ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಕ್ಕೆ ಜಿ.ಪಂ. ಸಿಇಒ ರಿಷಿ ಆನಂದ್ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮುಂಬರುವ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಜಲಜೀವನ್ ಮಿಷನ್ ಸೇರಿದಂತೆ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ವಿಜಯಪುರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂದಿನ ೨–೩ ತಿಂಗಳಲ್ಲಿ ಮಳೆ ಕೊರತೆಯಾಗುವ ಸಾಧ್ಯತೆ ಇರುವುದರಿಂದ, ಟಾಸ್ಕ್ ಫೋರ್ಸ್ ಅಡಿಯಲ್ಲಿ ಬಿಡುಗಡೆಯಾದ ಅನುದಾನವನ್ನು ಅಗತ್ಯವಿರುವಲ್ಲಿ ಮಾತ್ರ ಬಳಸಬೇಕು. ಅನಗತ್ಯ ಹೊಸ ಬೋರ್ವೆಲ್ಗಳನ್ನು ಕೊರೆಯಿಸುವುದನ್ನು ನಿಯಂತ್ರಿಸಿ, ತೀವ್ರ ಅಭಾವವಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ವಹಿಸಬೇಕು. ತಾಲೂಕು ಮಟ್ಟದಲ್ಲಿ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಇಂಜಿನಿಯರ್ಗಳು ಹಾಗೂ ತಾಲೂಕು ಪಂಚಾಯತಿ ಇಒಗಳು ಪ್ರತಿ ವಾರ ಜಂಟಿ ಸಭೆ ನಡೆಸಿ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿಯನ್ನು ಜಿಲ್ಲಾ ಪಂಚಾಯತಿಗೆ ಸಲ್ಲಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ೧,೦೦೦ ಜಲಜೀವನ್ ಮಿಷನ್ ಕಾಮಗಾರಿಗಳ ಪೈಕಿ ೮೪೧ ಪೂರ್ಣಗೊಂಡಿದ್ದು, ಬಾಕಿ ಉಳಿದ ಕಾಮಗಾರಿಗಳನ್ನು ಡಿಸೆಂಬರ್ ೨೦೨೬ರೊಳಗೆ ಮುಗಿಸಲು ಸೂಚಿಸಲಾಗಿದೆ. ಜಿಲ್ಲೆಯ ೬೫೪ ಗ್ರಾಮಗಳಲ್ಲಿ ಈಗಾಗಲೇ ೩೬೭ ಗ್ರಾಮಗಳು ‘ಹರ್ ಘರ್ ಜಲ್’ ಆಪ್ನಲ್ಲಿ ಪ್ರಮಾಣೀಕರಿಸಲ್ಪಟ್ಟಿದ್ದು, ಬಾಕಿ ೨೮೭ ಗ್ರಾಮಗಳ ಪ್ರಕ್ರಿಯೆಯನ್ನು ವೇಗಗೊಳಿಸಲು ಇಂಜಿನಿಯರ್ಗಳಿಗೆ ವಾರಕ್ಕೆ ಕನಿಷ್ಠ ಒಂದು ಗ್ರಾಮದ ಗುರಿ ನಿಗದಿಪಡಿಸಲಾಗಿದೆ.
ಇದಲ್ಲದೆ, ಜಿಲ್ಲೆಯ ೪.೬೪ ಲಕ್ಷ ಗ್ರಾಮೀಣ ಮನೆಗಳ ಪೈಕಿ ೪.೧೫ ಲಕ್ಷ ಮನೆಗಳಿಗೆ ಕಾರ್ಯಾತ್ಮಕ ನಳ ಸಂಪರ್ಕ ನೀಡಲಾಗಿದ್ದು, ಬಾಕಿ ಮನೆಗಳಿಗೆ ನಿಗದಿತ ಅವಧಿಯಲ್ಲಿ ಸಂಪರ್ಕ ಕಲ್ಪಿಸುವುದರ ಜೊತೆಗೆ ಫಲಾನುಭವಿಗಳ ಆಧಾರ್ ಮಾಹಿತಿಯನ್ನು ಜೆಜೆಎಂ ತಂತ್ರಾAಶದಲ್ಲಿ ಇಂದೀಕರಿಸಲು ಪಂಚಾಯತಿ ಸಿಬ್ಬಂದಿಗೆ ಸೂಚಿಸಲಾಯಿತು. ಮಳೆ ಅಭಾವದ ಹಿನ್ನೆಲೆಯಲ್ಲಿ ‘ಜಲಧಾರೆ’ ಸ್ಕೀಮ್–೧ ಯೋಜನೆಯ ಕಾಮಗಾರಿಯನ್ನೂ ಸಹ ಡಿಸೆಂಬರ್ ೨೦೨೬ರ ವೇಳೆಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕೆಂದು ಸಿಇಒ ಅವರು ನಿರ್ದೇಶಿಸಿದರು.
ಈ ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ವರ್ಧಮಾನ ಗೊಂಗಡಿ, ವಿವಿಧ ಉಪವಿಭಾಗಗಳ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ಗಳು ಹಾಗೂ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

