ವಿಜಯಪುರದಲ್ಲಿ ನಡೆದ ಜಿಲ್ಲಾಮಟ್ಟದ ಶಿಕ್ಷಕ ದಿನಾಚರಣೆ ಸಮಾರಂಭ ಉದ್ಘಾಟಿಸಿದ ಎಂಎಲ್ಸಿ ಸುನೀಲಗೌಡ ಪಾಟೀಲ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಶಿಕ್ಷಕ ರಾಷ್ಟ್ರ ರಕ್ಷಕನಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯ ಬಾಳು ಬೆಳಗಲು ಶ್ರಮವಹಿಸುತ್ತಾರೆ. ವಿದ್ಯೆ ನೀಡುವುದು ಪವಿತ್ರ ಕಾರ್ಯವಾಗಿದೆ. ನಮಗೆ ಕಲಿಸಿದ ಗುರುಗಳ ಸ್ಮರಣೆ ಅವಶ್ಯವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.
ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಶಾಲಾಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಾರ್ಯಾಲಯ ಹಾಗೂ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಹಮ್ಮಿಕೊಂಡ ಜಿಲ್ಲಾಮಟ್ಟದ ಶಿಕ್ಷಕ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಶಿಕ್ಷಣದಿಂದಲೇ ಮುಂದೆ ಬರಲು ಸಾಧ್ಯವಾಗುತ್ತದೆ. ಗುರುವಿನ ಕೀರ್ತಿ ಅತ್ಯಂತ ಹಿರಿದಾಗಿದೆ. ಪ್ರತಿಯೊಬ್ಬರೂ ಶಿಕ್ಷಕ ವೃತ್ತಿಗೆ ಗೌರವ ನೀಡುವ ಮೂಲಕ ನಮ್ಮತನ ಹೆಚ್ಚಿಸಿಕೊಳ್ಳಬೇಕೆಂದು ತಿಳಿಸಿದರು.
ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಜಿಪಂ ಮುಖ್ಯಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಶಿಕ್ಷಕ ಸಾಮಾಜಿಕ ಸುಧಾರಣೆಯ ಹರಿಕಾರರಾಗಿದ್ದು, ಪ್ರತಿಯೊಂದು ಕ್ಷೇತ್ರದ ಅಭಿವೃದ್ಧಿಗೆ ಶಿಕ್ಷಣವೇ ಮೂಲಕಾರಣವಾಗಿದೆ. ಅದರ ಕೇಂದ್ರಬಿಂದು ಶಿಕ್ಷಕರಾಗಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಉತ್ತಮವಾಗಿ ಬಂದಿದೆ ಮುಂಬರುವ ದಿನಗಳಲ್ಲಿಯೂ ಉತ್ತಮ ಫಲಿತಾಂಶ ಪಡೆಯಲು ಶ್ರಮಿಸಬೇಕು. ಜಿಪಂ ನಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಗುಳೇದಗುಡ್ಡ, ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಎಲ್ಲ ಜನಪ್ರತಿನಿಧಿಗಳು, ಮೇಲಾಧಿಕಾರಿಗಳು ಸಹಕಾರ ಮಾರ್ಗದರ್ಶನ ನೀಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಗುಣಮಟ್ಟದ ಶಿಕ್ಷಣ ನೀಡುವತ್ತ ಕ್ರಮವಹಿಸಲಾಗುವುದು ಶಿಕ್ಷಕ ದಿನಾಚರಣೆ ಸಮಾರಂಭ ಯಶಸ್ವಿಗೊಳಿಸಿದ ಪ್ರತಿಯೊಬ್ಬರಿಗೂ ದನ್ಯವಾದಗಳು ಎಂದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಡಯಟ್ ಪ್ರಾಚಾರ್ಯರಾದ ಶ್ರೀಮತಿ ಎಸ್ ಎಸ್ ಮುಜಾವರ, ಕಾರ್ಯಕ್ರಮ ಸಂಘಟಕ ನಗರವಲಯದ ಕ್ಷೇತ್ರಶಿಕ್ಷಣಾಧಿಕಾರಿ ರಾಘವೇಂದ್ರ ಹೊಸೂರ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅರ್ಜುನ ಲಮಾಣಿ, ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೆಡಶ್ಯಾಳ ಮಾತನಾಡಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯ ೨೨ ಶಿಕ್ಷಕರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಿವೃತ್ತ ಶಿಕ್ಷಕರು, ನಗರ ವಲಯದ ೧೨ ಶಿಕ್ಷಕರಿಗೆ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಸಮಾರಂಭದಲ್ಲಿ ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ವಸಂತ ಹೊನಮೊಡೆ, ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನಕಾರ್ಯದರ್ಶಿ ಹಣಮಂತ ಕೊಣದಿ, ನಗರ ಘಟಕದ ಅಧ್ಯಕ್ಷ ಜುಬೇರ ಕೆರೂರ, ಪ್ರೌಡಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವರಾಜ ಬಿರಾದಾರ, ಇಓ ನಾಗರಾಜ, ಕಬೂಲ್ ಕೊಕಟನೂರ, ಎಸ್ ಎಸ್ ಬೇನೂರ, ಎಂ ಎಚ್ ನಾಡಗೇರಿ, ಸಿ ಎಚ್ ಬಿರಾದಾರ, ಮಂಜುನಾಥ ಅರೆಶಂಕರ, ಶಿವಾನಂದ ಹಿರೇಕುರುಬರ, ಅಕ್ಕುಬಾಯಿ ನಾಯಕ, ಜಯಶ್ರೀ ಹೂಗಾರ, ಮಲ್ಲನಗೌಡ ಹಡಲಗೇರಿ, ಬಸೀರ ನದಾಫ, ಗಿರೀಶ ಬಿರಾದಾರ, ಎಸ್ ಎನ್ ಪಡಶೆಟ್ಟಿ, ರುದ್ರಮ್ಮ ಗಿಡ್ಡಪ್ಪಗೋಳ, ಸುನೀಲ ಯಳಮೇಲಿ, ಜಮೀರ ನಾಗರಬಾವಡಿ ಸೇರಿದಂತೆ ಜಿಲ್ಲೆಯ ವಿವಿಧ ಬಾಗಗಳಿಂದ ಬಂದ ಶಿಕ್ಷಕ ಸಮುಹ ಉಪಸ್ಥಿತರಿದ್ದರು.

