ನಾಗಠಾಣ ಮತಕ್ಷೇತ್ರ ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ | ಮಾಜಿ ಶಾಸಕ ದೇವಾನಂದ ಚವ್ಹಾಣ ಆರೋಪ
ಉದಯರಶ್ಮಿ ದಿನಪತ್ರಿಕೆ
ಚಡಚಣ: ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕು ಸೇರಿದಂತೆ ನಾಗಠಾಣ ಮತಕ್ಷೇತ್ರದ ಬಹುತೇಕ ಗ್ರಾಮಗಳು ತೀವ್ರ ಮಳೆ ಕೊರತೆಯಿಂದ ಬರದ ಛಾಯೆಯಲ್ಲಿವೆ. ಆದರೆ ಜಿಲ್ಲೆಯ 13 ತಾಲ್ಲೂಕುಗಳ ಪೈಕಿ ಕೇವಲ ಮೂರು ತಾಲ್ಲೂಕುಗಳನ್ನು ಬರಪೀಡಿತವೆಂದು ಸರ್ಕಾರ ಘೋಷಿಸಿರುವುದು ಈ ಭಾಗದ ರೈತರಿಗೆ ಮಾಡಿದ ಅನ್ಯಾಯವಾಗಿದೆ. ಕೂಡಲೇ ಸಮಗ್ರ ನಾಗಠಾಣ ಮತಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ಅಗತ್ಯ ಪರಿಹಾರೋಪಾಯಗಳನ್ನು ಕೈಗೊಳ್ಳಬೇಕು ಎಂದು ನಾಗಠಾಣ ಮತಕ್ಷೇತ್ರದ ಮಾಜಿ ಶಾಸಕ ದೇವಾನಂದ ಚವ್ಹಾಣ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಕೇವಲ ವಿಜಯಪುರ, ನಿಡಗುಂದಿ ಹಾಗೂ ಕೊಲ್ಹಾರ ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಿರುವುದು ಸರಿಯಲ್ಲ. ಸತತ ಬರಗಾಲದಿಂದ ತತ್ತರಿಸುತ್ತಿರುವ ಇಂಡಿ ಹಾಗೂ ಚಡಚಣ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಕೈಬಿಟ್ಟಿರುವುದು ರೈತರಿಗೆ ಮಾಡಿದ ಬಹುದೊಡ್ಡ ದ್ರೋಹವಾಗಿದೆ ಎಂದು ಆರೋಪಿಸಿದ್ದಾರೆ.
ಚಡಚಣ ಸೇರಿದಂತೆ ನಾಗಠಾಣ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಶೇ.80ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದೆ ಎಂದು ಕೃಷಿ ಇಲಾಖೆಯ ಅಧಿಕಾರಿಗಳೇ ತಿಳಿಸಿದ್ದಾರೆ. ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ರೈತರು ಬಿತ್ತನೆ ಮಾಡಿರುವ ಬೆಳೆಗಳು ಒಣಗಿ ನಾಶವಾಗುವ ಹಂತ ತಲುಪಿವೆ. ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇನ್ನೊಂದೆಡೆ ಜಾನುವಾರುಗಳಿಗೆ ಅಗತ್ಯ ಪ್ರಮಾಣದ ಮೇವು ಹಾಗೂ ಕುಡಿಯುವ ನೀರು ದೊರೆಯದ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಲ-ಸೂಲ ಮಾಡಿ ಬಿತ್ತನೆ ಮಾಡಿರುವ ರೈತರು ಬೆಳೆ ಕೈಕೊಡುವ ಆತಂಕದಲ್ಲಿದ್ದಾರೆ. ಮಳೆ ಕೊರತೆ ಇದೇ ರೀತಿ ಮುಂದುವರಿದರೆ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರು ಉದ್ಯೋಗ ಅರಸಿ ಗುಳೆ ಹೋಗುವ ಪರಿಸ್ಥಿತಿ ಎದುರಾಗಲಿದೆ ಎಂದು ದೇವಾನಂದ ಚವ್ಹಾಣ ಕಳವಳ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಧಿಕಾರಿಗಳು ಹಾಗೂ ಈ ಭಾಗದ ಜನಪ್ರತಿನಿಧಿಗಳು ಕೂಡಲೇ ಬರ ಪರಿಸ್ಥಿತಿಯ ಬಗ್ಗೆ ಗಂಭೀರವಾಗಿ ಗಮನಹರಿಸಬೇಕು. ಗ್ರಾಮವಾರು ಸಮಗ್ರ ಸಮೀಕ್ಷೆ ನಡೆಸಿ ಬೆಳೆ ಹಾನಿಯ ವಾಸ್ತವಿಕ ವರದಿ ಸಿದ್ಧಪಡಿಸಬೇಕು. ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರದ ಬರ ಪರಿಹಾರ ಹಾಗೂ ಅಗತ್ಯ ಆರ್ಥಿಕ ನೆರವು ಒದಗಿಸಬೇಕು.ರೈತರ ಸಂಕಷ್ಟವನ್ನು ಕೇವಲ ಅಂಕಿ-ಅಂಶಗಳ ಮೂಲಕ ನೋಡದೆ ಮಾನವೀಯ ದೃಷ್ಟಿಕೋನದಿಂದ ಪರಿಗಣಿಸಿ, ಸಮಗ್ರ ನಾಗಠಾಣ ಮತಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದೇವಾನಂದ ಚವ್ಹಾಣ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

