ಅಗ್ನಿವೀರ ನೇಮಕಾತಿ ರ್ಯಾಲಿ: ಪೂರ್ವಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಭಾರತೀಯ ಸೇನೆಯ ಅಗ್ನಿವೀರ ನೇಮಕಾತಿ ರ್ಯಾಲಿಯು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ ೧೦ ರಿಂದ ೨೩ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಸೋಮವಾರ ಡಾ.ಬಿ.ಆರ್.ಅಂಬೇಡ್ಕರ ಕ್ರೀಡಾಂಗಣಕ್ಕೆ ಭೇಟಿ ನೀಡಿ ನೇಮಕಾತಿ ರ್ಯಾಲಿಗೆ ಕೈಗೊಳ್ಳಲಾಗಿರುವ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.
ನೇಮಕಾತಿ ರ್ಯಾಲಿಗೆ ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಆಗಮಿಸುವ ನಿರೀಕ್ಷೆಯಿದ್ದು, ಅಭ್ಯರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಅಥವಾ ಅನಾನುಕೂಲವಾಗದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.
ಅಭ್ಯರ್ಥಿಗಳು ನಿಗದಿತ ಸಮಯದಲ್ಲಿ ನೇಮಕಾತಿ ಸ್ಥಳಕ್ಕೆ ತಲುಪಲು ಅನುಕೂಲವಾಗುವಂತೆ ಅಗತ್ಯ ಮಾಹಿತಿ, ಮಾರ್ಗದರ್ಶನ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ಪ್ರಕ್ರಿಯೆಯ ವಿವಿಧ ಹಂತಗಳ ಕುರಿತು ಸ್ಪಷ್ಟ ಮಾಹಿತಿ ದೊರೆಯುವಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.
ನೇಮಕಾತಿ ರ್ಯಾಲಿಯು ಜಿಲ್ಲೆಯ ಪ್ರತಿಷ್ಠಿತ ಕಾರ್ಯಕ್ರಮವಾಗಿದ್ದು, ಭಾರತೀಯ ಸೇನೆಗೆ ಸೇರ್ಪಡೆಯಾಗಲು ಯುವಜನರಿಗೆ ದೊರೆಯುವ ಮಹತ್ವದ ಅವಕಾಶವಾಗಿದೆ. ಆದ್ದರಿಂದ ನೇಮಕಾತಿ ಪ್ರಕ್ರಿಯೆಯು ಯಾವುದೇ ಅಡೆತಡೆಯಿಲ್ಲದೆ, ಪಾರದರ್ಶಕವಾಗಿ ಹಾಗೂ ಸುಗಮವಾಗಿ ನಡೆಯುವಂತೆ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು.
ಅಭ್ಯರ್ಥಿಗಳಿಗೆ ಅಗತ್ಯ ಸಹಕಾರ ಮತ್ತು ಮಾರ್ಗದರ್ಶನ ಒದಗಿಸುವುದರ ಜೊತೆಗೆ, ಸೇನಾ ನೇಮಕಾತಿ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಬೇಕು ಎಂದು ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಮಂಗಳೂರಿನ ಆರ್ಮಿ ರಿಕ್ರೂಟ್ಮೆಂಟ್ ಕಚೇರಿಯ ನಿರ್ದೇಶಕ ಕರ್ನಲ್ ಜಿ. ಸೋಮು ಮಹಾರಾಜನ್, ಅಭಿಜಿತ್ ಸಿಂಗ್, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶಕ ವಿನಯಕುಮಾರ್ ಪಾಟೀಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಲ್ಲನಗೌಡ ಬಿರಾದಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ್ ದೈವಾಡಿ ಸೇರಿದಂತೆ ಅನೇಕರಿದ್ದರು.

