ದೇವರಹಿಪ್ಪರಗಿ ಹಾಗೂ ತಾಳಿಕೋಟಿ ಬರಗಾಲ ಪೀಡಿತ ತಾಲ್ಲೂಕುಗಳು ಎಂದು ಘೋಷಿಸುವಂತೆ ಆಗ್ರಹ | ಶಾಸಕ ರಾಜುಗೌಡ ಪಾಟೀಲ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ
ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ತಾಳಿಕೋಟಿ ಹಾಗೂ ದೇವರಹಿಪ್ಪರಗಿ ಬರಗಾಲ ಪೀಡಿತ ತಾಲ್ಲೂಕುಗಳು ಎಂದು ಘೋಷಿಸುವಂತೆ ಆಗ್ರಹಿಸಿ ಮಂಗಳವಾರ ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ನೇತೃತ್ವದಲ್ಲಿ ಜನತಾದಳ(ಎಸ್) ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಕೈಗೊಂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಧರಣಿ ಕುಳಿತು ನಂತರ ತಹಶೀಲ್ದಾರ ನಿಂಗಣ್ಣ ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಮಡಿವಾಳ ಮಾಚಿದೇವರ ದೇವಸ್ಥಾನದ ಮುಂದಿನ ಆರ್ಜೆಟಿ ಲೇಔಟ್ನಲ್ಲಿ ಸೇರಿದ ಜನತಾದಳ(ಎಸ್) ಕಾರ್ಯಕರ್ತರು ಮೆರವಣಿಗೆ ಹೊರಟು ಅಂಬೇಡ್ಕರ್ ವೃತ್ತದ ರಾಷ್ಟ್ರೀಯ ಹೆದ್ದಾರಿಯಲ್ಲಿ ಧರಣಿ ಕುಳಿತರು.
ಈ ಸಂದರ್ಭದಲ್ಲಿ ಶಾಸಕ ರಾಜುಗೌಡ ಪಾಟೀಲ ಮಾತನಾಡಿ, ಮತಕ್ಷೇತ್ರ ೪ ತಾಲ್ಲೂಕುಗಳನ್ನು ಒಳಗೊಂಡಿದ್ದು ಇವುಗಳಲ್ಲಿ ಎರಡು ತಾಲ್ಲೂಕುಗಳನ್ನು ಮಾತ್ರ ಬರಪೀಡಿತ ಪ್ರದೇಶಗಳೆಂದೂ ಗುರುತಿಸಿ ದೇವರಹಿಪ್ಪರಗಿ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ನಿರ್ಲಕ್ಷಿಸಿದ್ದಾರೆ. ಇದು ರೈತರಿಗೆ ಮಾಡುತ್ತಿರುವ ಅನ್ಯಾಯ. ಕೂಡಲೇ ಮತಕ್ಷೇತ್ರವನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಬೇಕು. ಪ್ರತಿ ಎಕರೆಗೆ ೨೫ ಸಾವಿರ ರೂ ಪರಿಹಾರ ನೀಡಬೇಕು. ಬೆಳೆಸಾಲ ಮನ್ನಾ, ನೀರು ಪೂರೈಕೆ ಹಾಗೂ ಮೇವು ಬ್ಯಾಂಕ್, ಗೋಶಾಲೆಗಳನ್ನು ಆರಂಭಿಸಬೇಕು. ಹಾಗೂ ಎರಡು ತಾಲ್ಲೂಕು ವ್ಯಾಪ್ತಿಯ ನೀರಾವರಿ ಯೋಜನೆ ಪೂರ್ಣಗೊಳಿಸಲು ಅನುದಾನ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ಉಗ್ರವಾಗಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದರು.
ಮತಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಸಾಯಬಣ್ಣ ಬಾಗೇವಾಡಿ, ಶ್ರೀಶೈಲ ಮುಳಜಿ(ಚಿಕ್ಕರೂಗಿ), ಶಂಕರಗೌಡ ಹಿರೇಗೌಡರ ಮಾತನಾಡಿದರು.
ನಂತರ ಮುಖ್ಯಮಂತ್ರಿಗಳಿಗೆ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಲಾಯಿತು.
ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ರಿಯಾಜ್ ಯಲಗಾರ, ಪಟ್ಟಣ ಪಂಚಾಯಿತಿ ಸದಸ್ಯರಾದ ಕಾಸುಗೌಡ ಬಿರಾದಾರ(ಜಲಕತ್ತಿ), ಶಾಂತಯ್ಯ ಜಡಿಮಠ, ಟಿಪ್ಪು ಕ್ರಾಂತಿಸೇನೆಯ ಮುನೀರ್ ಅಹ್ಮದ್ ಮಳಖೇಡ, ಡಾ.ಆರ್.ಆರ್.ನಾಯಿಕ್, ಸಿ.ಕೆ.ಕುದರಿ, ಸಚೀನಗೌಡ ಪಾಟೀಲ, ಶಾಂತಪ್ಪ ದೇವೂರ, ವೀರೇಶ ಕುದರಿ, ಶ್ರೀಶೈಲ ದೇಸಾಯಿ, ಅರವಿಂದ ನಾಯ್ಕೋಡಿ, ಮಕಬೂಲ್ ಬಾಗವಾನ ಸೇರಿದಂತೆ ರೈತರು ಇದ್ದರು.
ಹೆದ್ದಾರಿ ತಡೆಯಿಂದ ಪ್ರಯಾಣಿಕರ ಪರದಾಟ
ದೇವರಹಿಪ್ಪರಗಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮೇಲೆಯೇ ಮೆರವಣಿಗೆ ಹಾಗೂ ಧರಣಿ ಸುಮಾರು ಒಂದು ಗಂಟೆಗಳ ಕಾಲ ಜರುಗಿತು. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ಕಿಲೋಮೀಟರಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತು ಪ್ರಯಾಣಿಕರು ಪರದಾಡುವಂತಾಯಿತು. ಅದರಲ್ಲೂ ದೂರದೂರಿಗೆ ತೆರಳುವ ಪ್ರಯಾಣಿಕರಂತೂ ಬಸವಳಿದು ಹೋಗಿದ್ದರು.

