ತಾಳಿಕೋಟೆಯಲ್ಲಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ | ರೈತರ ಕೃಷಿ ಸಾಲ ಮನ್ನಾಗೆ ಆಗ್ರಹ
ಉದಯರಶ್ಮಿ ದಿನಪತ್ರಿಕೆ
ತಾಳಿಕೋಟೆ: ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲೂಕುಗಳನ್ನು ಮಾತ್ರ ಬರಪೀಡಿತವೆಂದು ಘೋಷಿಸಿರುವ ಕ್ರಮವನ್ನು ಖಂಡಿಸಿ, ಜಿಲ್ಲೆಯ ತಾಳಿಕೋಟೆ, ದೇ.ಹಿಪ್ಪರಗಿ, ಮುದ್ದೇಬಿಹಾಳ ಒಳಗೊಂಡು ಉಳಿದ ಹತ್ತು ತಾಲೂಕುಗಳನ್ನೂ ಬರಪೀಡಿತವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಗುರುವಾರರಂದು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಸಿದ ಬಳಿಕ ಅನಿರ್ದಿಷ್ಟ ಧರಣಿ ಆರಂಭಿಸಿದರು.
ಈ ಸಂದರ್ಭದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಮಾತನಾಡಿ, ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಜಿಲ್ಲೆಯ ಯಾವುದೇ ಶಾಸಕರು ರೈತರ ಪರವಾಗಿ ಧ್ವನಿ ಎತ್ತುತ್ತಿಲ್ಲ. ಜನಪ್ರತಿನಿಧಿಗಳು ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲದಿದ್ದರೆ ರೈತರು ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಇನ್ನೋರ್ವ ರಾಜ್ಯ ಸಂಘಟನಾ ಕಾರ್ಯದರ್ಶಿ ವಿಠ್ಠಲ ಬಿರಾದಾರ ಹಾಗೂ ಜಿಲ್ಲಾಧ್ಯಕ್ಷ ಉಮೇಶ್ ವಾಲಿಕಾರ ಮಾತನಾಡಿ, ರೈತರ ಕೃಷಿಗಾಗಿ ರಾಷ್ಟೀಕೃತ ಬ್ಯಾಂಕುಗಳು ಹಾಗೂ ಸಹಕಾರಿ ಸಂಘಗಳಲ್ಲಿ ಪಡೆದಿರುವ ಸಾಲವನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿದ ಅವರು ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಸಾವಿರಾರು ರೈತರು ಬೀದಿಗಿಳಿದು ಜಿಲ್ಲೆಯ ಶಾಸಕರ ವಿರುದ್ಧ ಬೃಹತ್ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ರೈತ ಸಂಘದ ತಾಳಿಕೋಟೆ ತಾಲೂಕಾ ಅಧ್ಯಕ್ಷ ಬಾಲಪ್ಪಗೌಡ ಲಿಂಗದಳ್ಳಿ, ಉಪಾಧ್ಯಕ್ಷ ರಾಮನಗೌಡ ಹಾದಿಮನಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗುರುರಾಜ ಪಡಶೆಟ್ಟಿ, ಶಾಂತಗೌಡ ಬಿರಾದಾರ, ಶ್ರೀನಿವಾಸ ಗೊಟಗುಣಕಿ, ಗುರುನಾಥ ರೆಡ್ಡಿ, ರಾಮನಗೌಡ ಯಾಳವಾರ, ಪ್ರಭು ಅಂಬಿಗೇರ, ಬಸನಗೌಡ ಸೌದಿ, ಅರುಣಕುಮಾರ ಬಿರಾದಾರ, ಸಂತೋಷ ಬಿರಾದಾರ, ಬಸ್ಸು ಬನ್ನಟ್ಟಿ, ಆನಂದ ಲಿಂಗದಳ್ಳಿ, ಮುತ್ತುಗೌಡ ಬಿರಾದಾರ, ಭೀಮನಗೌಡ ಪಾಟೀಲ, ಬಸನಗೌಡ ಬಿರಾದಾರ, ಪಂಪನಗೌಡ ಬಿರಾದಾರ ಒಳಗೊಂಡು ನೂರಾರು ರೈತರು ಭಾಗವಹಿಸಿದ್ದರು.

