ಕಲಬುರಗಿ ಸಮಾವೇಶದ ಐತಿಹಾಸಿಕ ಆದೇಶಕ್ಕೆ ಅಪಮಾನ | ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಕಿಡಿ
ಉದಯರಶ್ಮಿ ದಿನಪತ್ರಿಕೆ
ಸಿಂದಗಿ: “ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲಬುರಗಿಯಲ್ಲಿ ಬೃಹತ್ ಸಮಾವೇಶ ನಡೆಸಿ, ತಳವಾರ ಸಮಾಜಕ್ಕೆ ಎಸ್ಟಿ (ST) ಪ್ರಮಾಣಪತ್ರ ನೀಡುವ ನಿಟ್ಟಿನಲ್ಲಿ ಐತಿಹಾಸಿಕ ಆದೇಶ ಹೊರಡಿಸಿದ್ದರು. ಕೇಂದ್ರ ಸರ್ಕಾರದ ಗೆಜೆಟ್ ಅಧಿಸೂಚನೆಯ ಬಳಿಕ ರಾಜ್ಯ ಸರ್ಕಾರವೂ ಈ ಕುರಿತು ಅಧಿಕೃತ ಕ್ರಮ ಕೈಗೊಂಡಿತ್ತು. ಆದರೆ, ಇಂದಿನ ಕಾಂಗ್ರೆಸ್ ಸರ್ಕಾರದ ಸಚಿವ ಸತೀಶ್ ಜಾರಕಿಹೊಳಿ ಅವರು ತಳವಾರ ಸಮಾಜದ ಅಭಿವೃದ್ಧಿಯನ್ನು ಸಹಿಸದೆ, ಸಮಾಜವು ಎಸ್ಟಿ ವರ್ಗಕ್ಕೆ ಸೇರುವುದಿಲ್ಲ ಎಂಬ ನಿಲುವು ವ್ಯಕ್ತಪಡಿಸಿ ಸಮುದಾಯ ಭವನದ ಕಾಮಗಾರಿಗೆ ತಡೆ ಒಡ್ಡಿರುವುದು ಅತ್ಯಂತ ಖಂಡನೀಯ,” ಎಂದು ಸಿಂದಗಿ ಮತಕ್ಷೇತ್ರದ ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸೋಮವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಿಂದಗಿ ನಗರದಲ್ಲಿ ತಳವಾರ ಸಮಾಜದ ಸಮುದಾಯ ಭವನ ನಿರ್ಮಾಣಕ್ಕಾಗಿ ಸ್ಥಳೀಯ ಶಾಸಕರ ಅನುದಾನ ಬಿಡುಗಡೆಯಾಗಿ ಕಾಮಗಾರಿ ಆರಂಭವಾಗಿತ್ತು. ಆದರೆ, ಕಾಮಗಾರಿ ಪ್ರಗತಿಯಲ್ಲಿರುವ ಸಂದರ್ಭದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ಕಚೇರಿಯಿಂದ ಪತ್ರ ಹೊರಡಿಸಿ ಕಾಮಗಾರಿಗೆ ತಡೆ ನೀಡಿರುವುದು ತಳವಾರ ಸಮಾಜದ ಅಭಿವೃದ್ಧಿಗೆ ಅಡ್ಡಿಪಡಿಸುವ ಕ್ರಮವಾಗಿದೆ ಎಂದು ಆರೋಪಿಸಿದ್ದಾರೆ.
“ಕೇಂದ್ರ ಸರ್ಕಾರದ ಗೆಜೆಟ್ ಅಧಿಸೂಚನೆ ಹಾಗೂ ರಾಜ್ಯದಲ್ಲಿ ಕೈಗೊಂಡಿರುವ ಅಧಿಕೃತ ಕ್ರಮಗಳ ಹಿನ್ನೆಲೆಯಲ್ಲಿ ತಳವಾರ ಸಮಾಜದ ಹಕ್ಕುಗಳ ಕುರಿತು ಸ್ಪಷ್ಟತೆ ಇರುವಾಗ, ಸಚಿವರ ಹುದ್ದೆಯಲ್ಲಿರುವವರು ಈ ರೀತಿಯಾಗಿ ಕಾಮಗಾರಿಗೆ ತಡೆ ನೀಡಿರುವುದು ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ. ಸಮುದಾಯ ಭವನವು ಕೇವಲ ಒಂದು ಕಟ್ಟಡವಲ್ಲ; ಅದು ಸಮಾಜದ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಗತ್ಯವಾದ ಸಾರ್ವಜನಿಕ ಆಸ್ತಿಯಾಗಿದೆ,” ಎಂದು ಶ್ರೀಶೈಲಗೌಡ ಬಿರಾದಾರ ಹೇಳಿದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಲಿತ, ಹಿಂದುಳಿದ ಹಾಗೂ ಪರಿಶಿಷ್ಟ ವರ್ಗಗಳ ಹಿತಾಸಕ್ತಿಗಳ ಕುರಿತು ಸರ್ಕಾರದ ನಡೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅವರು ಆರೋಪಿಸಿದರು.
“ಒಂದೆಡೆ ವಾಲ್ಮೀಕಿ ನಿಗಮದ ಹಣಕಾಸು ಅಕ್ರಮಗಳ ಪ್ರಕರಣ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಮತ್ತೊಂದೆಡೆ ವಿಜಯಪುರ ಜಿಲ್ಲೆಯ ಸಿಂದಗಿ ಹಾಗೂ ಆಲಮೇಲ ತಾಲೂಕುಗಳು ಬರ ಪರಿಸ್ಥಿತಿಯಿಂದ ಸಂಕಷ್ಟದಲ್ಲಿದ್ದರೂ ಪರಿಹಾರದ ಪಟ್ಟಿಯಿಂದ ಕೈಬಿಡಲಾಗಿದೆ. ಇದರಿಂದ ಈ ಭಾಗದ ರೈತರಿಗೆ ತೀವ್ರ ಅನ್ಯಾಯವಾಗಿದೆ,” ಎಂದು ಅವರು ಹೇಳಿದರು.
“ತಳವಾರ ಸಮಾಜದ ನ್ಯಾಯಯುತ ಹಕ್ಕುಗಳು ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಯಾವುದೇ ರೀತಿಯ ಅಡ್ಡಿಪಡಿಸುವಿಕೆಯನ್ನು ಸಹಿಸುವುದಿಲ್ಲ. ಸಚಿವ ಸತೀಶ್ ಜಾರಕಿಹೊಳಿ ಅವರು ತಳವಾರ ಸಮಾಜದ ಕುರಿತು ಹೊರಡಿಸಿರುವ ಪತ್ರವನ್ನು ತಕ್ಷಣವೇ ಹಿಂಪಡೆದು, ಸ್ಥಗಿತಗೊಳಿಸಿರುವ ಸಮುದಾಯ ಭವನದ ಕಾಮಗಾರಿಯನ್ನು ಪುನರಾರಂಭಿಸಲು ಅವಕಾಶ ಮಾಡಿಕೊಡಬೇಕು. ಇಲ್ಲವಾದರೆ ಸಮಾಜದ ಬಂಧುಗಳೊಂದಿಗೆ ಪ್ರಜಾಸತ್ತಾತ್ಮಕ ರೀತಿಯಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು,” ಎಂದು ಶ್ರೀಶೈಲಗೌಡ ಬಿರಾದಾರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

