ಉದಯರಶ್ಮಿ ದಿನಪತ್ರಿಕೆ
ಅಥಣಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಅಥಣಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯುಜಿಸಿ ಅರ್ಹತೆ ಹೊಂದಿದ ಅತಿಥಿ ಉಪನ್ಯಾಸಕರು, ಯುಜಿಸಿ ನಿಯಮದಂತೆ ಗೌರವಧನ ನೀಡುವಂತೆ ಆಗ್ರಹಿಸಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಲಾಸ ಕಾಂಬಳೆ ಅವರಿಗೆ ಮನವಿ ಸಲ್ಲಿಸಿದರು.
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ತಾವು ಕಡಿಮೆ ಗೌರವಧನದಲ್ಲಿಯೇ ಶೈಕ್ಷಣಿಕ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದೇವೆ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಯುಜಿಸಿ ಅರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಯುಜಿಸಿ ನಿಯಮಾವಳಿಗಳ ಪ್ರಕಾರ ಪ್ರತಿ ಬೋಧನಾ ಅವಧಿಗೆ ರೂ.1,500 ರಂತೆ ಮಾಸಿಕ ಗರಿಷ್ಠ ರೂ.50,000 ಗೌರವಧನ ನೀಡುವಂತೆ ಸಂಬಂಧಿಸಿದ ಇಲಾಖೆಗೆ ಸೂಚನೆಗಳಿವೆ ಆದ್ದರಿಂದ ಕರ್ನಾಟಕದಲ್ಲಿರುವ ಯುಜಿಸಿ ಅರ್ಹತೆ ಹೊಂದಿದ ಅತಿಥಿ ಉಪನ್ಯಾಸಕರಿಗೂ ಈ ನಿಯಮದನ್ವಯ ಗೌರವಧನ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ ಅಲ್ಲದೆ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆಯನ್ನು ಪರಿಗಣಿಸಿ ತಕ್ಷಣದಿಂದಲೇ ಯುಜಿಸಿ ನಿಯಮದಂತೆ ಗೌರವಧನ ಹೆಚ್ಚಿಸಿ ನೀಡಬೇಕು ಎಂದು ಅತಿಥಿ ಉಪನ್ಯಾಸಕರು ಮನವಿ ಮಾಡಿದರು ಒಂದು ವೇಳೆ ಈ ಬೇಡಿಕೆಯನ್ನು ಈಡೇರಿಸಲು ಸಾಧ್ಯವಾಗದಿದ್ದರೆ ಈ ಕುರಿತು ಅಧಿಕೃತ ಹಿಂಬರಹ ನೀಡುವಂತೆ ಮನವಿ ಮಾಡಲಾಗಿದೆ.
ಈ ಸಂದರ್ಭದಲ್ಲಿ ಯುಜಿಸಿ ಅರ್ಹತೆ ಹೊಂದಿದ ಎಲ್ಲ ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದರು.

