ಶ್ರೀಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಶ್ರೀಕೃಷ್ಣ ಪರಮಾತ್ಮನು ಜಗತ್ತಿಗೆ ನೀಡಿರುವ ಅತ್ಯಂತ ದೊಡ್ಡ ಕೊಡುಗೆಗಳಲ್ಲಿ ಭಗವದ್ಗೀತೆ ಪ್ರಮುಖವಾದುದು. ಭಗವದ್ಗೀತೆಯಲ್ಲಿನ ತತ್ವ, ಜ್ಞಾನ ಹಾಗೂ ಜೀವನ ಮೌಲ್ಯಗಳನ್ನು ಪ್ರತಿಯೊಬ್ಬರೂ ಅರಿತುಕೊಂಡು, ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಾಂತಿ, ಸಹಬಾಳ್ವೆ, ಮಾನವೀಯತೆ ಹಾಗೂ ಸೌಹಾರ್ದತೆ ನಮ್ಮ ಜೀವನದ ಪ್ರಮುಖ ಮೌಲ್ಯಗಳಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶ್ರೀಕೃಷ್ಣನ ಜೀವನ ಹಾಗೂ ಭಗವದ್ಗೀತೆಯ ಸಂದೇಶಗಳು ಇಂದಿನ ಸಮಾಜಕ್ಕೂ ಅತ್ಯಂತ ಪ್ರಸ್ತುತವಾಗಿವೆ. ಕಷ್ಟದ ಸಂದರ್ಭಗಳಲ್ಲಿ ಧೈರ್ಯ ಕಳೆದುಕೊಳ್ಳದೆ, ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುವುದು ಹಾಗೂ ಸತ್ಯದ ಮಾರ್ಗದಲ್ಲಿ ಸಾಗುವುದು ಶ್ರೀಕೃಷ್ಣನ ಜೀವನದಿಂದ ಕಲಿಯಬಹುದಾದ ಪ್ರಮುಖ ಪಾಠಗಳಾಗಿವೆ ಎಂದರು.
ಡಾ. ಮಾಧವ ಗುಡಿ ಉಪನ್ಯಾಸ ನೀಡಿ, ಶ್ರೀಕೃಷ್ಣನ ಜನನ, ಬಾಲ್ಯ ಜೀವನ ಹಾಗೂ ಜಗತ್ತಿಗೆ ಅವರು ನೀಡಿದ ಕೊಡುಗೆಗಳ ಕುರಿತು ವಿವರಿಸಿದರು, ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಸಂತ ಹೊನಮೊಡೆ, ಜಿಲ್ಲಾ ಪಂಚಾಯತಿಯ ಸಹಾಯಕ ನಿರ್ದೇಶಕ ಡಿ.ಬಿ. ಮೆಂದಳೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಂಕರ ಚಲವಾದಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

