ರೈತರ ಸಾಲ ಸಂಪೂರ್ಣ ಮನ್ನಾ ಹಾಗೂ ಮಧ್ಯಂತರ ಬೆಳೆ ವಿಮೆ ಪಾವತಿಗೆ ಆಗ್ರಹಿಸಿ ಮಾಜಿ ಶಾಸಕ ಡಾ. ದೇವಾನಂದ ಚವ್ಹಾಣ ಮನವಿ
ಉದಯರಶ್ಮಿ ದಿನಪತ್ರಿಕೆ
ಚಡಚಣ: ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಚಡಚಣ ತಾಲೂಕನ್ನು ತಕ್ಷಣ ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಿ, ರೈತರಿಗೆ ಅಗತ್ಯ ಪರಿಹಾರ ಕಲ್ಪಿಸಬೇಕು ಎಂದು ನಾಗಠಾಣ ಮತಕ್ಷೇತ್ರದ ಮಾಜಿ ಶಾಸಕ ಡಾ. ದೇವಾನಂದ ಫೂ. ಚವ್ಹಾಣ ಆಗ್ರಹಿಸಿದ್ದಾರೆ.
ಈ ಕುರಿತು ಚಡಚಣ ತಹಶೀಲ್ದಾರರಿಗೆ ಬುಧವಾರ ಮನವಿ ಸಲ್ಲಿಸಿರುವ ಅವರು, ರಾಜ್ಯ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿರುವ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಚಡಚಣ ತಾಲೂಕು ಸೇರ್ಪಡೆಯಾಗದಿರುವುದು ರೈತರಲ್ಲಿ ತೀವ್ರ ಆತಂಕ ಹಾಗೂ ಅಸಮಾಧಾನ ಮೂಡಿಸಿದೆ ಈ ವರ್ಷ ಚಡಚಣ ತಾಲೂಕಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಮುಂಗಾರು ಸಂಪೂರ್ಣ ಕೈಕೊಟ್ಟ ಪರಿಣಾಮ ರೈತರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಭರವಸೆಯಿಂದ ಬಿತ್ತನೆ ಮಾಡಿದ ಬೆಳೆಗಳು ಮಳೆಯಿಲ್ಲದೆ ಹಾನಿಗೊಳಗಾಗಿವೆ. ಕೃಷಿ ಚಟುವಟಿಕೆಗಳಿಗಾಗಿ ಸಾಲ ಮಾಡಿಕೊಂಡಿರುವ ರೈತರು ಇದೀಗ ಸಾಲದ ಸುಳಿಯಲ್ಲಿ ಸಿಲುಕಿದ್ದು, ಸರ್ಕಾರದ ನೆರವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದರ ಜೊತೆಗೆ ಅಪೂರ್ಣವಾಗಿರುವ ಚಡಚಣ ಏತ ನೀರಾವರಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಬೇಕು. ಆಲಮಟ್ಟಿಯಿಂದ ಚಡಚಣ ಹಳ್ಳಕ್ಕೆ ನೀರು ಹರಿಸಿದರೆ ಅಂತರ್ಜಲ ಮಟ್ಟ ಹೆಚ್ಚುವುದರೊಂದಿಗೆ ತಾಲೂಕಿನ ಒಟ್ಟು ಎಂಟು ಬಾಂದಾರಗಳು ತುಂಬಲಿದ್ದು, ಮುಂದಿನ ದಿನಗಳಲ್ಲಿ ಜನರು ಹಾಗೂ ಜಾನುವಾರುಗಳಿಗೆ ನೀರಿನ ಸಮಸ್ಯೆ ಕಡಿಮೆಯಾಗಲಿದೆ ಎಂದು ಡಾ. ದೇವಾನಂದ ಚವ್ಹಾಣ ತಿಳಿಸಿದ್ದಾರೆ.
