ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ | ಕಾನಿಪ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಒತ್ತಾಯ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಬಗ್ಗೆ ಸ್ವಯಂಘೋಷಿತ ಅಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ನೇತೃತ್ವದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಹೆಸರಿನಲ್ಲಿ ದೂರು ನೀಡಿರುವುದನ್ನು ಖಂಡಿಸಿ, ಬಂಗ್ಲೆ ಮಲ್ಲಿಕಾರ್ಜನ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಆಗ್ರಹಿಸಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಮಾತನಾಡಿ, ಬಂಗ್ಲೆ ಮಲ್ಲಿಕಾರ್ಜುನ ಅವರು ಸರ್ಕಾರಿ ಅಧಿಕಾರಿಗೆ ಬೆದರಿಕೆ ಹಾಕಿದ ಬಗ್ಗೆ ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿರಗುಪ್ಪದಲ್ಲೂ ಪೊಲೀಸ್ ಪ್ರಕರಣ ದಾಖಲಾದ ಬಳಿಕ ಊರು ತೊರೆದಿರುತ್ತಾರೆ. ಇತ್ತೀಚೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಘಟನೆಯೊಂದರಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಿ ಬಚಾವ್ ಆಗಿರುವುದು ಹಸಿಹಸಿಯಾಗಿದೆ. ಇಂಥಹ ಹಿನ್ನೆಲೆಯ ಬಂಗ್ಲೆ ಮಲ್ಲಿಕಾರ್ಜುನ ಅವರು, ಚುನಾವಣಾ ಪ್ರಕ್ರಿಯೆ ಮೂಲಕ ಅಯ್ಕೆಯಾಗಿರುವ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಬಗ್ಗೆ ಇಲ್ಲಸಲ್ಲದ ದೂರು ನೀಡಿರುವುದು ಖಂಡನೀಯ. ಕಾರಣ ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಮಾತನಾಡಿ, ಕೆಯುಡಬ್ಲ್ಯೂಜೆ, ಸರ್ಕಾರದ ಅನೇಕ ಕಾರ್ಯಕ್ರಮಗಳಲ್ಲಿ ಸಹಯೋಗ ಹೊಂದಿದ್ದು, ಸರ್ಕಾರದ ಮಾನ್ಯತೆ ಹೊಂದಿರುವ ಪತ್ರಕರ್ತರ
ಏಕೈಕ ಸಂಘಟನೆಯಾಗಿದೆ. ಸಂಘದ ಮತ್ತು ಪತ್ರಕರ್ತರ ಶ್ರೇಯೋಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಅವರ ಮೇಲಿನ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಉದ್ದೇಶಪೂರ್ವಕವಾಗಿ ಅವರ ತೇಜೋವಧೆಗೆ ಮುಂದಾಗಿರುವ ಬಂಗ್ಲೆ ಮಲ್ಲಿಕಾರ್ಜನ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿ ಸದಸ್ಯ ಪ್ರಕಾಶ ಬೆಣ್ಣೂರ, ಜಿಲ್ಲಾ ಉಪಾಧ್ಯಕ್ಷರಾದ ಶಶಿಕಾಂತ ಮೆಂಡೆಗಾರ, ಬಸವರಾಜ ಉಳ್ಳಾಗಡ್ಡಿ, ಸಮೀರ ಇನಾಮದಾರ, ಜಿಲ್ಲಾ ಖಜಾಂಚಿ ರಾಹುಲ ಆಪ್ಟೆ, ಜಿಲ್ಲಾ ಕಾರ್ಯದರ್ಶಿ ಸದ್ದಾಂ ಜಮಾದಾರ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಗುರು ಗದ್ದನಕೇರಿ, ಸಂಜೀವ ಕುಲಕರ್ಣಿ, ಗೋಪಾಲ ಕನಿಮಣಿ, ಶಂಕರ ಜಲ್ಲಿ, ಶಿವಾನಂದ ಶಿವಶರಣ, ಸುರೇಶ ತೇರದಾಳ, ಪ್ರಭು ಕುಮಟಗಿ, ಪತ್ರಕರ್ತರಾದ ಷಡಕ್ಷರಿ ಕಂಪೂನವರ, ಪ್ರದೀಪ್ ಕುಲಕರ್ಣಿ, ಸುನೀಲ ಗೋಡೆನ್ನವರ, ಚಂದ್ರಕಾಂತ ಮಾವೂರ, ರವಿ ಜಹಾಗೀರದಾರ ಸೇರಿದಂತೆ ಹಲವರಿದ್ದರು.

