ಉದಯರಶ್ಮಿ ದಿನಪತ್ರಿಕೆ
ಅಥಣಿ: ದೇಶದ ಭವಿಷ್ಯವನ್ನು ರೂಪಿಸುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ, ವಿದ್ಯಾರ್ಥಿಗಳಲ್ಲಿ ಜ್ಞಾನ, ಸಂಸ್ಕಾರ, ಶಿಸ್ತು, ಮಾನವೀಯತೆ ಹಾಗೂ ಸಾಮಾಜಿಕ ಜವಾಬ್ದಾರಿಯಂತಹ ಮೌಲ್ಯಗಳನ್ನು ಬೆಳೆಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡುತ್ತಿದ್ದಾರೆ. ಹೀಗಾಗಿ ಶಿಕ್ಷಕರು ದೇಶದ ನಿಜವಾದ ಆಸ್ತಿ ಎಂದು ಗಚ್ಚಿನಮಠದ ಶಿವಬಸವ ಸ್ವಾಮೀಜಿ ಹೇಳಿದರು.
ಅವರು ನಗರದ ಗಚ್ಚಿನಮಠದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಕ್ಕಳಿಗೆ ಮಾನಸಿಕ ಹಾಗೂ ಬೌದ್ಧಿಕವಾಗಿ ಅಕ್ಷರಜ್ಞಾನ ನೀಡುವುದರ ಜತೆಗೆ ಅವರ ವ್ಯಕ್ತಿತ್ವ ವಿಕಸನಕ್ಕೆ ಶಿಕ್ಷಕರು ಶ್ರಮಿಸುತ್ತಿದ್ದಾರೆ. ಶಿಕ್ಷಕರ ಪರಿಶ್ರಮದಿಂದಲೇ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತಿದೆ. ಶಿಕ್ಷಕರು ತಮ್ಮ ವೃತ್ತಿಯನ್ನು ಕೇವಲ ಉದ್ಯೋಗವೆಂದು ಪರಿಗಣಿಸದೆ, ಸಮಾಜಮುಖಿ ಸೇವೆಯಾಗಿ ಸ್ವೀಕರಿಸಿರುವುದು ಶ್ಲಾಘನೀಯವಾಗಿದೆ ಎಂದರು.
ಯುವ ಮುಖಂಡ ಚಿದಾನಂದ ಸವದಿ ಮಾತನಾಡಿ, ಅಥಣಿ ನಗರದಲ್ಲಿ ಎರಡು ಪ್ರೌಢಶಾಲೆಗಳು ಹೊಸದಾಗಿ ಆರಂಭಗೊಂಡಿವೆ. ಕ್ಷೇತ್ರದಲ್ಲಿ ಒಂಬತ್ತು ಪ್ರೌಢಶಾಲೆಗಳಿಗೆ ಸರ್ಕಾರ ಮಂಜೂರಾತಿ ನೀಡಿದ್ದು, ಹೊಸದಾಗಿ 11 ಆಂಗ್ಲ ಮಾಧ್ಯಮ ಸರ್ಕಾರಿ ಶಾಲೆಗಳನ್ನು ಆರಂಭಿಸಲು ಅನುಮತಿ ದೊರೆತಿದೆ. ಗ್ರಾಮೀಣ ಹಾಗೂ ಬಡ ಕುಟುಂಬಗಳ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ರಾಜ್ಯ ಸಂಪನ್ಮೂಲ ವ್ಯಕ್ತಿ ಪ್ರಕಾಶ ಮಾಸ್ತಿಹೊಳಿ ಮಾತನಾಡಿ, ಇಂದಿನ ಬದಲಾಗುತ್ತಿರುವ ಶೈಕ್ಷಣಿಕ ಪರಿಸರದಲ್ಲಿ ಶಿಕ್ಷಕರು ಹೊಸ ಜ್ಞಾನ, ತಂತ್ರಜ್ಞಾನ ಹಾಗೂ ಬೋಧನಾ ವಿಧಾನಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅದನ್ನು ಬೆಳೆಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್. ಮುಂಜಿ ಸ್ವಾಗತಿಸಿದರು. ಎಸ್.ಎನ್. ಕಾಂಬಳೆ ಹಾಗೂ ಸುರೇಶ್ ಅಥಣಿ ನಿರೂಪಿಸಿದರು. ಜಿ.ಎ. ಖೋತ ವಂದಿಸಿದರು.
ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಳೆ, ಉಪಾಧ್ಯಕ್ಷೆ ಭುವನೇಶ್ವರಿ ಯಂಕಚ್ಚಿ, ಮುಖ್ಯಾಧಿಕಾರಿ ಅಶೋಕ ಗುಡಿಮನಿ, ಸಮನ್ವಯಾಧಿಕಾರಿ ಜಿ.ಎನ್. ಖೋತ, ಎಂ.ವಿ. ನಾಮದಾರ, ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಪಂಡಿತ ಮಾಳಿ, ನೌಕರ ಸಂಘದ ತಾಲೂಕು ಅಧ್ಯಕ್ಷ ರಾಮಗೊಂಡ ಪಾಟೀಲ, ಗ್ಯಾರಂಟಿ ಯೋಜನೆ ಅನುಷ್ಠಾನ ತಾಲೂಕು ಅಧ್ಯಕ್ಷ ಸಿದ್ದಾರ್ಥ ಸಿಂಗೆ, ಎಸ್.ಪಿ. ಅಥಣಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕರಿಗೆ ಸನ್ಮಾನ
ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕರನ್ನು ಗೌರವಿಸಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಶಾಲೆಗಳಿಗೆ ಉತ್ತಮ ಶಾಲೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

