ಇಂಡಿ ತಾಲೂಕಿನ ವಿವಿಧ ಗ್ರಾ.ಪಂ ಗಳ ವಿಬಿ–ಜಿ ರಾಮ್–ಜಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿದ ಜಿ.ಪಂ. ಸಿಇಓ ರಿಷಿ ಆನಂದ ಕೂಲಿ ಕಾರ್ಮಿಕರಿಗೆ ಅಭಯ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬರಗಾಲದ ಸಂದರ್ಭದಲ್ಲಿ ಗ್ರಾಮೀಣ ಕೂಲಿಕಾರರು ಉದ್ಯೋಗ ಅರಸಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಅವರಿಗೆ ಸ್ವಗ್ರಾಮದಲ್ಲಿಯೇ ನಿರಂತರ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಂಡಿ ತಾಲೂಕಿನ ಬಸನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಟ್ನಾಳ, ಬಬಲಾದ, ಬಳ್ಳೊಳ್ಳಿ ಹಾಗೂ ಇಂಗಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ, ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) ಯೋಜನೆ (ವಿಬಿ–ಜಿ ರಾಮ್–ಜಿ) ಯಡಿ ಪ್ರಗತಿಯಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಅವರು ಮಾತನಾಡಿದರು. ಆರಂಭದಲ್ಲಿ ಬಸನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಟ್ನಾಳ ಗ್ರಾಮದ ಕಾಲುವೆ ಪುನಶ್ಚೇತನ ಕಾಮಗಾರಿ, ಬಬಲಾದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಇಂಗು ಕೆರೆ, ಬಳ್ಳೊಳ್ಳಿ ಗ್ರಾಮದ ಕೆರೆ ಪುನಶ್ಚೇತನ ಕಾಮಗಾರಿ ಹಾಗೂ ಇಂಗಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಹಳ್ಳಿ ಗ್ರಾಮದ ಕಂದಕ ನಿರ್ಮಾಣ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಕಾಮಗಾರಿಗಳ ಪ್ರಗತಿ ಹಾಗೂ ಗುಣಮಟ್ಟವನ್ನು ಪರಿಶೀಲಿಸಿದರು.
ಗ್ರಾಮೀಣ ಮಹಿಳೆಯರು ಉದ್ಯೋಗಕ್ಕೆ ಬರಲು ಪ್ರೇರೇಪಿಸಬೇಕು. ಗ್ರಾ.ಪಂ. ವ್ಯಾಪ್ತಿಯ ಗ್ರಾಮ ಕಾಯಕ ಮಿತ್ರರು, ಬೇರ್ಫುಟ್ ಟೆಕ್ನಿಷಿಯನ್ಗಳು, ಕಾಯಕ ಬಂಧುಗಳು, ಕೃಷಿ ಸಖಿಯರು, ಪಶು ಸಖಿಯರು, ಸ್ವ-ಸಹಾಯ ಸಂಘದ ಸದಸ್ಯರು ಹಾಗೂ ಮಹಿಳಾ ಸಂಘಗಳ ಪ್ರತಿನಿಧಿಗಳು ಗ್ರಾಮೀಣ ಜನರಲ್ಲಿ ಯೋಜನೆಯ ಕುರಿತು ಜಾಗೃತಿ ಮೂಡಿಸಬೇಕು. ವಿಶೇಷವಾಗಿ ಸ್ವಸಹಾಯ ಸಂಘದ ಮಹಿಳೆಯರು ಹಾಗೂ ಗ್ರಾಮೀಣ ಕುಟುಂಬಗಳು ವಿಬಿ–ಜಿ ರಾಮ್–ಜಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬೇಕು ಎಂದರು.
ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕನಿಷ್ಠ ೨೦೦ ರಿಂದ ೩೦೦ ಕೂಲಿಕಾರರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಯೋಜಿತ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ವಿಬಿ–ಜಿ ರಾಮ್–ಜಿ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರ ಆರೋಗ್ಯದ ಹಿತದೃಷ್ಟಿಯಿಂದ ಇದೇ ಸೆಪ್ಟೆಂಬರ್ ತಿಂಗಳಿನಲ್ಲಿಯೇ ಎಲ್ಲಾ ಗ್ರಾ.ಪಂ. ವ್ಯಾಪ್ತಿಗಳಲ್ಲಿ ಕಾಮಗಾರಿ ಸ್ಥಳಗಳಲ್ಲಿಯೇ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಬೇಕು ಎಂದು ಅಲ್ಲಿನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇದೇ ವೇಳೆ ಕೂಲಿಕಾರರೊಂದಿಗೆ ಮಾತನಾಡಿದ ಸಿಇಒ ಅವರು, ಬರಗಾಲದ ಸಂದರ್ಭದಲ್ಲಿ ಉದ್ಯೋಗಕ್ಕಾಗಿ ದೂರದ ಊರುಗಳಿಗೆ ವಲಸೆ ಹೋಗುವ ಬದಲು ತಮ್ಮ ಗ್ರಾಮದಲ್ಲಿಯೇ ಉದ್ಯೋಗ ಪಡೆಯುವಂತೆ ತಿಳಿಸಿದರು.
ವೈಯಕ್ತಿಕ ಕಾಮಗಾರಿಗಳನ್ನು ತಮ್ಮ ಜಮೀನಿನಲ್ಲಿಯೇ ಕೃಷಿ ಹೊಂಡ, ದನದ ಕೊಟ್ಟಿಗೆ, ಕೋಳಿ ಶೆಡ್, ಮೇಕೆ ಶೆಡ್ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಂಡು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಅವಕಾಶವಿದೆ ಎಂದರು.
ಬಬಲಾದ ಗ್ರಾಮ ಪಂಚಾಯತ ವ್ಯಾಪ್ತಿಯ ಕಾಮಗಾರಿ ಸ್ಥಳದಲ್ಲಿ ಜಿ.ಪಂ. ಸಿಇಓ ರವರೇ ಕೂಲಿ ಕಾರ್ಮಿಕರಿಗೆ ಉಪಹಾರವನ್ನು ಬಡಿಸಿ ಸಂತಸ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆ (ಪಿ.ಎಮ್.ಎಸ್.ಬಿ.ವೈ)ಯ ಫಲಾನುಭವಿಯಾದ ಶ್ರೀಮತಿ ದಾನಮ್ಮ ಸುರೇಶ ಹಂಚನಾಳ ಇವರಿಗೆ ವಿಬಿ–ಜಿ ರಾಮ್–ಜಿ ಯೋಜನೆಯ ಕಾಮಗಾರಿ ಸ್ಥಳದಲ್ಲಿಯೇ ₹೨ ಲಕ್ಷದ ಪರಿಹಾರ ಮೊತ್ತದ ಚೆಕ್ ಅನ್ನು ಜಿ.ಪಂ.ನ ಸಿಇಓ ರವರು ವಿತರಿಸಿದರು.
ಈ ಸಂದರ್ಭದಲ್ಲಿ ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಹದೇವಪ್ಪ ಏವೂರ, ಸಹಾಯಕ ನಿರ್ದೇಶಕರು (ಗ್ರಾ.ಉ) ಸಂಜಯ ಖಡೆಗೇಕರ, ಬಬಲಾದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿ.ಜಿ. ಪಾರೆ, ಝಳಕಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲಕ್ಷ್ಮಣ ಪಾಟೀಲ, ಬಸನಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಲ್ಲಿಕಾರ್ಜುನ ನಿಲಂಗಿ, ಇಂಗಳಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಶೈಲ ಬಿರಾದಾರ, ಕೆನರಾ ಬ್ಯಾಂಕ್ನ ಮ್ಯಾನೇಜರ್ ವಿಠ್ಠಲ ಗೌರಿ, ಎಲ್ ಡಿ ಎಂ ಸಿದ್ದಯ್ಯ, ಅಸಿಸ್ಟೆಂಟ್ ನಾಗಪ್ಪ ಮಿಂಚನಾಳ, ಅರ್ಥಿಕ ಸಾಕ್ಷರತಾ ಸಲಹೆಗಾರ ಭರತೇಶ ಉಪಾಧ್ಯೆ, ಸಿ ಎಪ್ ಎಲ್ ಮದರ್ ಎನ್. ಮತ್ತಿತರರು ಇದ್ದರು.

