿಸಿ, ಎಲ್ಲಾ ಸ್ಥಳೀಯ ಸಂಸ್ಥೆಗಳು ಮೂರ್ತಿ ತಯಾರಕರು ಹಾಗೂ ಗಣೇಶ ಮಹಾ ಮಂಡಳಿಗಳೊಂದಿಗೆ ಸಭೆ ನಡೆಸಿ ಈ ಬಗ್ಗೆ ಕಟ್ಟುನಿಟ್ಟಿನ ಮಾಹಿತಿ ನೀಡಬೇಕು. ಸಾರ್ವಜನಿಕರಲ್ಲಿ ಪರಿಸರ ಸ್ನೇಹಿ ಹಬ್ಬದ ಆಚರಣೆ ಕುರಿತು ಅರಿವು ಮೂಡಿಸಿ ಎಂದರು.
ಕೃತಕ ಹೊಂಡಗಳಲ್ಲಿ ವಿಸರ್ಜನೆ: ನೈಸರ್ಗಿಕ ಜಲಮೂಲಗಳು ಕಲುಷಿತಗೊಳ್ಳದಂತೆ ಸೂಕ್ತ ಪ್ರದೇಶಗಳಲ್ಲಿ ಕೃತಕ ಕೆರೆ ಅಥವಾ ಹೊಂಡಗಳನ್ನು ನಿರ್ಮಿಸಿ ಮೂರ್ತಿಗಳನ್ನು ವಿಸರ್ಜಿಸಲು ವ್ಯವಸ್ಥೆ ಮಾಡಲಾಗುವುದು. ಹಾಗಾಗಿ ಸಾರ್ವಜನಿಕರು ಗಣೇಶ ಮೂರ್ತಿಗಳನ್ನು ಕೃತಕ ಹೊಂಡಗಳಲ್ಲೇ ವಿಸರ್ಜಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು. ಜೊತೆಗೆ ಹೂವು, ವಸ್ತ್ರ, ಪ್ಲಾಸ್ಟಿಕ್ ಹಾರ ಮುಂತಾದ ಅಲಂಕಾರಿಕ ವಸ್ತುಗಳ ತ್ಯಾಜ್ಯಗಳನ್ನು ಮೂರ್ತಿಗಳ ಜೊತೆ ವಿಸರ್ಜಿಸಲು ಅವಕಾಶವಿರುವುದಿಲ್ಲ ಎಂಬುದನ್ನು ಗಣೇಶ ಮಹಾಮಂಡಳಿಯವರಿಗೆ ತಿಳಿವಳಿಕೆ ನೀಡಬೇಕು ಎಂದರು.
ಪಿ.ಒ.ಪಿ ಮೂರ್ತಿ ತಯಾರಿಸುವ ಹಾಗೂ ಮಾರಾಟ ಮಾಡುವ ವ್ಯಕ್ತಿ ಅಥವಾ ಸಂಸ್ಥೆಗಳಿಗೆ ವ್ಯಾಪಾರ ಲೈಸೆನ್ಸ್ ನೀಡಲಾಗುವುದಿಲ್ಲ. ಈಗಾಗಲೇ ನೀಡಿದ್ದರೆ ಅದನ್ನು ತಕ್ಷಣ ಹಿಂಪಡೆಯಬೇಕು ಎಂದೂ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಪಿಒಪಿ ಗಣೇಶ ಮೂರ್ತಿಗಳ ಮಾರಾಟ ಹಾಗೂ ಹೊರರಾಜ್ಯಗಳಿಂದ ಅವುಗಳ ಪೂರೈಕೆಯನ್ನು ನಿಷೇಧಿಸಲಾಗಿದೆ. ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಪಿ.ಒ.ಪಿ ಮೂರ್ತಿಗಳನ್ನು ತಡೆಯಲು ಗಡಿ ಭಾಗದ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ನಿಗಾವಹಿಸಿ ಎಂದರು.
ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿಗಳ ಬಳಕೆಗೆ ಸಂಘ-ಸಂಸ್ಥೆಗಳೊಂದಿಗೆ ಸಭೆ ನಡೆಸಿ ಜಾಗೃತಿ ಮೂಡಿಸಬೇಕು. ಹಾಗಾಗಿ ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆಯಾಗುವವರೆಗೂ ಸರ್ಕಾರದ ನಿಯಮಾನುಸಾರ ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸಲಿಕ್ಕೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.
ಗಣೇಶ ವಿಸರ್ಜನಾ ಸ್ಥಳದಲ್ಕಿ ಸಿಸಿಟಿವಿ ಕ್ಯಾಮರಾ ವ್ಯವಸ್ಥೆ ಮಾಡಬೇಕು ಎಂದು ಪಟ್ಟಣ ಪಂಚಾಯತಿ ಹಾಗೂ ಪುರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಧ್ವನಿವರ್ಧಕ ಬಳಕೆ ಬಗ್ಗೆಯೂ ಅಧಿಕಾರಿಗಳು ತ ಗಮನ ಹರಿಸಬೇಕು ಎಂದ ಜಿಲ್ಲಾಧಿಕಾರಿಗಳು, ಸರ್ಕಾರ ಮತ್ತು ಪೊಲೀಸ್ ಇಲಾಖೆಯ ನಿಯಮಗಳಂತೆ ಧ್ವನಿವರ್ಧಕಗಳ ಬಳಕೆಗೆ ನಿಗದಿಪಡಿಸಿದ ಸಮಯ ಹಾಗೂ ಡೆಸಿಬಲ್ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದಿನ್ ಸೌದಾಗರ್, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಬಾಕ್ಸ್
ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಅವಕಾಶ
ಪಟಾಕಿ ಮಾರಾಟಕ್ಕೆ ನಿಗದಿಪಡಿಸಿದ ಸ್ಥಳಗಳಲ್ಲಿ ಸುರಕ್ಷತಾ ನಿಯಮ ಪಾಲಿಸಿ ಲೈಸೆನ್ಸ್ ನೀಡಲಾಗುವುದು. ಹಬ್ಬದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.
ಗಣೇಶ ಮೆರವಣಿಗೆ ಮಾರ್ಗದಲ್ಲಿ ವಿದ್ಯುತ್ ಕಂಬ ಸೇರಿದಂತೆ ಅಗತ್ಯ ಕ್ರಮ ವಹಿಸಬೇಕು. ಮೆರವಣಿಗೆ ಸಾಗುವ ಮಾರ್ಗಗಳಲ್ಲಿನ ವಿದ್ಯುತ್ ಕಂಬಗಳ ಬಗ್ಗೆ ಹೆಸ್ಕಾಂ ಅಧಿಕಾರಿಗಳು ನಿಗಾವಹಿಸಬೇಕು. ಗಣೇಶ ಮೂರ್ತಿಗಳ ಎತ್ತರಕ್ಕೆ ತಕ್ಕಂತೆ ವಿದ್ಯುತ್ ಲೈನ್ ಗಳ ಸುರಕ್ಷತೆ ಖಾತ್ರಿಪಡಿಸಿಕೊಂಡು, ಯಾವುದೇ ವಿದ್ಯುತ್ ಅವಘಡ ಸಂಭವಿಸದಂತೆ ನೋಡಿಕೊಳ್ಳಬೇಕು ಎಂದೂ ಸೂಚಿಸಿದರು.

