ಕಾರ್ಯನಿರತ ಪತ್ರಕರ್ತರ ಸಂಘದ ಸಿಂದಗಿ ತಾಲೂಕು ಘಟಕದಿಂದ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ
ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ವಿರುದ್ಧ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಹೆಸರಿನಲ್ಲಿ ದೂರು ನೀಡಿರುವುದನ್ನು ಖಂಡಿಸಿ, ಬಂಗ್ಲೆ ಮಲ್ಲಿಕಾರ್ಜುನ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಿಂದಗಿ ತಾಲೂಕು ಘಟಕದ ವತಿಯಿಂದ ಮಂಗಳವಾರ ತಹಶೀಲ್ದಾರ್ ಕೆರೆಪ್ಪ ಬೆಳ್ಳಿ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಮಲ್ಲಿಕಾರ್ಜುನ ಅಲ್ಲಾಪುರ, ಸಂಘದ ತಾಲೂಕಾಧ್ಯಕ್ಷ ಮಹಾಂತೇಶ ನೂಲಾನವರ, ಸಂಘದ ಮಾಜಿ ಅಧ್ಯಕ್ಷ ಆನಂದ ಶಾಬಾದಿ ಮಾತನಾಡಿ, ಬಂಗ್ಲೆ ಮಲ್ಲಿಕಾರ್ಜುನ ಅವರು ಚುನಾವಣಾ ಪ್ರಕ್ರಿಯೆಯ ಮೂಲಕ ಆಯ್ಕೆಯಾಗಿರುವ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ವಿರುದ್ಧ ಯಾವುದೇ ಆಧಾರವಿಲ್ಲದ ಆರೋಪಗಳನ್ನು ಮಾಡುತ್ತಾ ದೂರು ನೀಡಿರುವುದು ಖಂಡನೀಯ. ಉದ್ದೇಶಪೂರ್ವಕವಾಗಿ ಸಂಘದ ರಾಜ್ಯಾಧ್ಯಕ್ಷರ ಘನತೆಗೆ ಧಕ್ಕೆ ತರುವ ಪ್ರಯತ್ನ ನಡೆಸಲಾಗುತ್ತಿದೆ. ಆದ್ದರಿಂದ ಬಂಗ್ಲೆ ಮಲ್ಲಿಕಾರ್ಜುನ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಪತ್ರಕರ್ತರ ಹಿತಾಸಕ್ತಿ, ವೃತ್ತಿ ಭದ್ರತೆ ಹಾಗೂ ಶ್ರೇಯೋಭಿವೃದ್ಧಿಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಸಂಘದ ಚುನಾಯಿತ ಪದಾಧಿಕಾರಿಗಳ ವಿರುದ್ಧ ವೈಯಕ್ತಿಕ ದ್ವೇಷ ಅಥವಾ ಸಂಘದ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಆಧಾರರಹಿತ ದೂರುಗಳನ್ನು ನೀಡುವುದನ್ನು ಸಹಿಸಲು ಸಾಧ್ಯವಿಲ್ಲ. ಈ ಕುರಿತು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಶೇಖ, ಉಪಾಧ್ಯಕ್ಷ ಭೀಮು ಕೆಂಭಾವಿ, ಕಾರ್ಯದರ್ಶಿ ನವೀನ ಶೇಳ್ಳಗಿ, ಕಾರ್ಯಕಾರಿ ಸದಸ್ಯ ವಿನಯಕುಮಾರ ಅಗಸರ, ಸಿದ್ದು ಕಡಗಂಚಿ, ಸದಸ್ಯರಾದ ರಾಕೇಶ ಕಂಠಿಗೊಂಡ, ಶಿವಾನಂದ ಆಲಮೇಲ, ಗುಂಡು ಕುಲಕರ್ಣಿ, ಗುರುರಾಜ ಮಠ, ಸುದರ್ಶನ ಜಂಗಣ್ಣಿ, ಶಾಂತವೀರ ಹಿರೇಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.

