ಮುದ್ದೇಬಿಹಾಳ-ತಾಳಿಕೋಟೆ ಬರಪೀಡಿತ ಪ್ರದೇಶವೆಂದು ಘೋಷಿಸಲು ಶಾಸಕ ನಾಡಗೌಡರಿಂದ ಸಿಎಂ ಗೆ ಮನವಿ
ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಮುದ್ದೇಬಿಹಾಳ ಹಾಗೂ ತಾಳಿಕೋಟೆ ಸೇರಿದಂತೆ ವಿಜಯಪುರ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯ ಕೊರತೆಯಿಂದ ರೈತರು ಸಂಕಷ್ಠಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಬರಗಾಲಪೀಡಿತ ಪ್ರದೇಶವೆಂದು ಘೋಷಿಸಿ ಅಗತ್ಯ ಪರಿಹಾರ ಕ್ರಮಗಳನ್ನು ಕೈಕೊಳ್ಳುವಂತೆ ನನ್ನ ಮನವಿಗೆ ಮುಖ್ಯಮಂತ್ರಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ತಿಳಿಸಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಮಳೆ ಪ್ರಮಾಣ ಕಡಿಮೆಯಾಗಿರುವದರಿಂದ ಬೆಳೆಗಳು ಒಣಗುವ ಪರಿಸ್ಥಿತಿ ನಿರ್ಮಾಣವಾಗಿವೆ. ರೈತರು ಆರ್ಥಿಕ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಕೃಷಿ ಚಟುವಟಿಕೆಗೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ ಕುಡಿಯುವ ನೀರಿನ ವ್ಯವಸ್ಥೆ ಜಾನುವಾರುಗಳಿಗೆ ಮೇವು ಹಾಗೂ ಅಗತ್ಯ ಸರ್ಕಾರಿ ನೆರವು ಒದಗಿಸುವಂತೆ ಶಾಸಕರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ.
ಶಾಸಕರ ಮನವಿಯನ್ನು ಗಂಭಿರವಾಗಿ ಪರಿಗಣಿಸಿದ ಮುಖ್ಯಮಂತ್ರಿಯವರು ಪರಿಸ್ಥಿತಿ ಕುರಿತು ಅಗತ್ಯ ಕ್ರಮ ಕೈಕೊಳ್ಳುವ ಭರವಸೆ ನೀಡಿದ್ದಾರೆ. ಬರಗಾಲ ಘೋಷಣೆ ಪಟ್ಟಿಯಲ್ಲಿ ಮುದ್ದೇಬಿಹಾಳ-ತಾಳಿಕೋಟೆ ತಾಲೂಕುಗಳು ಸೇರ್ಪಡೆಗೊಳಿಸುವ ಭರವಸೆ ನೀಡಿದ್ದಾರೆ. ಬರ ಪರಿಸ್ಥಿತಿಯಿಂದ ತೊಂದರೆಗೊಳಗಾದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಸರ್ಕಾರದಿಂದ ಸೂಕ್ತ ನೆರವು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಕೊಳ್ಳಲಾಗುವುದೆಂದು ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆಂದು ಶಾಸಕ ನಾಡಗೌಡ ಅವರು ತಿಳಿಸಿದ್ದಾರೆ.

