ಉದಯರಶ್ಮಿ ದಿನಪತ್ರಿಕೆ
ತಾಳಿಕೋಟೆ: ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಜೆಡಿಎಸ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ನಿಟ್ಟಿನಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ವಿಜಯಪುರ ಜಿಲ್ಲಾ ಜೆಡಿಎಸ್ ಪಕ್ಷದ ವೀಕ್ಷಕರಾದ ಮಲ್ಲಣ್ಣ ತೊರವಿ ಕಾರ್ಯಕರ್ತರಿಗೆ ಕರೆ ನೀಡಿದರು.
ಪಟ್ಟಣದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯ ನೇತೃತ್ವ ವಹಿಸಿ ಮಾತನಾಡಿದ ಅವರು, ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಹಾಗೂ ತಾಳಿಕೋಟೆ ನಗರ ಘಟಕದ ಪಕ್ಷ ಸಂಘಟನೆ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಚಟುವಟಿಕೆಗಳು ಮತ್ತು ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಕಾರ್ಯಕರ್ತರೊಂದಿಗೆ ಚರ್ಚಿಸಿದರು.
ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಗ್ರಾಮೀಣ ಭಾಗದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಪ್ರತಿಯೊಂದು ಗ್ರಾಮದಲ್ಲಿಯೂ ಪಕ್ಷದ ಸಂಘಟನೆಯನ್ನು ಬಲಪಡಿಸಿ, ಕಾರ್ಯಕರ್ತರನ್ನು ಒಗ್ಗೂಡಿಸುವ ಮೂಲಕ ಪಕ್ಷದ ನೆಲೆಯನ್ನು ಮತ್ತಷ್ಟು ವಿಸ್ತರಿಸಬೇಕು ಎಂದು ಅವರು ಸಲಹೆ ನೀಡಿದರು.
ಕಾರ್ಯಕರ್ತರ ಅಭಿಪ್ರಾಯಗಳಿಗೆ ಸ್ಪಂದಿಸಿದ ಮಲ್ಲಣ್ಣ ತೊರವಿ ಅವರು, ಪಕ್ಷದ ಜಿಲ್ಲಾಧ್ಯಕ್ಷರೊಂದಿಗೆ ಚರ್ಚಿಸಿ, ಕಾರ್ಯಕರ್ತರ ಒಮ್ಮತದ ಅಭಿಪ್ರಾಯ ಹಾಗೂ ಪಕ್ಷದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಸಂಘಟನಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಭೆಯಲ್ಲಿ ತಾಳಿಕೋಟೆ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಪ್ರಲ್ಹಾದಸಿಂಗ್ ಹಜೇರಿ, ತಾಲೂಕು ಅಧ್ಯಕ್ಷ ಮಡುಸಾಹುಕಾರ ಬಿರಾದಾರ, ಶ್ರೀಮತಿ ಮಹಾದೇವಿ ಪಾಟೀಲ, ಉಪಾಧ್ಯಕ್ಷ ಶರಣಗೌಡ ಪಾಟೀಲ, ಮಲ್ಲನಗೌಡ ಪಾಟೀಲ, ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