ರೈತ ಹಸಿರು ಸೇನೆ ತಾಲೂಕ ಅಧ್ಯಕ್ಷ ವಸಂತ ಬೈರಾಮಡಿ ಮಾತನಾಡಿ ತಾಲೂಕು ಆಡಳಿತ, ಹವಾಮಾನ ಇಲಾಖೆ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ವಾಸ್ತವ ಪರಿಸ್ಥಿತಿಯ ಕುರಿತು ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರಕ್ಕೆ ಚಡಚಣ ತಾಲೂಕು ಹಾಗೂ ವಿಜಯಪುರ ಜಿಲ್ಲಾಡಳಿತ ಜಂಟಿಯಾಗಿ ತಾಲೂಕಿನಾದ್ಯಂತ ನೈಜ ಬರ ಪರಿಸ್ಥಿತಿ, ಮಳೆಯ ಕೊರತೆ, ಬೆಳೆ ಹಾನಿ, ರೈತರ ಆರ್ಥಿಕ ಸಂಕಷ್ಟ ಹಾಗೂ ಸಾಲದ ಸಮಸ್ಯೆಗಳ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಕೂಡಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಸಬೇಕು. ಮುಖ್ಯಮಂತ್ರಿ ಅವರ ಗಮನಕ್ಕೆ ತಂದು ಚಡಚಣ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ರೈತರ ಸಂಕಷ್ಟಗಳಿಗೆ ಸ್ಪಂದಿಸುವುದಾಗಿ ಪದೇಪದೇ ಆಶ್ವಾಸನೆ ನೀಡುತ್ತಿರುವ ನಾಗಠಾಣ ಮತಕ್ಷೇತ್ರದ ಶಾಸಕ ವಿಠ್ಠಲ ಕಟಕಧೋಂಡ ಅವರು ಇದೀಗ ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿಜಯಪುರ ಜಿಲ್ಲಾ ಉಪಾಧ್ಯಕ್ಷ ಮಹಾದೇವ ಬನಸೋಡೆ ಆರೋಪಿಸಿದ್ದಾರೆ.
‘ರೈತರ ಪರವಾಗಿದ್ದೇವೆ, ರೈತರ ಸಮಸ್ಯೆಗಳಿಗೆ ಧ್ವನಿಯಾಗುತ್ತೇವೆ’ ಎಂದು ಹೇಳುವುದು ಸುಲಭ. ಆದರೆ ರೈತರು ಸಂಕಷ್ಟದಲ್ಲಿರುವಾಗ ಅವರ ಪರವಾಗಿ ಸರ್ಕಾರದ ಮುಂದೆ ನಿಂತು ಪರಿಹಾರ ಕೊಡಿಸುವುದು ಮುಖ್ಯ. ವಿಠ್ಠಲ ಕಟಕಧೋಂಡ ಅವರು ಆಶ್ವಾಸನೆ ನೀಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ’ ಎಂದು ಬನಸೋಡೆ ಟೀಕಿಸಿದ್ದಾರೆ.
ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು, ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು, ಮಧ್ಯಂತರ ಬೆಳೆ ವಿಮೆ ಹಣವನ್ನು ಕೂಡಲೇ ಪಾವತಿಸಬೇಕು. ಅಗತ್ಯವಿರುವ ಪ್ರದೇಶಗಳಲ್ಲಿ ಮೇವು ಕೇಂದ್ರ ಹಾಗೂ ಗೋಶಾಲೆಗಳನ್ನು ಆರಂಭಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ತಕ್ಷಣ ಕ್ರಮ ಕೈಗೊಂಡು ಚಡಚಣ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸದಿದ್ದರೆ,ಚಡಚಣ ತಹಶೀಲ್ದಾರ್ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ರೈತ ಮುಖಂಡ ಮಹಾದೇವ ಕರ್ಲಮಳ, ಸತೀಶ ಬಂಡಿ, ದೀಪಕ ಕದಮ, ಪ್ರವೀಣ ಪಾಟೀಲ, ಜೆಡಿಎಸ್ ಚಡಚಣ ತಾ.ಅಧ್ಯಕ್ಷ ದಯಾನಂದ ಕಸಮೂಳೆ, ಶಕೀಲ ಖಾಟೀಕ್, ಸೋಮು ಬಡಿಗೇರ, ಮುರುಗೇಶ ಸಿಂಪಿ,ರಾಮ ಮಾಲಾಪೂರ, ಚಂದ್ರಕಾಂತ ಕಲಮನಿ, ಅಶೋಕ ಜತ್ತಿ,ರಾಜಶೇಖರ ಪೂಜಾರಿ, ಹಣಮಂತ ಧೈಗೊಂಡ,ರುದ್ರೇಶ ಬನಸೋಡೆ, ಟೀಪು ಸುಲ್ತಾನ ಕಮೀಟಿ,ಕರ್ನಾಟಕ ರಕ್ಷಣಾ ವೇದಿಕೆ, ತಾಲೂಕಿನ ವಿವಿಧ ಸಂಘಟನೆಗಳ ರೈತ ಮುಖಂಡರು ಹಾಗೂ ರೈತರು ಅಪಾರ ಪ್ರಮಾಣದಲ್ಲಿ ಇದ್ದರು.

