ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಹಿರಿಯ ನಾಗರಿಕರ ರಕ್ಷಣೆಗಾಗಿ ಜಾರಿಗೆ ತಂದಿರುವ ೨೦೦೭ರ ಕಾಯ್ದೆ ಜಾರಿಗೆ ತಂದಿದ್ದು, ಈ ಕಾಯ್ದೆ ಮತ್ತು ನಿಯಮಗಳನ್ನು ಹಿರಿಯ ನಾಗರಿಕರು ತಿಳಿದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ ಹೇಳಿದರು.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಹಿರಿಯ ನಾಗರಿಕರ ಕಾಯ್ದೆ -೨೦೦೭, ಹಿರಿಯ ನಾಗರಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಸೈಬರ್ ಮತ್ತು ಡಿಜಿಟಲ್ ವಂಚನೆ ಕುರಿತು ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆದ್ದರಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಹಿರಿಯ ನಾಗರಿಕರಿಗೆ ಇರುವ ಕಾನೂನುಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಬೇಕು ಎಂದರು.
ತಾಲೂಕಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಗುರುಶಾಂತಪ್ಪ ಬೆಳ್ಳುಂಡಗಿ ಮಾತನಾಡಿ, ಹಿರಿಯ ನಾಗರಿಕರಿಗೆ ಇರುವ ಸರ್ಕಾರಿ ಸೌಲಭ್ಯಗಳ ಕುರಿತು ತೊಂದರೆ ಎದುರಾಗದಂತೆ, ಸೌಲಭ್ಯಗಳನ್ನು ತಲುಪಿಸಲು ಹಾಜರಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾದ ಬಾಬು ಅವತಾಡೆ ಮಾತನಾಡಿ, ಹಿರಿಯ ನಾಗರಿಕರ ಕಾಯ್ದೆಯ ಪ್ರಮುಖ ಅಂಶಗಳ ಕುರಿತು, ಆಸ್ತಿ ವರ್ಗಾವಣೆ ಹಾಗೂ ನಿರ್ವಹಣಾ ವೆಚ್ಚಗಳ ಕುರಿತು ಹಾಜರಿದ್ದ ಹಿರಿಯ ನಾಗರಿಕಗೆ ಅರಿವು ಮೂಡಿಸಿದರು,
ನ್ಯಾಯವಾದಿ ಆರ್. ಕೆ. ಪೂಜಾರಿ ಮಾತನಾಡಿ, ಇತ್ತೀಚಿಗೆ ಎದುರಾಗುತ್ತಿರುವ ಡಿಜಿಟಲ್ ವಂಚನೆ ಕುರಿತು ಹಾಗೂ ಹಿರಿಯ ನಾಗರಿಕರಿಗೆ ಇರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ಗುಜ್ಜೂರ ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್.ಪಿ.ಬಿರಾದಾರ, ಎಸ್.ಎಲ್. ಇಂಗಳೇಶ್ವರ, ಜಗದೀಶ ಕೆ. ವಿಜಯಲಕ್ಷ್ಮೀ ಬಾಳಿ ಹಾಗೂ ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು, ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

